ಆರೋಗ್ಯ ಇಲಾಖೆಯಿಂದ ಜಾಗೃತಿ
Team Udayavani, Feb 8, 2020, 1:12 PM IST
ಹೊಸಕೋಟೆ: ನಗರದ ವ್ಯಾಪ್ತಿಯಲ್ಲಿ ಡೆಂಗೆ, ಚಿಕೂನ್ ಗುನ್ಯಾ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ: ಧರ್ಮೇಂದ್ರ ಪರಿಶೀಲಿಸಿದರು. ಅವರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಪರಿಶೀಲಿಸಿ ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂಆಶಾ ಕಾರ್ಯಕರ್ತೆಯರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರಗಳಂದು ಅವರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿನ ಮನೆಗಳಿಗೆ ಭೇಟಿ ನೀಡಿ ನೀರು ಸಂಗ್ರಹಣೆಗಾಗಿ ಅಳವಡಿಸಿಕೊಂಡಿರುವ ವಿಧಾನಗಳನ್ನು ಪರಿಶೀಲಿಸುತ್ತಿದ್ದಾರೆ. ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಿ, ಯಾವುದೇ ತರಹವಾದ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ತೋರದೆ ವೈದ್ಯರಲ್ಲಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವಂತೆ ಸೂಕ್ತ ತಿಳಿವಳಿಕೆ ನೀಡಲಾಗುತ್ತಿದೆ. ಮನೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ, ಕೊಳಚೆ ನೀರು ನಿಲ್ಲುವುದನ್ನು ತಡೆಗಟ್ಟಿ ಸ್ವಚ್ಛತೆ ಕಾಪಾಡಿಕೊಂಡು ಸಾಂಕ್ರಾಮಿಕ ರೋಗಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂಬ ಅಂಶಗಳನ್ನು ಮನವರಿಕೆ ಮಾಡಿಕೊಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕೀಟ ಶಾಸ್ತ್ರಜ್ಞೆ ಲತಾ, ಜಿಲ್ಲಾ ಆರೋಗ್ಯ ಸಹಾಯಕ ಚಂದ್ರಪ್ಪ, ತಾಲೂಕು ಆರೋಗ್ಯ ಸಹಾಯಕ ರವಿಕುಮಾರ್ ಭಾಗವಹಿಸಿದ್ದರು.