ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನ ಸಹಕಾರಿ: ಶಾಸಕ
Team Udayavani, Aug 9, 2020, 10:31 AM IST
ಸಾಂದರ್ಭಿಕ ಚಿತ್ರ
ಹೊಸಕೋಟೆ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನ ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ನಗರದ ಕನಕ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ರಕ್ತದ ಕೊರತೆ ನಿವಾರಿಸುವಲ್ಲಿ ಯುವಕರು ಪ್ರಮುಖ ಪಾತ್ರ ವಹಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರೇತರ ಸಂಸ್ಥೆಗಳು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ ಎಂದರು.
ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕಾಂತರಾಜ್, ಜನರಲ್ಲಿ ರಾಷ್ಟ್ರಾಭಿಮಾನ ಮೂಡಿಸಲು, ರಕ್ತದಾನದಂತಹ ಸಾಮಾಜಿಕ ಉಪಯುಕ್ತ ಸೇವಾ ಕಾರ್ಯಗಳಲ್ಲಿ ತೊಡಗಲು ಪ್ರೇರಣೆ ನೀಡುವ ಉದ್ದೇಶದಿಂದ ಗ್ರಾಮಾಂತರ ಜಿಲ್ಲೆಯಾದ್ಯಂತ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ತಾಪಂ ಅಧ್ಯಕ್ಷ
ವಿ.ಸಿ.ಜಯದೇವಯ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಕೆ. ಸತೀಶ್, ಟೌನ್ ಅಧ್ಯಕ್ಷ ಸಿ.ಜಯರಾಜ್, ಯುವ ಮೋರ್ಚಾ ಅಧ್ಯಕ್ಷರಾದ ಆರ್.ರಾಮು, ಎಚ್. ಕೆ.ಸಂದೀಪ್ ಮತ್ತಿತರರಿದ್ದರು. ಶಿಬಿರದಲ್ಲಿ ದಾನಿಗಳಿಂದ ಸಂಗ್ರಹಣೆಯಾದ ಒಟ್ಟು 450 ಯೂನಿಟ್ಗಳನ್ನು ರಾಷ್ಟ್ರೋತ್ಥಾನ ರಕ್ತನಿಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.