ಅಭ್ಯರ್ಥಿಗಳ ಪರ ಘಟಾನುಘಟಿಗಳ ಪ್ರಚಾರ
Team Udayavani, Apr 11, 2019, 3:00 AM IST
ದೇವನಹಳ್ಳಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಅಖಾಡ ರಂಗೇರಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳು ಬರಲಿವೆ. ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಯುಗಾದಿ ಹಬ್ಬದ ಬಳಿಕ ಪ್ರಚಾರದ ಅಬ್ಬರ ಹೆಚ್ಚಾಗಿದೆ. ಮತ ಬೇಟೆಗಾಗಿ ಪೈಪೋಟಿ ಹೆಚ್ಚಾಗಿದೆ.
ಕೃಷ್ಣ, ದೇವೇಗೌಡ, ಸಿದ್ಧರಾಮಯ್ಯ ಪ್ರಚಾರ: ಸೋಮವಾರವಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡರ ಪರವಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಾಲೂಕಿನ ಚಪ್ಪರದಕಲ್ಲು ಮತ್ತು ಆವತಿ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು.
ಮಂಗಳವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಂಟಿಯಾಗಿ ಪ್ರಚಾರ ನಡೆಸಿದರು.
ತಂದೆಯ ಪರ ಮಕ್ಕಳ ಪ್ರಚಾರ: ಬುಧವಾರ ವಿಜಯಪುರ ನಗರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸಹ ಪ್ರಚಾರದಲ್ಲಿ ತೊಡಗಿದ್ದರು. ಈಗಾಗಲೇ ಅಭ್ಯರ್ಥಿಗಳು 4 ತಾಲೂಕುಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ನಗರ ಮತ್ತು ಗ್ರಾಮಗಳಲ್ಲಿ ತಂದೆಯ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ತಂದೆಯ ಪರವಾಗಿ ಪ್ರಚಾರ ಮಾಡಿದರು. ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಅಭ್ಯರ್ಥಿ ಪ್ರಚಾರ ನಡೆಸಿದರು.
ರಂಗೇರಿದ ಚುನಾವಣಾ ಕಣ: ಮಂಕು ಕವಿದಿದ್ದ ಪ್ರಚಾರ ಹಬ್ಬದ ನಂತರ ಚುರುಕುಗೊಂಡಿದೆ. ಚುನಾವಣಾ ಕಣದಲ್ಲಿ ಬಿಎಸ್ಪಿ, ಸಿಪಿಎಂ, ಕೆಜೆಪಿ ಪಕ್ಷಗಳ ಅಭ್ಯರ್ಥಿಗಳು ಇದ್ದಾರೆ. ಆದರೆ, ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದೆ.
ನಾಮಪತ್ರ ಸಲ್ಲಿಸಿದ ನಂತರ ಇಲ್ಲಿಯವರೆಗೂ ಕ್ಷೇತ್ರದಲ್ಲಿ ಸ್ಟಾರ್ ಪ್ರಚಾರಕರಾಗಲಿ ಅಥವಾ ಪಕ್ಷಗಳ ಘಟಾನುಘಟಿಗಳು ಪ್ರಚಾರಕ್ಕೆ ಬಾರದ್ದರಿಂದ ಚುನಾವಣಾ ಕಣಕ್ಕೆ ಮಂಕು ಕವಿದಿತ್ತು. ಈಗಾಗಲೇ ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಬಿಸಿಲನ್ನೂ ಲೆಕ್ಕಿಸದೆ ವಿವಿಧ ರೀತಿಯಲ್ಲಿ ಭರದ ಪ್ರಚಾರ ನಡೆಯುತ್ತಿದೆ.
ಚುನಾವಣೆಗೆ ಇನ್ನು 10 ದಿನಗಳು ಬಾಕಿ ಇರುವುದರಿಂದ ಅಭ್ಯರ್ಥಿಗಳು ಮತಕ್ಕಾಗಿ ಅನೇಕ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿ ದ್ವಾರಕಾನಾಥ್ ಮತ್ತು ಸಿಪಿಎಂ ಅಭ್ಯರ್ಥಿ ವರಲಕ್ಷ್ಮೀ, ಕೆಜೆಪಿ ಅಭ್ಯರ್ಥಿ ನಾಗೇಂದ್ರ ರಾಮ್ ಶಿಂಧೆ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.
ಮತದಾರರ ನಾಡಿ ಮಿಡಿತ ನಿಗೂಢ: ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಲು ಘಟಾನುಘಟಿ ನಾಯಕರು ಜಿಲ್ಲೆಯಲ್ಲಿ ಸಭೆ, ಸಮಾರಂಭ, ರೋಡ್ ಶೋ ಮುಂತಾದವುಗಳ ಮೂಲಕ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಪ್ರಚಾರದ ವೇಳೆ ಮತದಾರರನ್ನು ಸೆಳೆಯಲು ಇನ್ನಿಲ್ಲದ ಆಶ್ವಾಸನೆ, ಘೋಷಣೆ, ಭರವಸೆಗಳನ್ನು ಮೊಳಗಿಸುತ್ತಿದ್ದಾರೆ. ಆದರೆ, ಮತದಾರ ಪ್ರಭುವಿನ ನಾಡಿ ಮಿಡಿತ ಮಾತ್ರ ಇನ್ನೂ ನಿಗೂಢವಾಗಿದೆ. ಯಾವ ಪಕ್ಷದ ಅಭ್ಯರ್ಥಿಗೆ ವಿಜಯ ಮಾಲೆ ಪ್ರಾಪ್ತವಾಗುತ್ತದೆ ಎಂಬುದು ಮಾತ್ರ ತೀವ್ರ ಕುತೂಹಲ ಕೆರಳಿಸಿದೆ.
* ಎಸ್ ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ