ಜನರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ
Team Udayavani, Feb 28, 2021, 11:51 AM IST
ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪ್ರತಿ ಜನರಿಗೆ ಮನದಟ್ಟು ಮಾಡಿ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೂಗೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ತಿಳಿಸಿದರು.
ನಗರದ ಬಿಬಿಲ್ಲಿರುವ ಡಿಎಚ್ಎಲ್ ಫಂಕ್ಷನ್ ಹಾಲ್ನಲ್ಲಿ ದೇವನಹಳ್ಳಿ, ವಿಜಯಪುರ ತೂಬಗೆರೆ ಬ್ಲಾಕ್ ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಜನಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನದಟ್ಟುಮಾಡಿ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಮಾ.3ರಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜನಧ್ವನಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಗಾಯದ ಮೇಲೆ ಬರೆ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯಿಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇದ್ದರೆ ಮಾತ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ಪರ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಎತ್ತಿನಹೊಳೆ ಯೋಜನೆಯನ್ನುಜಾರಿಗೆ ತರುವುದರ ಮೂಲಕ ಈ ಭಾಗದ ಜನರಿಗೆ ನೀರು ಕೊಡುವ ಕೆಲಸಕ್ಕೆ ಚಾಲನೆ ನೀಡಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿ ಬಡ ಜನತೆಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ. ಮಾಜಿ ಶಾಸಕ ಮುನಿ ನರಸಿಂಹಯ್ಯ , ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ, ಪ್ರಧಾನ ಕಾರ್ಯದರ್ಶಿ ಎಸ್.ಪಿ. ಮುನಿರಾಜು, ಜಿಪಂ ಅಧ್ಯಕ್ಷ ವಿ.ಪ್ರಸಾದ್, ಸದಸ್ಯಕೆಸಿ ಮಂಜುನಾಥ್, ಅನಂತಕುಮಾರಿ, ರಾಧಮ್ಮ, ಚಿನ್ನಪ್ಪ, ಚೇತನ್ಗೌಡ, ಮಂಜುನಾಥ್ ಮತ್ತಿತರರು ಇದ್ದರು.
ರೈತರ ಬದುಕಿನ ಜೊತೆ ಚೆಲ್ಲಾಟ :
ಬಯಲು ಸೀಮೆಯ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎತ್ತಿನ ಹೊಳೆ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗಿನ ಬಿಜೆಪಿ ಸರ್ಕಾರ ಬಂದ ಮೇಲೆ ನಯಾ ಪೈಸೆ ಅನುದಾನ ನೀಡಿಲ್ಲ. ಯೋಜನೆ ಕುಂಠಿತಗೊಂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎತ್ತಿನ ಹೊಳೆಯೋಜನೆ ಹಾಗೂ ಎಚ್ಎನ್ ವ್ಯಾಲಿ ನೀರನ್ನು ದೇವನಹಳ್ಳಿಯ ಎಲ್ಲ ಕೆರೆಗಳಿಗೆ ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ರೈತರ ಬದುಕಿನ ಜೊತೆ ಬಿಜೆಪಿ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಹೇಳಿದರು.
ಸುಳ್ಳು ಭರವಸೆಯ ಸರ್ಕಾರ :
ಮೋದಿ ಸರ್ಕಾರ ಆಡಳಿತಕ್ಕೆ ಬರುವ ಮುನ್ನ ಪ್ರತಿ ವರ್ಷ 2 ಕೋಟಿ ಉದ್ಯೋಗ, ಕಪ್ಪು ಹಣ ತರುತ್ತೇವೆ. ಹೀಗೆ ಹಲವಾರು ರೀತಿಯ ಸುಳ್ಳು ಭರವಸೆ ನೀಡಿದ್ದಾರೆ. ಅಂದಾನಿ ಅಂಬಾನಿ ಉದ್ಯಮಿ ಗಳಿಗೆ ಸರ್ಕಾರ ಅನುಕೂಲ ಮಾಡುತ್ತಿದೆ. ರಾಜ್ಯ ಬಿಜೆಪಿ
ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಬೇಕು. ರೈತರು ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದರೂ, ಕೇಂದ್ರ ಸರ್ಕಾರ ಕುಂಬಕರ್ಣ ನಿದ್ದೆಯಲ್ಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.