ಕೃಷಿ ಬಗ್ಗೆ ರೈತರಿಗೆ ಅರಿವು ಮೂಡಿಸಿ
Team Udayavani, Mar 10, 2019, 7:48 AM IST
ದೊಡ್ಡಬಳ್ಳಾಪುರ: ಇಂದಿನ ಯುವ ಪೀಳಿಗೆ ಕೃಷಿಯಿಂದ ವಿಮುಖರಾಗುತ್ತಿ ರುವುದು ಆತಂಕಕಾರಿ ಸಂಗತಿ. ಈ ದಿಸೆಯಲ್ಲಿ ರೈತರಿಗೆ ಸರ್ಕಾರದ ಯೋಜ ನೆಗಳ ಕುರಿತು ಮಾಹಿತಿ ನೀಡುವುದು ಹಾಗೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ದ ಅಳವಡಿಕೆ ಲಾಭದಾಯಕ ಎಂಬು ದನ್ನು ಮನದಟ್ಟು ಮಾಡಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಸಕ್ರಿಯವಾಗಬೇ ಕೆಂದು ಸಂಸದ ಎಂ.ವೀರಪ್ಪ ಮೊಯ್ಲಿ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕು ಹಾಡೋ ನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಆವರಣ ದಲ್ಲಿ ನಡೆದ 2018-19ನೇ ಸಾಲಿನ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯ ಕಿಸಾನ್ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಬಗ್ಗೆ ಒಲವು ಅಗತ್ಯ: ಈ ಭೂಮಿಯನ್ನು ಪ್ರೀತಿಸುವವನೇ ನಿಜವಾದ ದೇಶಪ್ರೇಮಿ. ಕೃಷಿಯ ಬಗ್ಗೆ ಒಲವು ಮೂಡಿಸಿಕೊಳ್ಳಬೇಕಿದೆ. ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರು ನೀರಿಲ್ಲದೇ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ದೃಷ್ಟಿಯಿಂದ ರೂಪಿಸಿರುವ ಶಾಶ್ವತ ನೀರಾವರಿ ಕಲ್ಪಿಸುವ ಎತ್ತಿನಹೊಳೆ ಯೋಜನೆ ಪ್ರಗತಿಯಲ್ಲಿದೆ. ಭೂಮಿ ಕಳೆದುಕೊಂಡ ರೈತರಿಗೆ ಒಂದಕ್ಕೆ ಮೂರು ಪಟ್ಟು ಪರಿಹಾರ ನೀಡಲಾಗುತ್ತಿದೆ. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದ್ದರಿಂದ ಯೋಜನೆ ಪೂರ್ಣಗೊಳ್ಳಲು ತಡವಾಗಲಿದೆ. ಇನ್ನೆರಡು ವರ್ಷಗಳಲ್ಲಿ ಎತ್ತಿನಹೊಳೆಯಿಂದ ಈ ಭಾಗದ ಕೆರೆಗಳು ತುಂಬಲಿವೆ ಎಂದು ಹೇಳಿದರು.
ಕೆ.ಸಿ.ವ್ಯಾಲಿ ಯೋಜನೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಗೆ ಕೆ.ಸಿ.ವ್ಯಾಲಿ ಯೋಜನೆ ಹಾಗೂ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕುಗಳಿಗೆ ವೃಷಭಾವತಿ, ನಾಯಂಡ ಹಳ್ಳಿಯಿಂದ ಶುದ್ಧೀಕರಿಸಿದ ನೀರು ಹರಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಾಗೂ ಈಗಿನ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿ ಅನ್ನದಾತರಿಗೆ ನೆರವಾಗಿವೆ. ಕೃಷಿ ವಿಶ್ವವಿದ್ಯಾನಿಲಯ ಹಾಗೂ ಕೃಷಿ ವಿಜ್ಞಾ ನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಚಟುವಟಿಕೆ ಗಳನ್ನು ಶ್ಲಾಘಿಸಿದ ಅವರು, ರೈತರು ಸರ್ಕಾರದಿಂದ ಸೌಲಭ್ಯಗಳನ್ನು ಉಪ ಯೋಗಿಸಿಕೊಳ್ಳ ಬೇಕಾದರೆ ಸರಕು ಆಧಾ ರಿತ ಸಂಘಗಳನ್ನು ಸ್ಥಾಪಿಸಬೇಕೆಂದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಎ.ಗಿರೀಶ್ ಪ್ರಸ್ತಾವಿಕವಾಗಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇ.80 ಮಳೆ ಆಶ್ರಿತವಾಗಿದೆ. ಸರ್ಕಾರದಿಂದ ಕೃಷಿ ಭಾಗ್ಯ, ಕೃಷಿ ಅಭಿಯಾನ, ಆತ್ಮ ಯೋಜನೆ ಮೊದಲಾಗಿ ರೈತರಿಗೆ ನೆರವಾಗುವ ಯೋಜನೆಗಳನ್ನು ರೂಪಿಸಲಾಗಿದೆ. ಹೊಸ ತಾಂತ್ರಿಕತೆಪರಿಚಯಿಸಲಾಗುತ್ತಿದೆ. ಬರಪೀಡಿತ ಪ್ರದೇಶದಲ್ಲೂ ರೈತರು ಉತ್ತಮ ಬೆಳೆ ಬೆಳೆದು, ಕೃಷಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ರೈತರು ಇಲಾಖೆಯ ಸವಲತ್ತುಗಳನ್ನು ಬಳಸಿ ಕೊಳ್ಳಬೇಕೆಂದು ತಿಳಿಸಿದರು.
ಪ್ರಶಸ್ತಿ ಪ್ರದಾನ: ಕಾರ್ಯಕ್ರಮದಲ್ಲಿ ಆತ್ಮ ಯೋಜನೆಯಡಿ ಕೃಷಿಯಲ್ಲಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿರುವ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನಗೌಡ, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಜಯರಾಮ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರುದ್ರೇಶ್, ಕೃಷಿ ಇಲಾಖೆ ಉಪ ನಿರ್ದೇಶಕರಾದ ಎಂ.ಸಿ.ವಿನುತಾ, ಹಾಡೋನಹಳ್ಳಿ ಗ್ರಾಪಂ ಅಧ್ಯಕ್ಷ ನಾರಾಯಣಪ್ಪ ಸೇರಿದಂತೆ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ, ಕೃಷಿ ಇಲಾಖೆ ಸಿಬ್ಬಂದಿ, ಆತ್ಮ ಯೋಜನೆ, ಇತರೆ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು.
ಕಿಸಾನ್ ಮೇಳದಲ್ಲಿ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ರೈತ-ವಿಜ್ಞಾನಿ ಸಂವಾದ ಕಾರ್ಯ ಕ್ರಮದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಸ್ಯ ಸಂರಕ್ಷಣಾ ಕ್ರಮಗಳು ಹಾಗೂ ಮಣ್ಣಿನ ಮಹತ್ವ ಮತ್ತು ಗುಣಧರ್ಮಗಳ ಕುರಿತು ಮಾಹಿತಿ ನೀಡಲಾಯಿತು.