ಕಸ ಮುಕ್ತ ಜಿಲ್ಲೆಯಾಗಿಸಿ:ಅಂಜುಂ ಪರ್ವೇಜ್
Team Udayavani, Feb 7, 2020, 5:01 PM IST
ದೇವನಹಳ್ಳಿ: ಜಿಲ್ಲೆಯಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಕೈ ಗೊಂಡಿರುವ ಕ್ರಮಗಳು ಹಾಗೂ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ಜಿಲ್ಲೆಯನ್ನು ಕಸ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕುವಾರು ಘನ ತ್ಯಾಜ್ಯನಿರ್ವಹಣಾ ಘಟಕಕ್ಕೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ತ್ಯಾಜ್ಯ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಪ್ರತಿ ನಿತ್ಯ ಪಟ್ಟಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವ ಕಸದ ಪ್ರಮಾಣ, ಅದರ ವಿಲೇವಾರಿಗೆ ಕೈ ಗೊಂಡಿರುವ ಕ್ರಮಗಳ ಕುರಿತು ಪುರಸಭೆ ಮತ್ತು ನಗರ ಸಭೆ ಅಧಿಕಾರಿಗಳಿಂದ ಮಾಹಿತಿಯನ್ನು ಕ್ರೋಡಿಕರಿಸುತ್ತಿದ್ದೇನೆ ಎಂದು ತಿಳಿಸಿದರು.
ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಅದರ ಮರು ಬಳಕೆಗೆ ಕ್ರಮ ವಹಿಸಬೇಕು. ತ್ಯಾಜ್ಯ ಘಟಕಗಳಲ್ಲಿ ಸಮಸ್ಯೆ ಗಳು ಇದ್ದಲ್ಲಿ , ಕೂಡಲೇ ಬಗೆಹರಿಸಿಕೊಳ್ಳಬೇಕು. ತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆ ಕುರಿತಂತೆ ಅಧಿಕಾರಿಗಳು ಸಂಬಂಧಿಸಿದ ಇಲಾಖೆಯ ವೆಬ್ಸೈಟ್ ನಲ್ಲಿ ಮಾಹಿತಿಯನ್ನು ಅಪ್ಲೋಡ್ ಮಾಡ ಬೇಕೆಂದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ ನಾಯಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕಿ ಸುಮಾ, ನೋಡಲ್ ಅಧಿಕಾರಿ ರವಿಕುಮಾರ್, ಜಿಲ್ಲೆಯ ನಗರ ಸಭೆ, ಪುರಸಭೆ, ಮುಖ್ಯಾಧಿಕಾರಿ, ಪೌರಾಯುಕ್ತರು ಇದ್ದರು.