ಪುರಸಭೆ ಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
Team Udayavani, May 6, 2019, 3:00 AM IST
ದೇವನಹಳ್ಳಿ: ಲೋಕಸಭಾ ಚುನಾವಣೆ ಮುಗಿದು ಫಲಿತಾಂಶಕ್ಕೆ ಕಾಯುತ್ತಿರುವಾಗಲೇ ಪುರಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜೂನ್, ಜುಲೈನಲ್ಲಿ ಪುರಸಭೆ ಚುನಾವಣೆ ನಿಗದಿಯಾಗುತ್ತದೆ ಎಂದು ನಿರಾಳರಾಗಿದ್ದ ಮುಖಂಡರು, ದಿಢೀರ್ ಚುನಾವಣೆ ಘೋಷಣೆಯಾಗಿದ್ದರಿಂದ ಮೈಗೊಡವಿಕೊಂಡು ಎದ್ದೇಳುವಂತೆ ಮಾಡಿದೆ.
ಖಾತೆ ತೆರೆಯಲು ಸಜ್ಜಾದ ಬಿಜೆಪಿ: ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕಾದ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್, ಜೆಡಿಎಸ್ ಮಧ್ಯೆ ಪೈಪೋಟಿ ಇದ್ದು, ಈ ಬಾರಿ ಬಿಜೆಪಿ ಖಾತೆ ತೆರೆಯಲು ಸಜ್ಜಾಗಿದೆ.
ಕಾಂಗ್ರೆಸ್, ಜೆಡಿಎಸ್ ಹಣಾಹಣಿ ಸಾಧ್ಯತೆ: ತಾಲೂಕಿನಲ್ಲಿ ಕಾಂಗ್ರೆಸ್, ಜೆಡಿಎಸ್ ಸಾಂಪ್ರದಾಯಿಕ ಎದುರಾಳಿಗಳು ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಕೈ ಕುಲುಕಿಕೊಂಡು, ಹಾರ, ತುರಾಯಿ ಹಾಕಿಕೊಂಡವರ ನಡುವೆ ಹಣಾಹಣಿ ಜೋರಾಗಿ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ: ಈಗಾಗಲೇ ದೇವನಹಳ್ಳಿಯ 23ವಾರ್ಡ್ಗಳಲ್ಲಿ ಆಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಒಂದೊಂದು ವಾರ್ಡ್ನಲ್ಲಿ 2ರಿಂದ 3, 4ಮಂದಿ ಆಕಾಂಕ್ಷಿಗಳು ಇದ್ದಾರೆ ಎನ್ನಲಾಗುತ್ತಿದೆ. ಕಳೆದ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 10, ಜೆಡಿಎಸ್ 9, 4 ಮಂದಿ ಪಕ್ಷೇತರರು ಗೆದಿದ್ದರು. ಹಾಲಿ ಪುರಸಭಾ ಕೆಲವು ಸದಸ್ಯರಿಗೆ ವಾರ್ಡ್ಗಳ ಮೀಸಲಾತಿ ಬದಲಾಗಿರುವುದರಿಂದ ಕ್ಷೇತ್ರವನ್ನು ಹುಡುಕುವಂತಾಗಿದೆ.
ಆಕಾಂಕ್ಷಿಗಳು ಚುನಾವಣೆ ಘೋಷಣೆ ಆದ ಬೆನ್ನಲ್ಲೇ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಟಿಕೆಟ್ಗೆ ದುಂಬಾಲು ಬೀಳುವಂತಾಗಿದೆ. ಬಿಜೆಪಿಯಿಂದಲೂ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಅದಕ್ಕಾಗಿ, ಮುಖಂಡರು ಸೋಮವಾರ ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಅಮಾವಾಸ್ಯೆ ಮತ್ತು ಪಾಡ್ಯಮಿ ಇರುವುದರಿಂದ ಸೋಮವಾರದಿಂದ ಸಭೆಗಳನ್ನು ಮಾಡಿ ಪುರಸಭೆ ಚುನಾವಣೆಗೆ ತಯಾರಿ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಆಕಾಂಕ್ಷಿಗಳು ಮತ್ತು ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಶಾಸಕರ ನೇತೃತ್ವದಲ್ಲಿ ಕರೆಯಲಾಗಿದೆ ಎಂದು ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ ಹೇಳಿದ್ದಾರೆ. ಸೋಮವಾರ ಕಾಂಗ್ರೆಸ್ನ ಸಭೆ ಕರೆಯಲಾಗಿದೆ. ದೇವನಹಳ್ಳಿ ನಗರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸ ಹಾಗೂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ ಎಂದು ಪುರಸಭಾ ಮಾಜಿ ಅಧ್ಯಕ್ಷ ಎಂ.ಮೂರ್ತಿ ಹೇಳುತ್ತಾರೆ.
ಕದನ ಕುತೂಹಲ: ಮಾರ್ಚ್ 14ರಂದು ಪುರಸಭೆ ಅಧಿಕಾರವಧಿ ಮುಗಿದಿತ್ತು. ದಿಢೀರ್ ಚುನಾವಣೆ ಘೋಷಣೆ ಆಗಿರುವುದರಿಂದ ಮುಖಂಡರು ಹಾಗೂ ಕಾರ್ಯಕರ್ತರು ಅನಿವಾರ್ಯವಾಗಿ ಚುನಾವಣೆ ಎದುರಿಸುವಂತಾಗಿದೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ ಕೆಲವೆಡೆ ಸಾರ್ವಜನಿಕರು ಯಾವ ಯಾವ ಪಕ್ಷದಲ್ಲಿ ಆಕಾಂಕ್ಷಿಗಳು ಇದ್ದಾರೆ ಎಂಬುದರ ಬಗ್ಗೆ ಗಹನ ಚರ್ಚೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಹಾಗಾಗಿ, ಚುನಾವಣೆ ಘೋಷಣೆ ಆದ ಕೂಡಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದಂತಾಗಿವೆ.
ಕಳೆದ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 10, ಜೆಡಿಎಸ್ 9 ಹಾಗೂ 4ಮಂದಿ ಪಕ್ಷೇತರರು ಗೆಲವು ಸಾಧಿಸಿದ್ದರಿಂದ ಯಾವುದೇ ಪಕ್ಷಕ್ಕೂ ಬಹುಮತ ಸಿಗದ ಕಾರಣ 2ಪಕ್ಷಗಳು ಸೇರಿ ಅಧಿಕಾರ ನಡೆಸಿದ್ದವು. ಈ ಬಾರಿಯ ಕದನ ಕುತೂಹಲಕ್ಕೆ ಮೇ 31ರಂದು ಹೊರಬೀಳುವ ಪುರಸಭಾ ಚುನಾವಣಾ ಫಲಿತಾಂಶದೊಂದಿಗೆ ತೆರೆಬೀಳಲಿದೆ.
* ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…