ರಸ್ತೆ ಡಾಂಬರೀಕರಣ ಸ್ಥಗಿತಕ್ಕೆ ಸೂಚನೆ
Team Udayavani, Mar 29, 2019, 1:07 PM IST
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಎಂ.ಎ.ಪ್ರಕಾಶ್ ಬಡಾವಣೆಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಕರೀಗೌಡ ಅವರು ದಿಢೀರ್ ಭೇಟಿ ನೀಡಿ, ಕಾಮಗಾರಿ ಗುಣಮಟ್ಟ ಪರಿಶೀಲಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ಡಾಂಬರೀಕರಣ ತೀರಾ ಕಳಪೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಹಾಗೂ ಈಗ ನಡೆದಿರುವ ಕಾಮಗಾರಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ನಗರೋತ್ಥಾನ ಯೋಜನೆಯಡಿ ಈಗ ನಡೆಯುತ್ತಿರುವ ಬಹುತೇಕ ಕಾಮಗಾರಿಗಳ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಅದರಲ್ಲೂ ಖಾಸ್ಭಾಗ್, ದರ್ಗಾಪುರ, ಪ್ರಕಾಶ್ ಬಡಾವಣೆ ಭಾಗಗಳಲ್ಲಿ ನಡೆಯುತ್ತಿರುವ ಚರಂಡಿ, ಕಾಂಕ್ರೀಟ್ ರಸ್ತೆ ಹಾಗೂ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅತ್ಯಂತ ಕಳಪೆಯಾಗಿವೆ.
ಈ ಬಗ್ಗೆ ಪ್ರಶ್ನೆ ಮಾಡುವ ಸಾರ್ವಜನಿಕರ ಮಾತಿಗೆ ಗುತ್ತಿಗೆದಾರರು ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಕಾಮಗಾರಿಯ ವಿವರವನ್ನು ಒಳಗೊಂಡ ಸೂಚನಾ ಫಲಕವನ್ನು ಕಾಮಗಾರಿ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಅಳವಡಿಸುವಂತೆ ನಾಗರಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.