ಬಾಣಂತಿ ಸಾವು: ಸಂಬಂಧಿಕರ ಪ್ರತಿಭಟನೆ
Team Udayavani, Apr 9, 2021, 8:06 PM IST
ದೊಡ್ಡಬಳ್ಳಾಪುರ:ನಗರದ ಸರ್ಕಾರಿ ತಾಯಿ ಮಗು ಆಸ್ಪತ್ರೆ ಬಳಿ ವೈದ್ಯರ ನಿರ್ಲಕ್ಷದಿಂದ ಮಗುವಿಗೆ ಜನ್ಮ ನೀಡಿದ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.
ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಸಂತೋಷ್ ಎನ್ನುವವರ ಪತ್ನಿ ಮಮತಾ(27) ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ವೇಳೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದ ಕಾರಣ ವೈದ್ಯರು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಕಳುಹಿಸಿದ್ದರು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದರಿಂದ ಮೃತಳ ಸಂಬಂಧಿಕರು ಮಮತಾ ಸಾವಿಗೆ ದೊಡ್ಡಬಳ್ಳಾಪುರ ಆಸ್ಪತ್ರೆ ವೈದ್ಯರು ಕಾರಣವೆಂದು ಆರೋಪಿಸಿ, ಪ್ರತಿಭಟನೆ ನಡೆಸಿ, ಸ್ಥಳಕ್ಕೆ ಶಾಸಕರು ಬರುವವರೆಗೂ ಶವ ಸಾಗಿಸುವುದಿಲ್ಲವೆಂದು ಪಟ್ಟು ಹಿಡಿದರು.
ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಟಿ.ವೆಂಕಟರಮಣಯ್ಯ, ಡಿವೈಎಸ್ಪಿ ಟಿ.ರಂಗಪ್ಪ ಸಂಬಂಧಿಕರ ಮನವೊಲಿಸಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು.