ಅಶೋಕ್ ಪೂಜಾರಿ ಕಾಂಗ್ರೆಸ್ ಸೇರ್ಪಡೆ
Team Udayavani, Oct 13, 2021, 2:37 PM IST
ಬೆಂಗಳೂರು: ಬೆಳಗಾವಿ ಜಿಲ್ಲೆ ಗೋಕಾಕದ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಮೂಲತಃ ಬಿಜೆಪಿಯಲ್ಲಿದ್ದ ಅಶೋಕ್ ಪೂಜಾರಿ ಕಾಂಗ್ರೆಸ್ನಲ್ಲಿದ್ದ ರಮೇಶ್ ಜಾರಕಿಹೊಳಿ ಬಿಜೆಪಿಗೆ ಬಂದಿದ್ದರಿಂದ ಜೆಡಿಎಸ್ಗೆ ಹೋಗಿದ್ದರು. ಇದೀಗ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಈ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದ ಅವರು, ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಭೇಟಿಯ ನಂತರ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸೇರಲು ಬೇರೆ ಬೇರೆ ಪಕ್ಷಗಳ ಹಲವಾರು ನಾಯಕರು ಸಂಪರ್ಕದಲ್ಲಿದ್ದಾರೆ. ಅಶೋಕ್ ಪೂಜಾರಿ ಸಹ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ್ದರು. ಇಂದು ನನ್ನನ್ನೂ ಭೇಟಿ ಮಾಡಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಶೋಕ್ ಪೂಜಾರಿ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ನನಗೆ ಕಾಂಗ್ರೆಸ್ಗೆ ಬರುವಂತೆ ಸಲಹೆ ನೀಡಿದ್ದಾರೆ. ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ನಮ್ಮ ಗುರಿ ದುಷ್ಟ ಶಕ್ತಿಯ ವಿರುದ್ಧ ಹೋರಾಟ ಮಾಡುವುದು ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರುವ ಮುನ್ಸೂಚನೆ ನೀಡಿದರು.