ಬೆಳಗಾವಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Jun 26, 2022, 1:34 PM IST
ಬೆಳಗಾವಿ: ಸಮೀಪದ ಕಲ್ಯಾಳ ಸೇತುವೆ ಸಮೀಪ ಇಂದು ನಸುಕಿನಜಾವ ಕ್ರೂಸರ್ ಪಲ್ಟಿಯಾಗಿ ಗೋಕಾಕ ತಾಲ್ಲೂಕಿನ ಅಕ್ಕತಂಗೇರಹಾಳ ಗ್ರಾಮದ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ವಾರಸುದಾರರಿಗೆ ಸರಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಅಪಘಾತದಲ್ಲಿ ಏಳು ಜನ ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರಕಾರದಿಂದ ಐದು ಲಕ್ಷ ರೂಪಾಯಿ ಮತ್ತು ಜಿಲ್ಲಾಧಿಕಾರಿಗಳ ಮೂಲಕವು ತಲಾ ಎರಡು ಲಕ್ಷ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.
ಇದಲ್ಲದೇ ಅಪಘಾತದಲ್ಲಿ ಗಾಯಗೊಂಡಿರುವವರ ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.