ಬೆಳಗಾವಿ ಜಿಪಂ ಸಿಇಒ ದರ್ಶನ್ ವಿರುದ್ಧ ಸಿಎಂ ಬೊಮ್ಮಾಯಿ ಗರಂ
Team Udayavani, Aug 9, 2022, 6:46 PM IST
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಾ. 31ಕ್ಕೆ ಅನುಮೋದನೆ ಕೊಟ್ಟು ಇದುವರೆಗೆ ಒಂದೂ ಕಾಮಗಾರಿ ಆರಂಭಿಸದ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಎಚ್.ವಿ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.
ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 ಕಾಮಗಾರಿಗಳ ಅಂದಾಜು ಪತ್ರಿಕೆಗಳಿಗೆ 2022 ಮಾ. 31ಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದರೆ ಇವತ್ತಿನವರೆಗೆ ಒಂದೂ ಕಾಮಗಾರಿ ಆರಂಭಿಸಿಲ್ಲ. ಇದು ನಿಮ್ಮ ಅಧ್ಯಕ್ಷತೆ ತೋರಿಸುತ್ತದೆ ಎಂದು ಕಿಡಿಕಾರಿದರು.
ಪ್ರವಾಹದಿಂದ ಹಾನಿಗೊಳಗಾದ ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಅವಶ್ಯಕತೆ ಇದೆ. ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸದಿರುವುದು ದುರದೃಷ್ಟಕರ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ದರ್ಶನ್ ಎಚ್.ವಿ., ಕಾಮಗಾರಿ ಪೂರ್ಣಗೊಂಡ ಬಳಿಕ ಅನುದಾನ ಬಿಡುಗಡೆ ಆಗುತ್ತದೆ. ಹೀಗಾಗಿ ತುಸು ವಿಳಂಬ ಆಗಿದೆ ಎಂದು ಸಮಜಾಯಿಷಿ ನೀಡಲು ಮುಂದಾದರು. ಆಗ ಮತ್ತೆ ಕುಪಿತಗೊಂಡ ಮುಖ್ಯಮಂತ್ರಿ ಬೊಮ್ಮಾಯಿ, ಅಂದಾಜು ಪತ್ರಿಕೆಗೆ ಅನುಮೋದನೆ ಕೊಟ್ಟರಷ್ಟೇ ನಿಮ್ಮ ಕೆಲಸ ಮುಗಿಯುವುದಿಲ್ಲ. ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಿತಿಗತಿಗಳ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಕ್ರಿಯಾಯೋಜನೆಯಲ್ಲಿ ಸೇರಿಸಿಕೊಂಡು ನಿಯಮಾವಳಿ ಪ್ರಕಾರ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಅನುದಾನ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.
ಅಮೃತ ಗ್ರಾಪಂ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ಅತಿ ಕಡಿಮೆ ಪ್ರಗತಿ ಸಾಧಿಸಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಸ್ಮಾರ್ಟ್ ಸಿಟಿ ಮಾದರಿಯಲ್ಲಿ ಅಮೃತ ಯೋಜನೆಯಡಿ ಹಳ್ಳಿಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕಿದೆ. ಸೆ. 15ರೊಳಗೆ ಎಲ್ಲ ಕಾಮಗಾರಿ ಮುಗಿಸಿ ಅನುಮೋದನೆ ನೀಡಬೇಕು ಎಂದು ನಿರ್ದೇಶನ ನೀಡಿದ ಬೊಮ್ಮಾಯಿ, ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಫಲ ಆಗಿದ್ದಕ್ಕೆ ಖೇದ ವ್ಯಕ್ತಪಡಿಸಿದರು.
ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಹೆಗ್ಗನಾಯಕ, ಜಿಪಂ ಉಪಕಾರ್ಯದರ್ಶಿ(ಆಡಳಿತ) ಭೀಮಪ್ಪ ಲಾಳಿ, ಯೋಜನಾ ನಿರ್ದೇಶಕ ಬಂಗಾರಪ್ಪನವರ, ಕಾರ್ಯನಿರ್ವಾಹಕ ಅಭಿಯಂತ ಬಿರಾದಾರ ಪಾಟೀಲ, ಬಿದರಳ್ಳಿ, ಬಣಗಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್