ಗಣೇಶ ಮೂರ್ತಿ ಮೆರವಣಿಗೆ ವೇಳೆ ಮಾರಾಮಾರಿ: ನಾಲ್ವರಿಗೆ ಗಾಯ
Team Udayavani, Sep 3, 2019, 10:21 AM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆ ವೇಳೆ ಗುಂಪು ಘರ್ಷಣೆಯಾಗಿ ಮಾರಕಕಾಸ್ತ್ರಗಳಿಂದ ಮಾರಾಮಾರಿಯಾಗಿ ನಾಲ್ವರುವ ಗಾಯಗೊಂಡ ಘಟನೆ ತಾಲೂಕಿನ ಮಂಡೋಳಿ ಗ್ರಾಮದಲ್ಲಿ ನಡೆದಿದೆ.
ಮಂಡೋಳಿ ಮಹೇಶ ಕೃಷ್ಣಾ ದಳವಿ(22), ಶೇಖರ ಕೃಷ್ಣಾ ದಳವಿ(27), ಕಲ್ಪನಾ ಕೃಷ್ಣಾ ದಳವಿ(48) ಹಾಗೂ ರಾಜು ಖಂಡೋಬಾ ಪಾಟೀಲ(ಬಡಸ್ಕರ)(24) ಎಂಬವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ಒಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿತ್ತು. ಆಗ ಇದನ್ನು ಕೇಳಿದ ಮತ್ತೊಂದು ಗುಂಪಿನ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಮಾರಾಮಾರಿಯಾಗಿದೆ. ಇದರಲ್ಲಿ ನಾಲ್ವರು ಗಾಯಗೊಂಡಿದ್ದು, ಜಗಳ ಬಿಡಿಸಲು ಹೋದವರ ಮೇಲೂ ಹಲ್ಲೆ ನಡೆಸಲಾಗಿದೆ.
ಗುಂಪು ಘರ್ಷಣೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಎಸಿಪಿ ಕೆ. ಶಿವಾರೆಡ್ಡಿ, ಇನ್ಸ್ಪೆಕ್ಟರ್ ಸಂಗಮೇಶ ಶಿವಯೋಗಿ ಹಾಗೂ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.