ಎಂ.ಸ್ಯಾಂಡ್ ಘಟಕ ಆರಂಭಿಸಲು ಸೂಚನೆ
|ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಿಸಿ ಕ್ಯಾಮೆರಾ ಅಳವಡಿಸಿ |ಕ್ರಷರ್-ಕ್ವಾರಿಗಳ ಸುತ್ತಲೂ ಸಸಿ ನೆಡಿ: ಜಿಲ್ಲಾಧಿಕಾರಿ
Team Udayavani, Jul 3, 2019, 9:47 AM IST
ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.
ಬೆಳಗಾವಿ: ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಎಲ್ಲ ಮಾರ್ಗಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಜತೆಗೆ ಜಿಲ್ಲೆಯಲ್ಲಿ ಈಗಾಗಲೇ ಅನುಮತಿ ನೀಡಲಾಗಿರುವ ಎಂ.ಸ್ಯಾಂಡ್ ಘಟಕಗಳನ್ನು ಆದಷ್ಟು ಬೇಗ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಂ.ಸ್ಯಾಂಡ್ ಗುಣಮಟ್ಟದ ಬಗ್ಗೆ ನಿರಂತರ ಪರಿಶೀಲನೆ ಕೈಗೊಳ್ಳಬೇಕು. ಅದೇ ರೀತಿ ಘಟಕಗಳು ಪ್ರತಿ ತಿಂಗಳು ಸ್ವಯಂ ಪ್ರೇರಣೆಯಿಂದ ತಮ್ಮ ಉತ್ಪಾದನೆಯ ಗುಣಮಟ್ಟವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಘಟಕಗಳಿಗೆ ಸೂಚನೆ ನೀಡುವಂತೆ ತಿಳಿಸಿದರು.
67 ಕ್ರಷರ್ ನವೀಕರಣಕ್ಕೆ ಅರ್ಜಿ ಬಂದಿವೆ. 61 ಅರ್ಜಿ ವಿಲೇವಾರಿ ಬಾಕಿ ಉಳಿದಿವೆ. ಒಂದು ತಿರಸ್ಕೃತಗೊಂಡಿದ್ದು, ಒಂದು ಘಟಕಕ್ಕೆ ಅನುಮತಿ ನೀಡಲಾಗಿದೆ. ಎಂ.ಸ್ಯಾಂಡ್ ಘಟಕ 48 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಕೇಬಲ್ ಎಂ.ಸ್ಯಾಂಡ್ ತಯಾರಿಗೆ ಮಾತ್ರ ಎಂಟು ಘಟಕ ಕೆಲಸ ಮಾಡುತ್ತಿವೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರು ವಿವರಣೆ ನೀಡಿದರು.
ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, 27 ಘಟಕಗಳ ಆರಂಭಕ್ಕೆ ಮರು ಟೆಂಡರ್ ಮಾಡುವ ಅಗತ್ಯವಿದೆ. ತಕ್ಷಣವೇ ಮರು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಕ್ರಷರ್ ಮತ್ತು ಕ್ವಾರಿಗಳ ಸುತ್ತಮುತ್ತಲೂ ಸಸಿಗಳನ್ನು ನೆಡಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು
ಉತ್ಪಾದನೆ ಮೇಲೂ ನಿಗಾ ವಹಿಸಿ: ಅನುಮತಿ ಪಡೆದರೂ ಎಂ.ಸ್ಯಾಂಡ್ ಉತ್ಪಾದನೆ ಆರಂಭಿಸದ 9 ಘಟಕಗಳಿಗೆ ನೋಟಿಸ್ ನೀಡಬೇಕು. ಕ್ವಾರಿ ಮತ್ತು ಕ್ರಷರ್ ಸೇರಿದಂತೆ ವಿವಿಧ ಘಟಕಗಳಿಗೆ ನಿಗದಿಪಡಿಸಿದ ಪ್ರಮಾಣದಲ್ಲಿಯೇ ಉತ್ಪಾದನೆ ಮಾಡಲಾಗುತ್ತಿದೆಯೇ ಎಂಬುದರ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬೊಮ್ಮನಹಳ್ಳಿ ತಿಳಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಜಮೀನು ಪಡೆದುಕೊಂಡು ಇದುವರೆಗೂ ಕೈಗಾರಿಕೆ ಆರಂಭಿಸದವರಿಗೆ ನೋಟಿಸ್ ನೀಡಬೇಕು. ಕಿತ್ತೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಚಿವರು ಸಲಹೆ ನೀಡಿದರು.
ನಿಗದಿತ ಪ್ರದೇಶದಲ್ಲಿ ಕೈಗಾರಿಕಾ ಸ್ಥಾಪನೆಗೆ ಯಾರಾದರೂ ಮುಂದೆ ಬಂದರೆ ಮಾತ್ರ ಜಮೀನು ಗುರುತಿಸಿ ಅವರಿಗೆ ಹಸ್ತಾಂತರಿಸಬೇಕು. ನಿರ್ದಿಷ್ಟ ಉದ್ದೇಶವಿಲ್ಲದೇ ಸಾವಿರಾರು ಎಕರೆ ಬ್ಲಾಕ್ ಮಾಡಬೇಕು. ಜಿಲ್ಲೆಯ ನೇಸರಗಿ ಭಾಗದಲ್ಲಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು. 220 ಕೆ.ವಿ. ವಿದ್ಯುತ್ ಸ್ಟೇಷನ್ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸಿ ಅದನ್ನು ವಿದ್ಯುತ್ ಇಲಾಖೆಗೆ ಒದಗಿಸುವಂತೆ ಸಚಿವರು ತಿಳಿಸಿದರು. ವಿವಿಧ ಕಾರ್ಖಾನೆಗಳಿಂದ 6640 ಮಾದರಿಗಳನ್ನು ಹಾಗೂ ನದಿ ನೀರು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೋಪಾಲಕೃಷ್ಣ ತಿಳಿಸಿದರು.
ಚಿಕ್ಕೋಡಿ ಪ್ರಾದೇಶಿಕ ಕಚೇರಿ ಅಧಿಕಾರಿ ಜಗದೀಶ ಮಾತನಾಡಿ, 325 ಉದ್ಯಮಗಳಿದ್ದು, ಸೂಕ್ತ ಕಾರ್ಯ ನಿರ್ವಹಣೆಗೆ ಸಿಬ್ಬಂದಿ ಕೊರತೆಯಿಂದ ಅನಾನುಕೂಲವಾಗುತ್ತಿದೆ ಎಂದರು.
ಪ್ಲಾಸ್ಟಿಕ್ ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡದಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ನೋಟಿಸ್ಗೆ ಸರಿಯಾಗಿ ಸ್ಪಂದಿಸದಿದ್ದರೆ ಪ್ರಕರಣ ದಾಖಲಿಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ನದಿ ನೀರು ಕಲುಷಿತಕ್ಕೆ ಕಾರಣವಾಗುತ್ತಿರುವ ಬಗ್ಗೆ ಸಮಗ್ರ ಸಮೀಕ್ಷೆ ಕೈಗೊಂಡರೆ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ| ಬೊಮ್ಮನಹಳ್ಳಿ ತಿಳಿಸಿದರು.
ಸಣ್ಣ ಕೈಗಾರಿಕೆ ಪ್ರದೇಶ ಅಭಿವೃದ್ಧಿಗೆ ಸೂಚನೆ: ಸ್ಥಳೀಯ ಜನರಿಗೆ ಉದ್ಯಮ ಸ್ಥಾಪನೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 20ರಿಂದ 30 ಎಕರೆ ಜಮೀನು ಅಭಿವೃದ್ಧಿಪಡಿಸಿ ಕೈಗಾರಿಕಾ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸಣ್ಣ ಕೈಗಾರಿಕೆ ಅಭಿವೃದ್ಧಿಗೆ ಉದ್ಯಮಬಾಗದಿಂದ ಐದು ಕಿ.ಮೀ. ದೂರದ ಬಸ್ತವಾಡ ಬಳಿ ನೂರು ಎಕರೆ ಗುರುತಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜ ವಿವರಿಸಿದರು.
ಐಪಂ ಸಿಇಒ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ನರೇಗಾ ಯೋಜನೆಯಡಿ ಪ್ರತಿದಿನ 45 ಸಾವಿರ ಜನರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ವಿವರಿಸಿದರು.
ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ ಕುಮಾರ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಡಾ| ಬೂದೆಪ್ಪ ಎಚ್.ಬಿ., ಗಣಿ ಮತ್ತು ಭೂವಿಜ್ಞಾನ, ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕುಡಿಯುವ ನೀರು ಮತ್ತು ಒಳಚರಂಡಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ