ಜಿಲ್ಲೆ ಅಭಿವೃದ್ಧಿಗೆ ಕಡಾಡಿ ಆಯ್ಕೆ ಅನುಕೂಲಕರ: ಬಾಲಚಂದ್ರ
Team Udayavani, Jun 10, 2020, 6:25 AM IST
ಗೋಕಾಕ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಈರಣ್ಣ ಕಡಾಡಿ ಅವರು ನಾಮಪತ್ರ ಸಲ್ಲಿಸಿದ ಬಳಿಕ ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿರುವ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲ ಹಿರಿಯರನ್ನು, ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು. ಕಡಾಡಿ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವ ಪಕ್ಷದ ಕೇಂದ್ರೀಯ ಸಮಿತಿಯವರಿಗೆ ಕೃತಜ್ಞತೆ ಸಲ್ಲಿಸಿ ಕಡಾಡಿ ಅವರಿಗೆ ಶುಭ ಕೋರಿದರು.
ಅಭ್ಯರ್ಥಿ ಈರಣ್ಣ ಕಡಾಡಿ ಮಾತನಾಡಿ, ಜಿಲ್ಲೆಯ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗುವುದು. ತಮ್ಮ ಮೇಲೆ ವಿಶ್ವಾಸವನ್ನಿಟ್ಟು ರಾಜ್ಯಸಭೆ ಟಿಕೆಟ್ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಕೃತಜ್ಞತೆಗಳು. ಕಳೆದ 32 ವರ್ಷಗಳಿಂದ ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿ ಪಕ್ಷವನ್ನು ಕಟ್ಟಲು ದುಡಿದಿದ್ದೇನೆ. ಅದರ ಪ್ರತಿಫಲವಾಗಿ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದೆ. ಕನಸಿನಲ್ಲಿಯೂ ರಾಜ್ಯಸಭೆಗೆ ಹೋಗುತ್ತೇನೆಂದು ಭಾವಿಸಿರಲಿಲ್ಲ ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಅಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.