ಗುಣಮಟ್ಟವಾಗಿರಲಿ ಸ್ಮಾರ್ಟ್ ಸಿಟಿ ಕೆಲಸ
Team Udayavani, Jan 13, 2020, 11:42 AM IST
ಬೆಳಗಾವಿ: ಮೊದಲ ಪಟ್ಟಿಯಲ್ಲಿಯೇ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆ ಆಗಿರುವ ಬೆಳಗಾವಿ ನಗರದಲ್ಲಿ ಕಾಮಗಾರಿಗಳು ಉತ್ತಮವಾಗಿ ನಡೆದಿವೆ. ಇನ್ನಷ್ಟು ಶ್ರಮಪಟ್ಟು ಅಧಿಕಾರಿಗಳು ಕೆಲಸ ಮಾಡಿದರೆ 4ನೇ ಸ್ಥಾನದಿಂದ 1ನೇ ಸ್ಥಾನಕ್ಕೆ ಜಿಗಿಯುವುದರಲ್ಲಿ ಸಂದೇಹವೇ ಇಲ್ಲ. ಬೇಗ ಬೇಗ ಕಾಮಗಾರಿ ಮುಗಿಸಿ ಬೆಳಗಾವಿ ಸ್ಮಾರ್ಟ್ ಮಾಡುವ ಜವಾಬ್ದಾರಿ ಹೊರಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಸ್ಮಾರ್ಟ್ಸಿಟಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿಗಳು ಚೆನ್ನಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಿ ಕಾಮಗಾರಿಗಳು ವಿಳಂಬ ಆಗುತ್ತಿವೆಯೋ ಅವುಗಳ ಬಗ್ಗೆ ಗಮನಹರಿಸಬೇಕು. ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಒಮ್ಮೆ ಮಾಡಿದ ಕೆಲಸ ಪದೇ ಪದೇ ಮಾಡುವಂತಾಗಬಾರದು ಎಂದರು.
ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಗುತ್ತಿಗೆದಾರರು ಸುರಕ್ಷತೆಗೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಬಿಲ್ ಪಾಸ್ ಮಾಡಿಕೊಂಡು ಹೋಗುವುದೇ ಧ್ಯೇಯ ಇಟ್ಟುಕೊಳ್ಳಬಾರದು. ಎಲ್ಲಿ ಕಾಮಗಾರಿ ನಡೆದಿಯೋ ಅಲ್ಲಿ ಸಾರ್ವಜನಿಕರಿಗೆ ಅರ್ಥವಾಗುವಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು. ಸಾರ್ವಜನಿಕರಿಗೆ ಸ್ಪಷ್ಟ ಸೂಚನೆ ಕೊಟ್ಟರೆ ಪಾಲಿಸುತ್ತಾರೆ. ಸುಮ್ಮನೇ ಸಾರ್ವಜನಿಕರ ಮೇಲೆ ಆರೋಪ ಮಾಡುವುದನ್ನು ಗುತ್ತಿಗೆದಾರರು ಬಿಡಬೇಕು ಎಂದು ಹೇಳಿದರು.
ಜ.29ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿಗೆ ಆಗಮಿಸಲಿದ್ದಾರೆ. ಸ್ಮಾರ್ಟ ಸಿಟಿ ಯೋಜನೆಯಡಿ ನಿರ್ಮಾಣವಾದ ಕಮಾಂಡ್ ಆ್ಯಂಡ್ ಕಂಟ್ರೋಲ್ ರೂಂ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಅಂದಿನಿಂದಲೇ ಆ ಕೇಂದ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬೇಕು. ಕೌಶಲವುಳ್ಳ ಸಿಬ್ಬಂದಿಯನ್ನು ನೇಮಿಸಿ ಕಾರ್ಯ ಆರಂಭಿಸಬೇಕು ಎಂದು ಸೂಚನೆ ನೀಡಿದರು.
ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಮಾತನಾಡಿ, ನಿರ್ಮಾಣವಾದ ಕಮಾಂಡ್ ಆ್ಯಂಡ್ ಕಂಟ್ರೋಲ್ ಕೇಂದ್ರದಲ್ಲಿ ಅನೇಕ ನಿರ್ವಹಣಾ ಕೆಲಸ ನಡೆಯಲಿವೆ. ಸಂಚಾರ, ಸಾರಿಗೆ ಬಸ್ಗಳ ಕಾರ್ಯಾಚರಣೆ, ಕಸ ಸಾಗಿಸುವ ವಾಹನಗಳ ಮೇಲೆ ಕಣ್ಣಿಡುವುದು, ತ್ಯಾಜ್ಯ ನಿರ್ವಹಣೆ, ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡುವುದು ಸೇರಿದಂತೆ ವಿವಿಧ ಕೆಲಸ ಮಾಡಲಾಗುತ್ತದೆ. ಹೀಗಾಗಿ ಆಯಾ ಇಲಾಖೆಗೆ ಸಂಬಂಧಿಸಿದವರು ಒಬ್ಬೊಬ್ಬ ಸಿಬ್ಬಂದಿಯನ್ನು ಅಲ್ಲಿಗೆ ನಿಯೋಜಿಸಬೇಕು. ಆಗ ಇಲ್ಲಿಂದಲೇ ಎಲ್ಲವನ್ನೂ ನಿರ್ವಹಿಸಲು ಅನುಕೂಲವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಈ ಕೇಂದ್ರ ನಿರ್ಮಾಣಗೊಂಡಿದೆ. ಆಯಾ ಇಲಾಖೆಯವರು ತಮ್ಮ ಸಿಬ್ಬಂದಿಯನ್ನು ಕೂಡಲೇ ನಿಯೋಜಿಸಬೇಕು. ಅಲ್ಲಿನ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಬೇಕು. ವಾರಕ್ಕೊಮ್ಮೆ ಪ್ರಗತಿ ಪರಿಶೀಲನೆ ನಡೆಸಬೇಕು. ತಮ್ಮ ಇಲಾಖೆಯ ಕಾರ್ಯ ಬಹಳ ಸುಲಭವಾಗಲಿದೆ ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ನನ್ನ ಕ್ಷೇತ್ರವೂ ನಗರ ವ್ಯಾಪ್ತಿಗೆ ಸ್ವಲ್ಪ ಪ್ರಮಾಣದಲ್ಲಿ ಹೊಂದಿಕೊಂಡಿದೆ. ಅದರಂತೆ ಕೆಲವು ಕಾಮಗಾರಿಗೆ ಚಾಲನೆ ಸಿಕ್ಕಿದೆ. ಇನ್ನುಳಿದಂತೆ ಬೇರೆ ಬೇರೆ ಕಾಮಗಾರಿಗಳನ್ನು ಬೇಗ ಆರಂಭಿಸಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಇರುವ ಕೆಲಸ ನಿರ್ವಹಿಸಿ ಸ್ಮಾರ್ಟ್ ಮಾಡಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.
ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ನಗರದಲ್ಲಿ ಬಿಡಾಡಿ ದನಗಳ ಪುನರ್ವಸತಿಗೆ ಕ್ರಮ ಕೈಗೊಂಡ ಯೋಜನೆಯಡಿ ಬೀದಿ ನಾಯಿಗಳ ಪುನರ್ವಸತಿಗೂ ಕ್ರಮ ಕೈಗೊಳ್ಳಬೇಕು. ಬೀದಿ ನಾಯಿ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದರು.
ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ನಗರದಲ್ಲಿ ಅನೇಕ ಕಡೆಗಳಲ್ಲಿ ಸ್ಮಾರ್ಟ್ ರಸ್ತೆ ನಿರ್ಮಾಣ ಕಾರ್ಯ ನಡೆದಿದೆ. ಯೋಜನೆಯಡಿ ಸದ್ಯ ಪೂರ್ಣಗೊಂಡ ರಸ್ತೆಗಳ ಪಕ್ಕದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶ ಒದಗಿಸಬೇಕು. ರಸ್ತೆ ಬದಿ ವ್ಯಾಪಾರಿಗಳು ಬಾರದಂತೆ ನೋಡಿಕೊಳ್ಳಬೇಕು. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.
ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ಮಾತನಾಡಿ, ಈಗಾಗಲೇ ಕೆಲವೊಂದು ಕಡೆಗಳಲ್ಲಿ ಹೊಸದಾಗಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ಇನ್ನೂ ಅನೇಕ ಕಡೆಗೆ ಬಸ್ಗಳು ನಿಲ್ಲುತ್ತಿಲ್ಲ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುತ್ತಿಲ್ಲ ಎಂದು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಸುರೇಶ ಅಂಗಡಿ, ಕೂಡಲೇ ಸಂಬಂಧಿಸಿದವರ ಸಭೆ ಕರೆದು ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಬುಡಾ ಅಧ್ಯಕ್ಷ ಘೂಳೆಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ