ಕಬ್ಬು ಬಾಕಿ ಬಿಲ್ ಪಾವತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ
Team Udayavani, May 9, 2019, 12:42 PM IST
ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಳೆದ ವರ್ಷ ಬಾಕಿ ಉಳಿಸಿಕೊಂಡಿರುವ 1185 ಕೋಟಿ ರೂ. ಹಾಗೂ 2017-18 ನೇ ಸಾಲಿನ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಕಬ್ಬಿನ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್. ರೈತರಿಗೆ ಭರವಸೆ ನೀಡಿದರು.
ಕಬ್ಬಿನ ಬಿಲ್ ಬಾಕಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಕಬ್ಬು ಬೆಳೆಗಾರರು ಮತ್ತು ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಹಣವನ್ನು ರೈತರಿಗೆ ಪಾವತಿಸಲು ಸೂಚನೆ ನೀಡಲಾಗುತ್ತದೆ. ಇದಾದ ಬಳಿಕವೂ ಬಿಲ್ ಪಾವತಿಸದಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಖಾನೆಗಳಿಂದ ಕಳೆದ ವರ್ಷದಲ್ಲಿ ಒಟ್ಟಾರೆ 1185 ಕೋಟಿ ರೂಪಾಯಿ ಬಾಕಿಯಿದೆ. ಐದಾರು ಸಭೆ ನಡೆಸಿ ಗಡುವು ನೀಡಿದರೂ ಪಾವತಿಸದಿರುವುದರಿಂದ ಶೇ.15 ಬಡ್ಡಿ ಸಮೇತ ಬಾಕಿ ಹಣ ಪಾವತಿಸಬೇಕು ಎಂದು ರೈತ ಮುಖಂಡ ಶಶಿಕಾಂತ ಜೋಶಿ ಆಗ್ರಹಿಸಿದರು.
ಕಬ್ಬಿನ ಬಿಲ್ ಬಾಕಿ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕರೆಯುವ ಸಭೆಗಳಿಗೆ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಉದ್ದೇಶಪೂರ್ವಕವಾಗಿ ಹಾಜರಾಗದೇ ತಮ್ಮ ಪ್ರತಿನಿಧಿಯನ್ನು ಕಳಿಸುತ್ತಾರೆ. ಇದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಮುಂಬರುವ ದಿನಗಳಲ್ಲಿ ತೂಕ ಮತ್ತು ಅಳತೆ ಪರಿಶೀಲಿಸಲು ಸಕ್ಕರೆ ಕಾರ್ಖಾನೆಗೆ ತೆರಳುವಾಗ ಕಡ್ಡಾಯವಾಗಿ ರೈತರು ಮತ್ತು ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಸದಸ್ಯರನ್ನು ಕರೆದುಕೊಂಡು ಹೋಗಿ ಅವರ ಸಮ್ಮುಖದಲ್ಲಿಯೇ ಪರಿಶೀಲನೆ ನಡೆಸಬೇಕು ಮತ್ತು ಇದನ್ನು ದಾಖಲು ಮಾಡಬೇಕು ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿ ತೂಕ ಮತ್ತು ಅಳತೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸಕ್ಕರೆ ಆಯುಕ್ತಾಲಯಕ್ಕೆ ವರದಿ ಕಳಿಸಲಾಗುವುದು ಎಂದರು.
ಬೆಳೆವಿಮೆ ಪರಿಹಾರ: 2016-17 ನೇ ಸಾಲಿನ ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ 5.76 ಕೋಟಿ ರೂಪಾಯಿ ಪರಿಹಾರವನ್ನು ಜಿಲ್ಲೆಯ 13,671 ರೈತರ ಖಾತೆಗೆ ಒಂದು ವಾರದೊಳಗೆ ಜಮೆ ಮಾಡಲು ಕ್ರಮವಹಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ನಿರ್ದೇಶನ ನೀಡಿದರು.
ಮೇವು ಬ್ಯಾಂಕ್ ಸ್ಥಾಪನೆ: ಜಿಲ್ಲೆಯ ಅಥಣಿಯಲ್ಲಿ 21 ಹಾಗೂ ರಾಮದುರ್ಗ ದಲ್ಲಿ ಒಂದು ಸೇರಿದಂತೆ ಒಟ್ಟಾರೆ 22 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 140 ಖಾಸಗಿ ಕೊಳವೆಬಾವಿಗಳನ್ನೂ ಗುರುತಿಸಲಾಗಿದ್ದು, ಅಗತ್ಯಬಿದ್ದರೆ ಅವುಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ 6.50 ಕೋಟಿ ಬಿಡುಗಡೆಗೆ ಜಿಲ್ಲಾಡಳಿತ ಅನುಮೋದನೆ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ