ಉತ್ತರ ಕರ್ನಾಟಕದ ಸಮಸ್ಯೆಯೇ ಹೋರಾಟಕ್ಕೆ ಅಸ್ತ್ರ
Team Udayavani, Dec 10, 2018, 6:35 AM IST
ಬೆಳಗಾವಿ : ಸೋಮವಾರ ರೈತರೊಂದಿಗೆ ಬೃಹತ್ ರ್ಯಾಲಿ ನಡೆಸಲಿರುವ ಬಿಜೆಪಿ, ಮಂಗಳವಾರ ಸದನದ ಒಳಗೆ ಸಂಪೂರ್ಣ ಸಾಲ ಮನ್ನಾ, ಬರ ನಿರ್ವಹಣೆ, ನೆರೆ ಪರಿಹಾರ ಕಾರ್ಯ, ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ರೈತರಿಗೆ ಸಂಬಂಧಿಸಿದ ವಿಚಾರಗಳ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡನೆಗೆ ಮುಂದಾಗಿದೆ ಎನ್ನಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತೋರಿರುವ ನಿರ್ಲಕ್ಷ್ಯ, ಅನುದಾನ ಬಿಡುಗಡೆ ಮಾಡದೆ ಕಾಮಗಾರಿ ಕುಂಠಿತವಾಗಿರುವ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಿದೆ. ಮರಳಿನ ಕೊರತೆ, ಅಗತ್ಯ ಪ್ರಮಾಣದಲ್ಲಿ ಮರಳು ಪೂರೈಕೆಯಲ್ಲಿನ ಸಮಸ್ಯೆ, ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ಇತರೆ ವಿಚಾರದಲ್ಲಿ ಸರ್ಕಾರದ ತಾರತಮ್ಯ ಧೋರಣೆ ಬಗ್ಗೆಯೂ ಪ್ರಧಾನವಾಗಿ ಚರ್ಚಿಸಲು ನಿರ್ಧರಿಸಲಾಗಿದೆ.
ಉತ್ತರ ಕರ್ನಾಟಕಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ವಿಶೇಷ ಚರ್ಚೆ ನಡೆಸಲು ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ವಿಚಾರದಲ್ಲಿ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನೇ ಪ್ರಧಾನವಾಗಿ ಪ್ರಸ್ತಾಪಿಸಿ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಿರ್ಧರಿಸಿದೆ.
ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ, ಪ್ರತಿಪಕ್ಷ ಮುಖ್ಯ ಸಚೇತಕ ಸುನೀಲ್ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಭಾನುವಾರ ಸಭೆ ನಡೆಸಿದ್ದು, ಸದನದ ಒಳಗೆ, ಹೊರಗಿನ ಹೋರಾಟದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಮಂಗಳವಾರ ಬಿಜೆಪಿ ಶಾಸಕಾಂಗ ಸಭೆ ನಡೆಸಲು ನಿರ್ಧರಿಸಿರುವ ನಾಯಕರು ಹೋರಾಟದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.