ಬೆಳಗಾವಿಯಲ್ಲಿ ಉಸ್ತುವಾರಿ ಸಚಿವರಿಲ್ಲದೇ ಕೋವಿಡ್ ತಡೆಗೆ ಹಿನ್ನಡೆ ಆತಂಕ
Team Udayavani, Apr 24, 2021, 6:12 PM IST
ವರದಿ : ಭೈರೋಬಾ ಕಾಂಬ್ಳೆ
ಬೆಳಗಾವಿ: ಕೋವಿಡ್ ಸೋಂಕಿನಿಂದ ತೀವ್ರ ಆತಂಕದಲ್ಲಿರುವ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೂಕ್ತ ಮತ್ತು ಕಠಿಣ ನಿರ್ಧಾರ ತೆಗೆದುಕೊಳ್ಳಲು ಯಾವುದೇ ಉಸ್ತುವಾರಿ ಸಚಿವರಿಲ್ಲದೇ ಇರುವದು ಸಾರ್ವಜನಿಕರಲ್ಲಿ ಗೊಂದಲದ ಜೊತೆಗೆ ಚಿಂತೆ ಉಂಟುಮಾಡಿದೆ.
ರಾಜ್ಯದಲ್ಲಿ ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಸಚಿವರು ತಕ್ಷಣದಿಂದಲೇ ಜಿಲ್ಲೆಯಲ್ಲಿ ಸೋಂಕಿತರ ನೋವಿಗೆ ಸ್ಪಂದಿಸಿ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದರು. ಆದರೆ ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರಿಲ್ಲದೆ ಅಧಿಕಾರಿಗಳು ಪ್ರತಿಯೊಂದೂ ಕ್ರಮಕ್ಕೆ ಸರಕಾರದ ಕಡೆ ಮುಖ ಮಾಡಬೇಕಾಗಿದೆ.
ಸರಕಾರದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ನಾಲ್ವರು ಸಚಿವರಿದ್ದರೂ ಯಾರಿಗೂ ಇದುವರೆಗೆ ಉಸ್ತುವಾರಿ ಹೊಣೆ ನೀಡಲಾಗಿಲ್ಲ. ರಮೇಶ ಜಾರಕಿಹೊಳಿ ನಂತರ ಉಸ್ತುವಾರಿ ಸಚಿವರಿಲ್ಲದೆ ಅನಾಥವಾಗಿರುವ ಜಿಲ್ಲೆಯಲ್ಲಿ ಈಗ ಕೊರೊನಾ ಸಂಕಷ್ಟದ ಸಮಯದಲ್ಲಿ ಮತ್ತಷ್ಟು ಸಮಸ್ಯೆ ತಲೆದೋರಿದೆ. ಉಸ್ತುವಾರಿ ಸಚಿವರ ನೇಮಕದ ವಿಚಾರದಲ್ಲಿ ಸರಕಾರದ ಉದಾಸೀನ ಮನೋಭಾವ ಜಿಲ್ಲೆಯ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಜಿಲ್ಲೆಯವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೇ ಬೇರೆ ಜಿಲ್ಲೆಯ ಉಸ್ತುವಾರಿ ಹೊತ್ತಿದ್ದಾರೆ. ಶಶಿಕಲಾ ಜೊಲ್ಲೆ ವಿಜಯಪುರ ಜಿಲ್ಲೆ ನೋಡಿಕೊಳ್ಳುತ್ತಿದ್ದಾರೆ. ಹಿರಿಯ ನಾಯಕರಾದ ಆಹಾರ ಸಚಿವ ಉಮೇಶ ಕತ್ತಿ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ ಯಾವುದೇ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುತ್ತಿಲ್ಲ. ಹೀಗಾಗಿ ಇವರಲ್ಲಿ ಒಬ್ಬರಿಗೆ ತಕ್ಷಣವೇ ಉಸ್ತುವಾರಿ ಜವಾಬ್ದಾರಿ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ತೀವ್ರವಾಗುತ್ತಿದ್ದಂತೆ ಜಾಗೃತರಾದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅಧಿಕಾರಿಗಳ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದುವರೆಗೆ ವಿತರಣೆಯಾಗಿರುವ ಲಸಿಕೆ ಪ್ರಮಾಣದ ಮಾಹಿತಿ ಪಡೆದುಕೊಂಡಿದ್ದಾರೆ.
ಮಹಾರಾಷ್ಟ್ರದ ಗಡಿ ಭಾಗದಲ್ಲಿ ಚೆಕ್ಪೋಸ್ಟ್ಗಳಲ್ಲಿ ಇನ್ನಷ್ಟು ಬಿಗಿಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ಸರಕಾರ ವಿಳಂಬ ಮಾಡದೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದರೆ ಅಧಿಕಾರಿಗಳಿಗೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ನೆರೆಯ ಮಹಾರಾಷ್ಟ್ರದಿಂದ ಪ್ರತಿನಿತ್ಯ ನೂರಾರು ಜನರು ಬೆಳಗಾವಿಗೆ ಬರುತ್ತಿದ್ದಾರೆ. ಈ ಎಲ್ಲ ಜನರ ಕೋವಿಡ್ ತಪಾಸಣೆ ಸಮರ್ಪಕವಾಗಿ ಆಗುತ್ತಿಲ್ಲ. ಚೆಕ್ಪೋಸ್ಟ್ ಗಳಲ್ಲಿ ಸರಿಯಾಗಿ ತಪಾಸಣೆ ಆಗುತ್ತಿಲ್ಲ. ಇದರ ಮೇಲುಸ್ತುವಾರಿ ನಡೆಸಲು ಸಚಿವರೇ ಇಲ್ಲ. ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಏರುತ್ತಲೇ ಇದೆ ಎಂಬುದು ಸಾರ್ವಜನಿಕರ ಆತಂಕ.
ಉಸ್ತುವಾರಿ ಸಚಿವರ ನಿಯೋಜನೆ ಆಗುವವರೆಗೆ ಜಿಲ್ಲೆಯ ನಾಲ್ವರಲ್ಲಿ ಒಬ್ಬರು ಸಚಿವರು ಅಧಿಕಾರಿಗಳ ಸಭೆ ನಡೆಸಬೇಕು. ಕೋವಿಡ್ ಆಸ್ಪತ್ರೆ ಹಾಗೂ ಸುರಕ್ಷಾ ಕ್ರಮಗಳ ಪರಿಶೀಲನೆ ನಡೆಸಬೇಕು. ಲಸಿಕೆ ವಿತರಣೆ ಹಾಗು ಜನಜಾಗೃತಿಯ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಜರುಗಿಸಬೇಕು. ಆದರೆ ಇದಾವುದೂ ಅಗುತ್ತಿಲ್ಲ ಎಂಬ ಅಸಮಾಧಾನ ಸಾರ್ವಜನಿಕರಲ್ಲಿದೆ. ಸೋಂಕಿತರ ಸಂಖ್ಯೆ ಏರಿಕೆ: ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಪ್ರತಿ ನಿತ್ಯ 100ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದೃಢಪಡುತ್ತಿವೆ. ಜಿಲ್ಲೆಯಲ್ಲಿ ಸೋಂಕಿತರು ಹೆಚ್ಚಾದಂತೆ ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆಗಳು ಲಭ್ಯ ಇವೆ, ಆಕ್ಸಿಜನ್, ಐಸಿಯು, ವೆಂಟಿಲೇಟರ್ ಲಭ್ಯತೆ ಎಷ್ಟಿದೆ ಎಂಬ ಮಾಹಿತಿಯನ್ನು ಸಚಿವರು ಪಡೆದುಕೊಂಡು ಯಾವುದೇ ಕೊರತೆ ಇದ್ದರೆ ತಕ್ಷಣ ಅದರ ಬಗ್ಗೆ ಕ್ರಮವಾಗಬೇಕು ಎಂಬ ಒತ್ತಾಯ ಜನರಿಂದ ಕೇಳಿಬಂದಿದೆ.
ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದನ್ನು ಮನಗಂಡ ಸರಕಾರ ಕೂಡಲೇ ಕಠಿಣ ಕ್ರಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಇದರ ಉಸ್ತುವಾರಿಗಾಗಿ ನೇಮಕ ಮಾಡಿದೆ. ಅದರಂತೆ ಉತ್ತರವಲಯಕ್ಕೆ ನೇಮಕಗೊಂಡಿರುವ ಎಡಿಜಿಪಿ ಭಾಸ್ಕರ್ ರಾವ್ ಶುಕ್ರವಾರ ಬೆಳಗಾವಿಗೆ ಧಾವಿಸಿ ವಿವಿಧ ಸಮಾಜದ ಮುಖಂಡರ ಹಾಗೂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಜನರಲ್ಲಿ ಸ್ವಲ್ಪ ಧೈರ್ಯ ತುಂಬಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ