ಬೆಳೆ ಸಮೀಕ್ಷೆ ಪ್ರಚಾರ ರಥಕ್ಕೆ ಚಾಲನೆ
Team Udayavani, Aug 24, 2020, 5:00 PM IST
ಸಿರುಗುಪ್ಪ: ಪ್ರತಿಯೊಬ್ಬ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಿದ್ದು ರೈತರ ಬೆಳೆ ಸಮೀಕ್ಷೆ ಎಂಬ ಮೊಬೈಲ್ ಆ್ಯಪ್ ಇದ್ದು ಬಳಕೆ ಮಾಡುವ ವಿಧಾನವನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ವ್ಯಕ್ತಿಗಳನ್ನು ನೇಮಿಸಲಾಗುತ್ತಿದೆ ಎಂದು ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದಗುರುವಾರ ಹಮ್ಮಿಕೊಂಡಿದ್ದ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಈ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಡುವುದರಿಂದ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಇನ್ನಿತರೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಅನುಕೂಲವಾಗುವುದರಿಂದ ಪ್ರತಿಯೊಬ್ಬ ರೈತರು ಮೊಬೈಲ್ ಆ್ಯಪ್ ದಾಖಲಿಸಬೇಕೆಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್, ಮುಖಂಡರಾದ ಮಹಾದೇವಪ್ಪ, ಪಂಪನಗೌಡ, ಮಂಜು, ದೇವೇಂದ್ರಪ್ಪ ಇದ್ದರು.
ಹಡಗಲಿ: ರೈತರಿಗೆ ಬೆಳೆ ಸಮೀಕ್ಷೆ ಮಾಹಿತಿ : ತಾಲೂಕಿನ ದೇವಗೊಂಡನಹಳ್ಳಿ ಗ್ರಾಮದಲ್ಲಿ ರೈತರಿಗೆ ಬೆಳೆ ಸಮೀಕ್ಷೆ ಕುರಿತು ರೈತರ ಹೊಲಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಯಿತು. ಕಂದಾಯ ಸಹಾಯಕ ಆಯಕ್ತ ಪ್ರಸನ್ನ ರೈತರಿಗೆ ಬೆಳೆ ಸಮೀಕ್ಷೆ ತಂತ್ರಾಂಶ ಕುರಿತು ಯಾವ ರೀತಿ ಉಪಯೋಗಿಸಬೇಕು. ಬೆಳೆ ಸಮೀಕ್ಷೆ ಕುರಿತು ನಿಖರತೆಯನ್ನು ರೈತರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಮೂಲಕವಾಗಿ ಸಮೀಕ್ಷೆ ಮಾಡಿಕೊಳ್ಳಬಹುದು ಎನ್ನುವ ಕುರಿತು ಮಾಹಿತಿ ನೀಡಿದರು. ಈಸಂದರ್ಭದಲ್ಲಿ ತಹಶೀಲ್ದಾರ್ ವಿಜಯ್ ಕುಮಾರ್ ಹಾಗೂ ಗ್ರಾಮದ ರೈತರೂ ಇದ್ದರು.