ಬೀದರನಲ್ಲಿ ನಾಡಿದ್ದು ಶಿಕ್ಷಕರ ಪ್ರತಿಭಟನಾ ರ್ಯಾಲಿ
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೋರಾಟ
Team Udayavani, Jul 7, 2019, 11:55 AM IST
ಭಾಲ್ಕಿ: ಪ್ರತಿಭಟನಾ ರ್ಯಾಲಿ ಕುರಿತು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ ಮಾಹಿತಿ ನೀಡಿದರು.
ಭಾಲ್ಕಿ: ಪ್ರಾಥಮಿಕ ಶಾಲಾ ಶಿಕ್ಷಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.9 ರಂದು ಬೀದರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಿಂದ ಸುಮಾರು 1 ಸಾವಿರ ಶಿಕ್ಷಕರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಸುಂಟೆ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಸೂಕ್ತ ವೇತನ ಶ್ರೇಣಿ ನಿಗದಿಪಡಿಸುವುದು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು, ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸುವುದು, ಈಗಾಗಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್ ತಿಂಗಳಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸುವುದು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆಯನ್ನು ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ನೇಮಿಸುವುದು, 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯಗುರುಗಳಿಗೆ ಬಡ್ತಿ ನೀಡುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಸೇವೆ ಸೌಲಭ್ಯಗಳನ್ನು ಒದಗಿಸಬೇಕು ಎನ್ನುವುದು ಶಿಕ್ಷಕರ ಪ್ರಮುಖ ಬೇಡಿಕೆಗಳಾಗಿವೆ. ಕೇಂದ್ರ ಸಂಘದ ಕಾರ್ಯಕಾರಣಿಯ ನಿರ್ದೇಶನದಂತೆ ಅಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಲಿದೆ. ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕಡ್ಡಾಯವಾಗಿ ಈ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಎಲ್ಲ ಶಿಕ್ಷಕರು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಷಡಕ್ಷರಿಸ್ವಾಮಿ, ತಾಲೂಕು ಸಂಘದ ಗೌರವಾಧ್ಯಕ್ಷ ನಾಗಭೂಷಣ ಮಾಮಡಿ, ಉಪಾಧ್ಯಕ್ಷ ರಾಜಪ್ಪ ಪಾಟೀಲ ಮನವಿ ಮಾಡಿದರು. ಕಾರ್ಯದರ್ಶಿ ರತ್ನದೀಪ ಹುಲಸೂರೆ, ಸಹ ಕಾರ್ಯದರ್ಶಿ ಸುನೀತಾ ಮಮ್ಮಾ, ಉಪಾಧ್ಯಕ್ಷ ಗಣಪತಿ ಭಕ್ತಾ, ಸಂಘಟನಾ ಕಾರ್ಯದರ್ಶಿ ಮಂಜುಳಾ ಮೋರೆ, ತಾಲೂಕು ಸಂಘದ ಸಂಘಟನಾ ಕಾರ್ಯದರ್ಶಿ ಗೌರಮ್ಮ ಮೇತ್ರೆ, ಇಂದುಮತಿ ಕಲ್ಲೂರೆ, ಚಂದ್ರಕಲಾ ಡಿಗ್ಗೆ, ಸಹ ಕಾರ್ಯದರ್ಶಿ ಚನ್ನಪ್ಪ ಮೇತ್ರೆ, ನಜೀರಾ ಬೇಗಂ, ಪ್ರಭು ಡಿಗ್ಗೆ ಸೇರಿದಂತೆ ಹಲವರು ಇದ್ದರು.