ನೀರು ಪೂರೈಕೆಗೆ ಆಗ್ರಹಿಸಿ ಗ್ರಾಪಂಗೆ ಬೀಗ
Team Udayavani, May 4, 2019, 2:55 PM IST
ಬೀದರ: ಮರಕುಂದಾ ಗ್ರಾಮದಲ್ಲಿ ಸಮರ್ಪಕ ನೀರು ಪೂರೈಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಬೀದರ: ತಾಲೂಕಿನ ಮರಕುಂದಾ ಗ್ರಾಮಸ್ಥರಿಗೆ ಗ್ರಾಪಂ ಸೂಕ್ತವಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಶುಕ್ರವಾರ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿಗಾಗಿ ಗ್ರಾಮದಲ್ಲಿ ಸಮಸ್ಯೆ ಉಂಟಾದರೂ ಪಂಚಾಯತ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾಮದ ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿಲ್ಲ. ನೀರು ಇದ್ದರು ಕೂಡ ಕುಂಟುನೆಪ ಹೇಳುತ್ತಿದ್ದಾರೆ. ಪದೇ ಪದೇ ಕೊಳವೆಬಾವಿ ಮೋಟಾರ್ ರಿಪೇರಿ ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಮೋಟಾರ್ ರಿಪೇರಿ ಮಾಡಿಸಲು ಯಾರೊಬ್ಬರು ಮುಂದಾಗುತ್ತಿಲ್ಲ.
ಅಧಿಕಾರಿಗಳು ಹಾಗೂ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಸಮಸ್ಯೆ ಅನುಭವಿಸಬೇಕಾಗಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಅಧಿಕಾರಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮೂಬೈಲ್ ಮೂಲಕ ಪಂಚಾಯತ ಇಂಜಿನಿಯರ್ ಮಲ್ಲಿಕಾರ್ಜುನ ಅವರನ್ನು ಕರೆಸಿಕೊಂಡರು. ಇಂಜಿನಿಯರ್ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅವರಿಗೂ ತರಾಟೆಗೆ ತೆಗೆದುಕೊಂಡರು. ಪದೇ ಪದೇ ಸಮಸ್ಯೆ ಕುರಿತು ಹೇಳಿದರು ಕೂಡ ಯಾವ ಕಾರಣಕ್ಕೆ ಕೆಲಸ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಇಂಜಿನಿಯರ್ ಮೋಟಾರ್ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಬದಲಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಗ್ರಾಮದಲ್ಲಿ ನೀರು ಇದರೂ ಯಾವ ಕಾರಣಕ್ಕೆ ಟ್ಯಾಂಕರ್ ಹಚ್ಚಬೇಕು ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಕೂಡಲೇ ಮೋಟಾರ್ ರಿಪೇರಿ ಮಾಡಿಸಬೇಕು. ಇಲ್ಲವಾದರೆ ಪಂಚಾಯತ ಕಚೇರಿಗೆ ಬೀಗ ಜಡಿದು ಧರಣಿ ನಡೆಸುವುದಾಗಿ ಎಚ್ಚರಿಸಿದರು.