2023ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಲಕ್ಷ್ಮೀ ನಾರಾಯಣ
Team Udayavani, Oct 14, 2021, 11:57 AM IST
ಯಾದಗಿರಿ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನತೆ ಇದರಿಂದ ಬೇಸತ್ತಿದ್ದು, ಮುಂದೆ ಬದಲಾವಣೆ ಖಚಿತವಾಗಿದೆ. 2023ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ವರದಿ ತನ್ನ ಬಳಿ ಇಟ್ಟುಕೊಂಡಿದ್ದು, ಬಿಡುಗಡೆಗೊಳಿಸಲು ಮಾತ್ರ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ವರದಿಯಲ್ಲಿ ಏನಿದೆ ಎಂಬ ಬಗ್ಗೆ ರಾಜ್ಯದ ಜನತೆಗೆ ತಿಳಿಯಬೇಕಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ಸಿದ್ಧಪಡಿಸಲಾದ ವರದಿ ಸರ್ಕಾರದ ನಿರ್ಲಕ್ಷ್ಯತನದಿಂದ ಧೂಳು ತಿನ್ನುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದಾಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ 169 ಕೋಟಿ ರೂ. ಖರ್ಚು ಮಾಡಿ ರಾಜ್ಯಾದ್ಯಂತ ಸಾಮಾಜಿಕ ಜಾತಿ, ಜನಗಣತಿ ನಡೆಸಿದ್ದರು. ಆಯೋಗ 2018ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ವರದಿ ಸಲ್ಲಿಸಿದೆ ಎಂದರು.
ಇದನ್ನೂ ಓದಿ: ಕೆಟ್ಟ ಶಬ್ದ ಬಳಕೆ ಶೋಭೆಯಲ್ಲ : ಬಾದರ್ಲಿ
ಪೆಟ್ರೋಲ್, ಡೀಸೆಲ್ ಹಾಗೂ ಅಡಿಗೆ ಅನಿಲದ ಬೆಲೆ ಗಗನಕ್ಕೇರಿವೆ. ಇದರಿಂದ ಶ್ರೀಸಾಮಾನ್ಯ ಜೀವನ ನಡೆಸುವುದು ಕಷ್ಟವಾಗಿದ್ದು, ಬರುವ ದಿನಗಳಲ್ಲಿ ಬಿಜೆಪಿಗೆ ಮತದಾರ ತಕ್ಕಪಾಠ ಕಲಿಸಲಿದ್ದಾನೆ. ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆ ಹೆಚ್ಚಾಗಿದೆ. ಸಿಂಧಗಿ, ಹಾನಗಲ್ಲ ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ. ನಮ್ಮ ಪಕ್ಷದ ನಾಯಕರು ಈಗಾಗಲೇ ಗೆಲುವಿನ ರಣತಂತ್ರ ಹೆಣೆದಿದ್ದಾರೆ ಎಂದು ತಿಳಿಸಿದರು.
ಇದೆ ವೇಳೆ ಕೆಪಿಸಿಸಿ ಒಬಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಭಂಡಾರೆಪ್ಪ ನಾಟೆಕಾರ್ಗೆ ಪಕ್ಷದ ಧ್ವಜ ಸನ್ಮಾನಿಸಿದರು. ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ಪ್ರಮುಖರಾದ ಶ್ರೀನಿವಾಸರಡ್ಡಿ ಕಂದಕೂರ, ಸುರೇಶ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ನಾಯಕ, ಬಸ್ಸುಗೌಡ ಬಿಳ್ಳಾರ, ಡಾ| ಭೀಮಣ್ಣ ಮೇಟಿ, ರಾಘವೇಂದ್ರ ಖಾನಾಪುರ ಇದ್ದರು.