ವಾರದಲ್ಲಿ ಮನೆ ಆರಂಭಿಸದಿದ್ದರೆ ಹಕ್ಕು ಪತ್ರ ವಾಪಸ್!
Team Udayavani, Jan 20, 2022, 5:13 PM IST
ಮಸ್ಕಿ: ನಿವೇಶನ, ಆಶ್ರಯ ಮನೆ ಸೌಕರ್ಯ ಪಡೆದಿದ್ದರೂ ಇದುವರೆಗೂ ಮನೆ ಕಟ್ಟಿಕೊಳ್ಳದ ಫಲಾನುಭವಿಗಳಿಗೆ ಪುರಸಭೆ ಶಾಕ್ ನೀಡಿದ್ದು, ಒಂದು ವಾರದಲ್ಲೇ ಮನೆ ಕಾಮಗಾರಿ ಆರಂಭಿಸದೇ ಇದ್ದರೆ ನಿವೇಶನಗಳ ಹಂಚಿಕೆಯನ್ನೇ ರದ್ದುಪಡಿಸಿ ಹಕ್ಕುಪತ್ರ ವಾಪಸ್ ಪಡೆಯುವ ಎಚ್ಚರಿಕೆ ನೀಡಿದೆ.
ಪಟ್ಟಣದ ಕವಿತಾಳ ರಸ್ತೆಯ ಚಿಕ್ಕ ಸವದತ್ತಿ ಯಲ್ಲಮ್ಮ ದೇವಸ್ಥಾನ ಮುಂಭಾಗದ ಸರ್ವೇ ನಂ.171ರಲ್ಲಿ ನಿವೇಶನ ಪಡೆದ 179 ಫಲಾನುಭವಿಗಳಿಗೆ ಈಗ ಇಂತಹ ಫಜೀತಿ ಎದುರಾಗಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎರಡು ತಿಂಗಳಲ್ಲಿ ಮನೆ ಕಟ್ಟಿಕೊಳ್ಳದಿದ್ದರೆ ಅಂತಹ ಫಲಾನುಭವಿಗಳ ಹಕ್ಕುಪತ್ರ ರದ್ದುಪಡಿಸಿ ಹಿಂಪಡೆಯುವಂತೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಸಭೆ ತೀರ್ಮಾನದಂತೆ ಈಗ ಪುರಸಭೆ ಇಂತಹ ಅಸ್ತ್ರ ಪ್ರಯೋಗಿಸಿದೆ.
ನಿವೇಶನ ಪಡೆದ ಎಲ್ಲ 179 ಫಲಾನುಭವಿಗಳಿಗೆ ಅಂತಿಮ ನೋಟಿಸ್ ನೀಡಲಾಗಿದ್ದು, ವಾರದಲ್ಲಿ ಮನೆ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ಮನೆ ಕಾಮಗಾರಿ ಆರಂಭಿಸದಿದ್ದರೆ ಯಾವುದೇ ಮುಲಾಜಿಲ್ಲದೇ ಹಕ್ಕುಪತ್ರ ಹಿಂಪಡೆಯ ಲಾಗುವುದು ಎಂದು ಪುರಸಭೆ ಮುಖ್ಯಾಧಿ ಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಏನಿದು ಯೋಜನೆ?
ನಿವೇಶನ ಮತ್ತು ಮನೆ ಇಲ್ಲದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಪ್ರಧಾನಮಂತ್ರಿ ಆವಾಸ್ ವಸತಿ ಯೋಜನೆಯಡಿ 5 ಎಕರೆ ಜಮೀನು ಖರೀದಿಸಿ ನಿವೇಶನ ರಹಿತ ಫಲಾನುಭವಿಗಳಿಗೆ 2019-20ರಲ್ಲಿ ಹಂಚಿಕೆ ಮಾಡಲಾಗಿತ್ತು. ಇಲ್ಲಿನ ನಿವೇಶನಗಳ ಹಕ್ಕುಪತ್ರವನ್ನೂ ಫಲಾನುಭವಿಗಳಿಗೆ ವಿತರಿಸಲಾಗಿತ್ತು. ವಸತಿ ಯೋಜನೆ ನಿಯಮದಂತೆ ನಿವೇಶನ ಪಡೆದ ಫಲಾನುಭವಿಗಳು ವರ್ಷದಲ್ಲಿ ಮನೆ ಕಟ್ಟಿಕೊಂಡು ಕೇಂದ್ರ ಸರ್ಕಾರದ ಸಹಾಯಧನ 1.50 ಲಕ್ಷ ಪಡೆಯಬೇಕು. ಆದರೆ, ನಿವೇಶನ ಪಡೆದವರು ವರ್ಷ ಕಳೆದರೂ ಮನೆ ಕಟ್ಟಿಕೊಂಡಿಲ್ಲ. ಈ ಬಗ್ಗೆ ಹಲವು ಬಾರಿ ಫಲಾನುಭವಿಗಳಿಗೆ ಪುರಸಭೆಯಿಂದ ನೋಟಿಸ್ ನೀಡಿದ್ದರೂ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಫಲಾನುಭವಿಗಳನ್ನೇ ರದ್ದುಪಡಿಸುವ ಕಾರ್ಯಕ್ಕೆ ಕೈ ಹಾಕಲಾಗಿದೆ.
ಒಂದು ವಾರ ಗಡುವು
ಪ್ರಧಾನಮಂತ್ರಿ ಆವಾಸ್ ವಸತಿ ಯೋಜನೆಯಡಿ ನಿವೇಶನ ಪಡೆದ ಫಲಾನುಭವಿಗಳು ತಮಗೆ ನೀಡಲಾದ ನಿವೇಶನಗಳಲ್ಲಿ ಒಂದು ವಾರದಲ್ಲಿ ಮನೆ ಕಾಮಗಾರಿ ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಒಂದು ವೇಳೆ ಮನೆ ಕಾಮಗಾರಿ ಆರಂಭಿಸದಿದ್ದರೆ ನಿವೇಶನ ರದ್ದುಪಡಿಸಲಾಗುವುದು ಎಂದು ನೋಟಿಸ್ನಲ್ಲಿ ಪ್ರಸ್ತಾಪಿಸಿದೆ. ಅಲ್ಲದೇ ಫಲಾನುಭವಿಗಳು ವಾರದಲ್ಲಿ ಮನೆ ಕಟ್ಟಡ ಆರಂಭಿಸಿ ಎರಡು ತಿಂಗಳೊಳಗಾಗಿ ಕಟ್ಟಡ ಪೂರ್ಣಗೊಳಿಸಬೇಕು. ಒಂದು ವೇಳೆ ಕಟ್ಟಡ ಕಟ್ಟಿಕೊಳ್ಳದೇ ಇದ್ದವರನ್ನು ರದ್ದು ಮಾಡಿ ಹೊಸಬರ ಆಯ್ಕೆ ಮಾಡಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ತಿಳಿಸಿದ್ದಾರೆ.
ಸೌಲಭ್ಯಗಳೇ ಇಲ್ಲ
ಪಟ್ಟಣದ ಕವಿತಾಳ ರಸ್ತೆಯ ಚಿಕ್ಕ ಸವದತ್ತಿ ಯಲ್ಲಮ್ಮ ದೇವಸ್ಥಾನ ಮುಂಭಾಗದ ಸರ್ವೇ ನಂ. 171ರಲ್ಲಿ ನಿವೇಶನ ಹಂಚಿಕೆಯಾದ ಲೇಔಟ್ನಲ್ಲಿ ಇದುವರೆಗೂ ಮೂಲ ಸೌಕರ್ಯಗಳ ಅಭಿವೃದ್ಧಿಯೇ ಇಲ್ಲ. ಕುಡಿವ ನೀರು, ವಿದ್ಯುತ್ ಸಂಪರ್ಕ, ರಸ್ತೆ ವ್ಯವಸ್ಥೆ ಕೂಡ ಇಲ್ಲ. ಇಂತಹ ಅವ್ಯವಸ್ಥೆಯಲ್ಲಿ ಮನೆ ಹೇಗೆ ಕಟ್ಟಿಕೊಳ್ಳಬೇಕು? ಎನ್ನುವುದು ಫಲಾನುಭವಿಗಳ ಪ್ರಶ್ನೆ.
ನಿವೇಶನ ಪಡೆದವರಿಗೆ ಈಗಾಗಲೇ ಸಾಕಷ್ಟು ನೋಟಿಸ್ ನೀಡಲಾಗಿದೆ. ಇದೀಗ ಕೊನೆ ನೋಟಿಸ್ ನೀಡಲಾಗುತ್ತಿದ್ದು ಒಂದೆರಡು ದಿನಗಳಲ್ಲಿ ಫಲಾನುಭವಿಗಳ ಸಭೆ ಕರೆದು ಮನೆ ಕಟ್ಟಿಸಿಕೊಳ್ಳಲು ಸೂಚಿಸಲಾಗುವುದು. ಸ್ಪಂದಿಸದಿದ್ದರೆ ಹಕ್ಕುಪತ್ರ ರದ್ದುಪಡಿಸುತ್ತೇವೆ. -ಹನುಮಂತಮ್ಮ ನಾಯಕ, ಮುಖ್ಯಾಧಿಕಾರಿ, ಪುರಸಭೆ
-ಮಲ್ಲಿಕಾರ್ಜುನ ಚಿಲ್ಕರಾಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ