ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ
Team Udayavani, Dec 15, 2021, 11:21 AM IST
ಔರಾದ: ಶೈಕ್ಷಣಿಕ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಅಖೀಲ ಭಾರತಿಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಕೆಲಕಾಲ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳಿ ಮಾತನಾಡಿ, ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಿಕ್ಷಣ ಪಡೆಯಲು ಮುಂದಾಗಬೇಕು. ಕಳೆದ ವರ್ಷ ಕೋವಿಡ್ನಿಂದ ಸಾರಿಗೆ ಸಂಚಾರ ನಿಲ್ಲಿಸಿದ್ದು, ಕೆಲ ಗ್ರಾಮಕ್ಕೆ ಇಲಾಖೆ ಬಸ್ ಸಂಚಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಶಾಲೆ-ಕಾಲೇಜುಗಳು ಆರಂಭವಾಗಿದ್ದರಿಂದ ವಿದ್ಯಾರ್ಥಿಗಳು ಉತ್ಸಾಹದಿಂದ ಬರುತ್ತಿದ್ದಾರೆ. ಕೋವಿಡ್ನಿಂದ ಬದಲಾದ ತರಗತಿಗೆ ಹಾಜರಾಗಲು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾಲೂಕಿನಲ್ಲಿರುವ ಸಾವಿರಾರು ಡಿಪ್ಲೊಮಾ ಎಂಜಿನಿಯರಿಂಗ್ -ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ತಕ್ಷಣಕ್ಕೆ ಬಿಡುಗಡೆ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲು ಸರ್ಕಾರ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಹಾವಪ್ಪಾ ದ್ಯಾಡೆ, ಅನೀಲ ಮೇತ್ರೆ, ನವನಾಥ ಕೋಳಿ, ಮಾರುತಿ ಸೂರ್ಯವಂಶಿ, ಆಕಾಶ ಕದಂ, ಹಣಮಂತ, ನಿಖೀತಾ, ಅಶ್ವಿನಿ, ಶ್ರೀದೇವಿ, ಸುಧಾರಾಣಿ ಸೇರಿದಂತೆ ಇತರ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರು ಇದ್ದರು.