ಸೇವೆ-ಸಮರ್ಪಣೆ ಅಭಿಯಾನ; ಅರುಣ್ಸಿಂಗ್ಗೆ ವರದಿ ಸಲ್ಲಿಕೆ
Team Udayavani, Nov 12, 2021, 11:35 AM IST
ಬೀದರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣೆ ಅಭಿಯಾನದಲ್ಲಿ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಕೈಗೊಂಡ ವಿವಿಧ ಸಾಮಾಜಿಕ ಚಟುವಟಿಕೆಗಳ ವರದಿಯನ್ನು ರಾಜ್ಯ ಅಭಿವೃದ್ಧಿ, ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಬೆಂಗಳೂರಿನಲ್ಲಿ ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಸಲ್ಲಿಸಿದರು.
ಅಭಿಯಾನದ ಅವಧಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಹಲವು ಜನೋಪಯೋಗಿ ಕಾರ್ಯ ಕೈಗೊಳ್ಳಲಾಗಿದೆ. ಬಡ ಮಕ್ಕಳಿಗೆ ಆಹಾರಧಾನ್ಯ ಕಿಟ್ ವಿತರಣೆ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಕೋವಿಡ್ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಕೋವಿಡ್ ಲಸಿಕಾಕರಣ ಗುರಿ ಸಾಧನೆಗೆ ಎಲ್ಲ ರೀತಿಯ ಸಹಕಾರ ನೀಡಲಾಗಿದೆ ಎಂದು ಹೇಳಿದರು.
ನಗರದ ಐತಿಹಾಸಿಕ ಪಾಪನಾಶ ಕೆರೆ ಶುಚಿಗೊಳಿಸಲಾಗಿದೆ. ಅನೇಕ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಸಾಮಾಜಿಕ ಚಟುವಟಿಕೆಗಳು ಈಗಲೂ ಮುಂದುವರಿದಿವೆ. ಕೋವಿಡ್ ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಜನರ ನೆರವಿಗೆ ಬಂದ ವಿವಿಧ ಚಟುವಟಿಕೆಗಳ ವರದಿ ಕೂಡ ಅವರು ಸಲ್ಲಿಸಿದರು.