ಉದ್ಯೋಗ ಮನೋಭಾವ ಬೆಳೆಸಿಕೊಳ್ಳಿ
Team Udayavani, Feb 24, 2019, 9:39 AM IST
ವಿಜಯಪುರ: ವಿದ್ಯಾರ್ಥಿ ಜೀವನದ ಹಂತದಲ್ಲೇ ಯುವ ಸಮೂಹ ಉದ್ಯೋಗ ಪಡೆಯುವ ಅರ್ಹತೆ ಹಾಗೂ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ಸಲಹೆ ನೀಡಿದರು.
ಶನಿವಾರ ನಗರದ ದರಬಾರ್ ಹೈಸ್ಕೂಲ್ ಆವರಣದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯೋಗಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ನಡೆದ ಎರಡು ದಿನಗಳ ಮಿನಿ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉದ್ಯೋಗ ಮೇಳದಲ್ಲಿ ವಿಜಯಪುರ ಜಿಲ್ಲೆಯ 6,252 ಹಾಗೂ ಬಾಗಲಕೋಟೆ ಜಿಲ್ಲೆಯ 5,172 ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದಾರೆ. ವಿದ್ಯಾರ್ಥಿಗಳು ಅತ್ಯುತ್ತಮ ವಿದ್ಯಾಭ್ಯಾಸ ಪಡೆಯುವ ಜೊತೆಗೆ ಉದ್ಯೋಗ ಮಾಡುವಂತಹ ಮುಂದಾಲೋಚನೆ ಮಾಡಬೇಕು.
ಉದ್ಯೋಗಾಕಾಂಕ್ಷಿಗಳು ಕೇಂದ್ರ ಸರ್ಕಾರದ ಉದ್ಯೋಗಾಧಾರಿತ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮೇಲ್ಮನೆ ಸದಸ್ಯ ಅರುಣ ಶಹಾಪುರ ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ದಿಶೆಯಲ್ಲಿ ಇಂತಹ ಉದ್ಯೋಗ ಮೇಳಗಳು ಮುಖ್ಯ ವೇದಿಕೆಯಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರುದ್ಯೋಗಿ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಕಲ್ಪಿಸಲು ಬದ್ಧವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಮಾತನಾಡಿ, ನಿರುದ್ಯೋಗಿ ಯುವ ಜನಾಂಗಕ್ಕೆ ಸೇವಾ ಭದ್ರತೆ ಕಲ್ಪಿಸಿ, ಮನೆ ಬಾಗಿಲಿಗೆ ಉದ್ಯೋಗ ಕಲ್ಪಿಸುವ ವಿಶೇಷ ಕಾರ್ಯಕ್ರಮ ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಪ್ರತಿಭೆಯುಳ್ಳ ಯುವ ಜನಾಂಗಕ್ಕೆ ಈ ಉದ್ಯೋಗ ಮೇಳದ
ಮೂಲಕ ವಿಫುಲ ಅವಕಾಶ ಕಲ್ಪಿಸಿರುವುದು ಸಂತಸದ ವಿಷಯವಾಗಿದೆ ಎಂದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಮತ್ತು ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಹಮ್ಮಿಕೊಂಡಿದೆ. ಇಲ್ಲಿ ಭಾಗವಹಿಸಿದ ವಿವಿಧ ಉದ್ದಿಮೆ ಹಾಗೂ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಲಾಗಿದೆ. ಅವಳಿ ಜಿಲ್ಲೆಗಳ ನಿರುದ್ಯೋಗಿ ಯುವ ಜನಾಂಗಕ್ಕೆ ಸ್ಥಳದಲ್ಲೇ ದ್ಯೋಗಾವಕಾಶ ಕಲ್ಪಿಸುತ್ತಿದ್ದೇವೆ. ಇಲ್ಲಿ ನೇಮಕ ಮಾಡಿಕೊಳ್ಳುವ ಉದ್ಯೋಗದಾತರು ಕೂಡ ಅಭ್ಯರ್ಥಿಗಳ ಭವಿಷ್ಯಕ್ಕಾಗಿ ಉದ್ಯೋಗ ಖಾತ್ರಿ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ವಿವಿಧ ಕಂಪನಿಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಸೇವಾ ಭದ್ರತೆ ಕಲ್ಪಿಸುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ಸಂದರ್ಭದಲ್ಲಿ ಮೋಸ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ನೇಮಕ ಮಾಡಿಕೊಂಡು ಉದ್ಯೋಗ ಕಲ್ಪಿಸಲು ಯಾವುದೇ ರೀತಿಯ ತೊಂದರೆ ನೀಡುವಂತಹ ಉದ್ಯೋಗದಾತ ಕಂಪನಿಗಳ ವಿರುದ್ಧ ಸಹ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ 67ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕವೂ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತಿದೆ. ಜಿಪಂ ಸಿಇಒ ವಿಕಾಸ ಸುರಳಕರ, ಕೆಐಎಡಿಬಿ ಅಧ್ಯಕ್ಷ ಎಸ್.ಬಿ. ಪಾಟೀಲ, ಎಡಿಸಿ ಎಚ್.ಪ್ರಸನ್ನ, ಮೇಯರ್ ಶ್ರೀದೇವಿ
ಲೋಗಾವಿ, ವಾಣಿಜ್ಯ ಮಂಡಳಿ ಅಧ್ಯಕ್ಷ ದೊಡ್ಡಪ್ಪ ಗುಡ್ಡೊಡಗಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ರಮೇಶ ದೇಸಾಯಿ ಇದ್ದರು. ಕೌಶಲ್ಯಾಭಿವೃದ್ಧಿ ಇಲಾಖೆಯ ಸುನಂದಾ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ವಂದಿಸಿದರು.