ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿ ನಿರ್ಲಕ್ಷ್ಯ ಎದ್ದುಕಾಣುತ್ತಿದೆ ಎಂದ ಬಿಜೆಪಿ ಸಂಸದ
Team Udayavani, Mar 27, 2021, 2:40 PM IST
ವಿಜಯಪುರ: ರಾಜ್ಯದಲ್ಲಿ 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಉತ್ಪಾದನೆಯ ಅರ್ಧದಷ್ಟೂ ವಿದ್ಯುತ್ ಬಳಸುತ್ತಿಲ್ಲ. ಇದರಿಂದ ರೈತರಿಗೆ ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪಕ್ಕೆ ಹೋಗಿದೆ. ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ನಿರ್ಲಕ್ಷ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಹರಿಹಾಯ್ದಿದ್ದಾರೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಎನ್ ಟಿಪಿಸಿ, ಆರ್ ಟಿಪಿಸಿ, ವೈಟಿಪಿಸಿ ಸೇರಿ 5800 ಮೆಗಾವ್ಯಾಟ್ ಉಷ್ಣ ವಿದ್ಯುತ್, ವಿವಿಧ ಜಲಾಶಯಗಳಿಂದ 3500 ಮೆಗಾವ್ಯಾಟ್ ಜಲ ವಿದ್ಯುತ್, 2000 ಮೆಗಾವ್ಯಾಟ್ ನ್ಯೂಕ್ಲಿಯರ್ ವಿದ್ಯುತ್, 4500 ಮೆಗಾವ್ಯಾಟ್ ಪವನ ವಿದ್ಯುತ್, 6500 ಮೆಗಾವ್ಯಾಟ್ ಸೌರ ವಿದ್ಯುತ್ ಸೇರಿದಂತೆ ರಾಜ್ಯದಲ್ಲಿ ಇದೀಗ ಸುಮಾರು 30 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವುದು ಕೇವಲ 14,500 ಮೆಗಾವ್ಯಾಟ್ ವಿದ್ಯುತ್ ಮಾತ್ರ. ಹಾಗಾದರೆ ರಾಜ್ಯದಲ್ಲಿ ಉತ್ಪಾದಿತ ವಿದ್ಯುತ್ ಎಲ್ಲಿ ಹೋಗುತ್ತಿದೆ. ಯಾರು ಮಾರಿಕೊಳ್ಳುತ್ತಿದ್ದಾರೆ, ಏಕೆ ಮಾರುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿದ್ದು, ಇದೀಗ ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆ ಹೆಚ್ಚುತ್ತಿದೆ. ಮತ್ತೊಂದೆಡೆ ಪಂಪ್ ಸೆಟ್ ಆಧಾರಿತ ಕೃಷಿಗೆ ಅಗತ್ಯ ಪ್ರಮಾಣದ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ರೈತರು ಹಳ್ಳಿಗಳಲ್ಲಿ ನಮ್ಮನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೇ ವಿದ್ಯುತ್ ಸಮಸ್ಯೆ ನಿವಾರಣೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿದ್ಯುತ್ ಸಮಸ್ಯೆ ಯಿಂದ ಬೆಳೆ ಕಳೆದುಕೊಳ್ಳುತ್ತಿರುವ ರೈತರು ಹೋದಲೆಲ್ಲಾ ನಮ್ಮನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ರಾತ್ರಿಯೇ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ. ಅಲ್ಲದೇ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದರು.