
ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ
Team Udayavani, Oct 26, 2021, 10:33 AM IST

ವಿಜಯಪುರ: ರಾಜ್ಯದಲ್ಲಿ ಬರುವ ಡಿಸೆಂಬರ್ ತಿಂಗಳಲ್ಲಿ ರಸ್ತೆಗಳ ದುರಸ್ತಿ, ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಭರವಸೆ ನೀಡಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿವೆ ಎಂಬುದು ಸತ್ಯ. ಹಿಂದಿನ ಸಚಿವರು ಕೋವಿಡ್, ಪ್ರವಾಹದಂಥ ಸಂಕಷ್ಟದ ಮಧ್ಯೆಯೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದರು.
ಸಿಂದಗಿ ಕ್ಷೇತ್ರದಲ್ಲಿ ರಮೇಶ ಭೂಸನೂರ 25 ಸಾವಿರ ಮತಗಳಿಂದ ಗೆಲುವು ಸಾಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ, ಕಡಿಮೆ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ ಕೆಲಸಗಳು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಮಾಡಿರುವ ಸಾಧನೆ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಭೂಸನೂರ ಮಾಡಿರುವ ಕೆಲಸಗಳು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಸಹಕಾರಿ ಆಗಲಿದೆ ಎಂದರು.
ಗೃಹ ಇಲಾಖೆ ಬಲವರ್ಧನೆ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನರೇಗಾ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲಾಗಿದೆ. ಹೀಗೆ ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ ಎಂದರು.
ಇದನ್ನೂ ಓದಿ:ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ
ಹಿಂದುಳಿದ ವರ್ಗಗಳ ಶಾಸ್ವತ ಆಯೋಗ, ಸುಭಾಶ ಆಡಿ ಸಮಿತಿ ವರದಿ ಆಧರಿಸಿ ಪಂಚಮಸಾಲಿ ಸಮುದಾಯಕ್ಕೆ ಮೀಸಲು ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ. ನಮ್ಮ ಸರ್ಕಾರ ಹಾಗೂ ಸಮುದಾಯದ ನಾಯಕನಾದ ನಾನು ಸೇರಿದಂತೆ ಸಮಾಜದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ಜೊತೆ ಸಂಪರ್ಕದಲ್ಲಿ ಇದ್ದೇವೆ. ಹೀಗಾಗಿ ಡೆಡ್ ಲೈನ್ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ಡೆಡ್ ಲೈನ್ ಕೊಡುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ವಿಜಯಾನಂದ ಕಾಶಪ್ಪನವರ ಧ್ವನಿ ಎಲ್ಲಿ ಹೋಗಿತ್ತು. ಸಮುದಾಯದ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜಯ ಜೋಶಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
