ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ
Team Udayavani, May 22, 2022, 12:33 PM IST
ಕೊಳ್ಳೇಗಾಲ: ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ತಾಲೂಕಿನ ಭರಚುಕ್ಕಿ ಜಲಪಾತ ಧುಮ್ಮಿಕ್ಕುತ್ತಿದ್ದು, ಹಾಲಿನ ನೊರೆಯಂತೆ ಬೀಳುತ್ತಿರುವ ನೀರು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಹೀಗಾಗಿ ಕಬಿನಿ, ಕೆಆರ್ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದ್ದು, ಈ ಜಲಾಶಯಗಳಿಂದ ಬರುವ ಅಲ್ಪಸ್ವಲ್ಪ ನೀರಿನ ಜೊತೆಗೆ ಕೆರೆ-ಕಟ್ಟೆ, ಹಳ್ಳದ ನೀರು ಕಾವೇರಿ ನದಿಗೆ ಸೇರುತ್ತಿದೆ. ಇದರಿಂದ ನದಿ ನೀರಿನ ಹರಿವು ಬಿರುಸುಗೊಂಡಿದ್ದು, ಜಲಪಾತದಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಧುಮ್ಮಿಕ್ಕುವ ರುದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ಐಟಿ, ಬಿಟಿ ಉದ್ಯೋಗಿಗಳಿಗೆ ಶನಿವಾರ ರಜೆ ಇರುವ ಕಾರಣ, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನೀರು ನೋಡಿ ಖುಷಿಪಟ್ಟರು. ಭಾನುವಾರ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದ್ದು, ಯಾವುದೇ ತರಹದ ತೊಂದರೆ ಆಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಿಂಡಿ ತಿನಿಸುಗಳ ಅಂಗಡಿಗಳು ತಲೆ ಎತ್ತಿವೆ. ಹೊಸದಾಗಿ ವಿವಾಹವಾದ ದಂಪತಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದೆ.