ಚೆಕ್ಪೋಸ್ಟ್ಗಳಲ್ಲಿ ಕಟ್ಟು ನಿಟ್ಟಿನ ನಿಗಾವಹಿಸಿ
Team Udayavani, May 8, 2020, 5:56 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಪಾಲನೆ ಬಗ್ಗೆ ಎಲ್ಲ ಚೆಕ್ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಲಾಕ್ ಡೌನ್ ಪಾಲನೆ ಸಂಬಂಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದರು. ಚೆಕ್ಪೋಸ್ಟ್ಗಳಲ್ಲಿ ತಪಾಸಣಾ ಕಾರ್ಯ ಬಿಗಿಯಾಗಿ ನಿರ್ವಹಿಸಬೇಕು. ಇದೇ ವೇಳೆ ನಾಗರಿಕರಿಗೆ ಅನವಶ್ಯಕವಾಗಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಸಮನ್ವಯದಿಂದ ಮುಂಜಾಗ್ರತಾ ಕ್ರಮ ಹಾಗೂ ನಾಗರಿಕರಿಗೆ ಅಗತ್ಯ ಸೌಲಭ್ಯಗಳಿಗೆ ಅವಕಾಶವಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಉಸ್ತುವಾರಿ ಸಚಿವರು ತಿಳಿಸಿದರು.
ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆಯೂ ಅರಿವು ಮೂಡಿಸಬೇಕು. ಅಂಗಡಿ ಗಳಲ್ಲಿ ಸ್ಯಾನಿಟೈಸರ್ ಬಳಸಬೇಕು. ಬಳಸಿದ ಮಾಸ್ಕ್ ಗಳನ್ನು ಎಲ್ಲೆಂದರಲ್ಲಿ ಬಿಸಾಡಂತೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಚಿವರು ತಿಳಿಸಿದರು.
ಡೀಸಿ ಡಾ. ಎಂ.ಆರ್.ರವಿ ಮಾತನಾಡಿ, ಕೋವಿಡ್ -19 ಮುಂಜಾಗ್ರತಾ ಕ್ರಮ ಪಾಲಿಸುವ ಬಗ್ಗೆ ಪರಿಶೀಲಿಸಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಈ ಅಧಿಕಾರಿಗಳು ನಿಯಮ ಉಲ್ಲಂ ಸುವವರ ವಿರುದ್ಧ ಕ್ರಮ ವಹಿಸಿ ದಂಡ ವಿಧಿಸಲಿದ್ದಾರೆ ಎಂದು ಹೇಳಿದರು. ಶಾಸಕರಾದ ಮಹೇಶ್, ನಿರಂಜನ್ ಕುಮಾರ್, ಜಿಪಂ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಡಾ. ರವಿ, ಜಿಪಂ ಸಿಇಒ ನಾರಾಯಣ್ರಾವ್, ಎಸ್ಪಿ ಆನಂದ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್, ಡಿಎಚ್ಒ ಡಾ.ಎಂ.ಸಿ.ರವಿ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್, ಡಾ.ಸಂಜೀವ್, ಎಸಿ ನಿಖೀತಾ ಹಾಜರಿದ್ದರು.