ಕುಡಿವ ನೀರಿಗಾಗಿ ಕ್ರಿಯಾಯೋಜನೆ ರೂಪಿಸಿ
Team Udayavani, Feb 12, 2020, 3:00 AM IST
ಚಾಮರಾಜನಗರ: ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಗತ್ಯತೆಯನ್ನು ಪರಿಶೀಲಿಸಿ, ಶೀಘ್ರವಾಗಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ, ಸಕಾಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೆçಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.
ಕುಡಿಯುವ ನೀರು ಮತ್ತು ಮೇವು ಸಂಗ್ರಹಣೆ ಬಗ್ಗೆ ಪರಾಮರ್ಶೆ ನಡೆಸಿದ ಉಸ್ತುವಾರಿ ಸಚಿವರು, ಬೇಸಿಗೆ ಸನ್ನಿಹಿತವಾಗುತ್ತಿರುವುದರಿಂದ ಕುಡಿಯುವ ನೀರಿನ ಪೂರೈಕೆ ಸಮರ್ಪಕ ರೀತಿಯಲ್ಲಿ ಆಗಬೇಕು. ಹೀಗಾಗಿ ಜಿಲ್ಲಾದ್ಯಂತ 3 ತಿಂಗಳ ಅವಧಿಗೆ ನೀರಿನ ಅಗತ್ಯತೆ ಬಗ್ಗೆ ಮಾಹಿತಿ ಕಲೆಹಾಕಿ, ಅದಕ್ಕೆ ತಕ್ಕಂತೆ ಪೂರೈಸಬೇಕು. ಜತೆಗೆ ಜಾನುವಾರುಗಳ ಮೇವಿನ ದಾಸ್ತಾನು ಬಗ್ಗೆಯೂ ಪರಿಶೀಲನೆ ನಡೆಸಿ, ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಕೆರೆ ಒತ್ತುವರಿ ತೆರವುಗೊಳಿಸಿ: ಜಿಲ್ಲೆಯಲ್ಲಿ ಇರುವ ಪ್ರತೀ ಕೆರೆ, ಅವುಗಳ ಸಾಮರ್ಥ್ಯ ಹಾಗೂ ನೀರಿನ ಲಭ್ಯತೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ತ್ವರಿತವಾಗಿ ವರದಿ ಸಲ್ಲಿಸಬೇಕು. ಅಲ್ಲದೆ, ಕೆರೆಗಳು ಒತ್ತುವರಿಗೆ ಒಳಪಟ್ಟಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಂಡು ಒತ್ತುವರಿ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು.
ಮಕ್ಕಳ ಆತ್ಮವಿಶ್ವಾಸಕ್ಕೆ ಕಾರ್ಯಾಗಾರ ನಡೆಸಿ: ಎಸ್ಎಸ್ಎಲ್ಸಿ ಪರೀಕ್ಷೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಪರಾಮರ್ಶಿಸಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆ ಹತ್ತಿರವಾಗುತ್ತಿರುವುದರಿಂದ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವ ರೀತಿಯ ಕಾರ್ಯಾಗಾರಗಳನ್ನು ಕೈಗೊಳ್ಳಬೇಕು. ಪರೀಕ್ಷೆ ಬಗೆಗೆ ಮಕ್ಕಳಲ್ಲಿರುವ ಭಯ ಹೋಗಲಾಡಿಸುವುದಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತಿಯೊಬ್ಬ ಅಧಿಕಾರಿ ಕನಿಷ್ಠ 5 ಶಾಲೆಗಳಿಗೆ ಭೇಟಿ ನೀಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿ, ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಅಗ್ನಿ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ: ಬಂಡೀಪುರ ಕಾಡ್ಗಿಚ್ಚು ತಡೆಯಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಸುರೇಶ್ ಕುಮಾರ್, ಈ ಬಾರಿ ಅರಣ್ಯ ಪ್ರದೇಶದಲ್ಲಿ ಯಾವುದೇ ರೀತಿಯ ಅಗ್ನಿ ಅವಘಡ ಸಂಭವಿಸದಂತೆ ಎಚ್ಚರ ವಹಿಸಬೇಕು. ಕಾಡು ಪ್ರಾಣಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೆ, ಸಾಮಾಜಿಕ ಅರಣ್ಯ ಇಲಾಖೆಯಿಂದ ಹೆಚ್ಚು ಮರಗಳನ್ನು ಬೆಳೆಸುವ ಜತೆಗೆ ರೈತರು, ಸಾರ್ವಜನಿಕರು ಹಾಗೂ ಸ್ವಯಂ-ಸೇವಾ ಸಂಸ್ಥೆಗಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದರು.
ನಿಖರ ವರದಿ ಸಿದ್ಧಪಡಿಸಿ: ಜಿಲ್ಲೆಯಲ್ಲಿರುವ ಎಲ್ಲಾ ವಸತಿನಿಲಯಗಳು, ಸಾಮರ್ಥ್ಯ ಹಾಗೂ ಅಗತ್ಯತೆ ಬಗ್ಗೆ ಪರಿಶೀಲಿಸಿ, ನಿಖರ ವರದಿ ಸಿದ್ಧಪಡಿಸಿ ಸಲ್ಲಿಸಬೇಕು. ಅಲ್ಲದೆ, ಜಿಲ್ಲೆಯಲ್ಲಿ ವಯಸ್ಕರ ಶಿಕ್ಷಣ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ, ಸ್ವಯಂ-ಸೇವಾ ಸಂಸ್ಥೆಗಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಂಡು, ಯಾವ ವ್ಯಕ್ತಿಯೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಜಿಲ್ಲೆಗಿರುವ ಹಿಂದುಳಿದ ಎಂಬ ಟ್ಯಾಗ್ ತೆಗೆದು ಹಾಕುವಲ್ಲಿ ಕೈಜೋಡಿಸಿ, ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಕೆಲಸಗಳು ಸಮರ್ಪಕವಾಗಿರಲಿ: ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ನರೇಗಾ ಯೋಜನೆಯಡಿ ಕೆಲಸಗಳು ಸಮರ್ಪಕವಾಗಿ ಆಗಬೇಕು. ಅರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ಗಳಿಂದ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಮಾತನಾಡಿ, ಬೆಳೆ ವಿಮೆ ತಲುಪದ ರೈತರಿಗೆ ಶೀಘ್ರಗತಿಯಲ್ಲಿ ತಲುಪಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದರು.
ಬೆಳೆ ವಿಮೆಗೆ ವಿಶೇಷ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಮಾತನಾಡಿ, ಬೆಳೆ ವಿಮೆ ಸಂಬಂಧ ಪ್ರತಿನಿತ್ಯದ ಪ್ರಕ್ರಿಯೆಯನ್ನು ಪರಿಶೀಲಿಸಲಾಗುತ್ತಿದೆ. ಶನಿವಾರ ಮತ್ತು ಭಾನುವಾರದ ರಜಾ ದಿನವು ಸಹ ಸಿಬ್ಬಂದಿ ಕಾರ್ಯನಿರ್ವಹಿಸಿ ಬೆಳೆ ವಿಮೆ ಕುರಿತ ಕೆಲಸವನ್ನು ಕೈಗೊಂಡಿದ್ದಾರೆ. ಬೆಳೆ ವಿಮೆ ಕುರಿತ ಕಾರ್ಯನಿರ್ವಹಣೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಹೇಳಿದರು.
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಎನ್. ಮಹೇಶ್ ಮಾತನಾಡಿಮ ಉಮ್ಮತ್ತೂರು ಕೆರೆಗೆ ನೀರು ತುಂಬಿಸುವ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು. ಸುಮಾರು 1.5 ಕಿ.ಮೀ. ಪೈಪ್ ಲೈನ್ ಅಳವಡಿಕೆಗೆ ಇರುವ ಅಡಚಣೆಗೆ ಪರಿಹಾರ ಕಂಡುಕೊಂಡು ಕಾಲಮಿತಿಯೊಳಗೆ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ನೆರವೇರಿಸುವಂತೆ ತಿಳಿಸಿದರು.
ಬೇಡಿಕೆಗೆ ತಕ್ಕಂತೆ ಪರಿಕರ ನೀಡಿ: ಶಾಸಕ ಆರ್. ನರೇಂದ್ರ ಮಾತನಾಡಿ, ಕುಡಿಯುವ ನೀರು, ಮೇವು ದಾಸ್ತಾನಿಗೆ ವಿಶೇಷ ಗಮನ ನೀಡಬೇಕು. ಕೃಷಿ ಇಲಾಖೆಯಿಂದ ಬೇಡಿಕೆಗೆ ತಕ್ಕಂತೆ ರೈತರಿಗೆ ಅಗತ್ಯವಿರುವ ಪರಿಕರಗಳನ್ನು ನೀಡಬೇಕು. ಹನೂರಿನಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ಅಪೂರ್ಣಗೊಂಡಿರುವ ಸಮುದಾಯ ಭವನಗಳ ನಿರ್ಮಾಣ, ಬಿಳಿಗಿರಿರಂಗನ ದೇವಸ್ಥಾನದ ಕಾಮಗಾರಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಉಸ್ತುವಾರಿ ಸಚಿವರು ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಕೆ.ಎಸ್.ಮಹೇಶ್, ಜಿ.ಪಂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾವತಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ ಮತ್ತಿತರರು ಹಾಜರಿದ್ದರು.
ಸಭೆಯಲ್ಲಿ ಮೊಬೈಲ್ ವೀಕ್ಷಣೆ ಬೇಡ: ಸಭೆಗಳಲ್ಲಿ ಕೆಲ ಅಧಿಕಾರಿಗಳು ಮೊಬೈಲ್ ವೀಕ್ಷಣೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಿವೆ. ಮಂಗಳವಾರ ನಡೆದ ಸಭೆಯಲ್ಲೂ ಸಹ ಕೆಲ ಅಧಿಕಾರಿಗಳು ಮೊಬೈಲ್ ವೀಕ್ಷಿಸುತ್ತಿರುವುದು ಗಮನಕ್ಕೆ ಬಂದಿದೆ. ಸಭೆಯ ಗಂಭೀರತೆಯನ್ನು ಅಧಿಕಾರಿಗಳು ಅರಿಯಬೇಕು. ಮೊಬೈಲ್ ವೀಕ್ಷಣೆ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.