ಅಡುಗೆ ಅನಿಲ ಬೆಲೆ ಏರಿಕೆಗೆ ಆಕ್ರೋಶ
Team Udayavani, Feb 16, 2020, 3:00 AM IST
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ವ್ಯಾಖ್ಯಾನದ ಮರು ಪರಿಶೀಲನಾ ಅರ್ಜಿಯನ್ನು ಕೇಂದ್ರ ಸರ್ಕಾರ ಸಲ್ಲಿಸಬೇಕು ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಸಂಸದ ಆರ್.ಧ್ರುವನಾರಾಯಣ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ನಾಯಕತ್ವದಲ್ಲಿ ಧರಣಿ ನಡೆಯಿತು. ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷನೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಆರ್.ಎಂ.ರವಿ ಅವರ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದರು.
ಸಂವಿಧಾನ ನಾಶ ಮಾಡುವ ಹುನ್ನಾರ: ಮಾಜಿ ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯ ಪರವಾಗಿ ಸರ್ವೋಚ್ಚ ನ್ಯಾಯಾಲಯದ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹಿತದೃಷ್ಠಿಯಿಂದ ಸಂವಿಧಾನದಲ್ಲಿ ಮೀಸಲಾತಿ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿರುವುದು ಕೇಂದ್ರ ಸರ್ಕಾರ ಸರಿಯಾದ ಮಾಹಿತಿ ನೀಡದ ಕಾರಣದಿಂದಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಸಂವಿಧಾನವನ್ನು ನಾಶ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದರು.
ಉತ್ತರಾಖಂಡ ರಾಜ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಬಡ್ತಿಯನ್ನು ನೀಡುವ ಸಂದರ್ಭದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಉತ್ತರಾಖಂಡದ ಹೈಕೋರ್ಟ್ ತೀರ್ಪು ನೀಡಿದ್ದು, ಅದೇ ವಿಷಯವಾಗಿ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಸಿವಿಲ್ ಅಪೀಲ್ ಮೊಕದ್ದಮೆಯ ತೀರ್ಪು ನೀಡುವಾಗ ಪಜಾ, ಪಪಂ ಅವರಿಗೆ ಸರ್ಕಾರದ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವುದು ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವಾಗಿದೆ ಎಂದಿದೆ, ಮುಂದುವರಿದು ಮೀಸಲಾತಿಯು ಮೂಲಭೂತ ಹಕ್ಕಲ್ಲಾ ಎಂಬ ವಾಖ್ಯಾನವನ್ನು ನೀಡಿದೆ ಎಂದರು.
ಮಲತಾಯಿ ಧೋರಣೆ: ಕೇಂದ್ರ ಸರ್ಕಾರ 30 ಸಾವಿರ ಕೋಟಿ ಬಜೆಟ್ನಲ್ಲಿ 4.5 ಲಕ್ಷ ಸಾವಿರ ಕೋಟಿ ಅನುದಾನವನ್ನು ಎಸ್ಸಿ, ಎಸ್ಸಿಗಳಿಗೆ ಮೀಸಲಿಡುವ ಬದಲು 98 ಸಾವಿರ ಕೋಟಿ ನೀಡಿದೆ. ಕೇಂದ್ರ ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ಮಲತಾಯಿ ಧೋರಣೆ ತೋರತ್ತಿದೆ. ಬಿಜೆಪಿ ಮೊದಲನಿಂದಲೂ ಮೀಸಲಾತಿ ವಿರೋಧಿಯಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರದಲ್ಲಿ ಬಡ್ತಿ ಮೀಸಲಾತಿ ನೀಡಿದ್ದು, ಟಿಎಸ್ಪಿ, ಎಸ್ಇಪಿ ಯೋಜನೆಯಡಿಯಲ್ಲಿ ಹೆಚ್ಚಿನ ಅನುದಾನ ನೀಡಿತ್ತು. ಇದು ಸಂವಿಧಾನದ ಅನುಚ್ಚೇದ 14(4) 16 (4ಎ)ಗೆ ವಿರುದ್ಧವಾಗಿದೆ. ಅಸಂವಿಧಾನಕ ತೀರ್ಪಾಗಿದೆ.
ಈ ತೀರ್ಪು ಪಜಾ, ಪಪಂ ಹಾಗೂ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದಂತಾಗುತ್ತದೆ. ಕೇಂದ್ರ ಸರ್ಕಾರ ಕೂಡಲೇ ಪುನರ್ ಪರಿಶೀಲನಾ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಿ ಉಂಟಾಗಿರುವ ಸಾಂವಿಧಾನಿಕ ಅಭದ್ರತೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಅಗತ್ಯವಸ್ತುಗಳ ಬೆಲೆ ಏರಿಸುತ್ತಿದೆ. ಈಗ ಅಡುಗೆ ಅನಿಲ ದರವನ್ನು ಏಕಾಏಜಿ 145 ರೂ. ಹೆಚ್ಚಿಸಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತೀವ್ರ ಹೊರೆಯಾಗಿದೆ ಎಂದು ಟೀಕಿಸಿದರು.
ಕೇಂದ್ರದ ವಿರುದ್ಧ ನಿರಂತರ ಹೋರಾಟ: ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಂವಿಧಾನವನ್ನು ಬದಲಾಯಿಸುವ ಹುನ್ನಾರ ಮಾಡುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶ್ರೇಷ್ಠ ಸಂವಿಧಾನವನ್ನು ಇಡೀ ವಿಶ್ವಕ್ಕೆ ನೀಡಿದ್ದಾರೆ. ಕೇಂದ್ರದ ವಿರುದ್ಧ ನಿರಂತರ ಹೋರಾಟ ನಡೆಸಬೇಕು ಎಂದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸರ್, ಹೊಂಗನೂರು ಚಂದ್ರು, ತೋಟೇಶ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಆರ್.ಅರುಣ್ಕುಮಾರ್, ಜಿಪಂ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಸದಸ್ಯರಾದ ಯೋಗೇಶ್, ಕೆ.ಪಿ.ಸದಾಶಿವಮೂರ್ತಿ, ನಗರಸಭಾ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಸದಸ್ಯರಾದ ಆರ್.ಪಿ.ನಂಜುಂಡಸ್ವಾಮಿ, ಚಿನ್ನಮ್ಮ, ಭಾಗ್ಯಮ್ಮ, ಲತಾ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಜಿಪಂ ಮಾಜಿ ಸದಸ್ಯ ಕೊಪ್ಪಾಳಿ ಮಹದೇವ ನಾಯಕ, ಕಂದಹಳ್ಳಿ ನಂಜುಂಡಸ್ವಾಮಿ, ಕಾಗಲವಾಡಿ ಚಂದ್ರು ಭಾಗವಹಿಸಿದ್ದರು.