ಬಿಳಿಗಿರಿರಂಗನ ಬೆಟ್ಟಕ್ಕೆ ಭಕ್ತ ಸಾಗರ
Team Udayavani, Aug 7, 2022, 3:38 PM IST
ಯಳಂದೂರು: ಶ್ರಾವಣ ಮಾಸದ ಎರಡನೇ ಶನಿವಾರ ತಾಲೂಕಿನ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆದರು.
ಬೆಳಗ್ಗೆಯಿಂದಲೇ ಬಿಳಿಗಿರಿರಂಗ ನಾಥಸ್ವಾಮಿ, ಅಲಮೇಲಮ್ಮನವರಿಗೆ ವಿವಿಧ ಅಭಿಷೇಕಗಳನ್ನು ಮಾಡಿ, ತುಳಸಿ ಸೇರಿ ವಿವಿಧ ಪುಷ್ಪಗಳಿಂದ ಅಲಂಕರಿಸ ಲಾಗಿತ್ತು. ಆ ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಚಾಮರಾಜನಗರ ಸೇರಿ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಇದರಿಂದ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದರು. ಬೆಟ್ಟಕ್ಕೆ ಹೋಗಲು ಯಳಂದೂರು ಪಟ್ಟಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೆಟ್ಟದ ದೇವಸ್ಥಾನ, ಕಮ್ಮರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಂಡುಬಂದರು.
ಜೊತೆಗೆ ರಥದ ಬೀದಿಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳು ಕಂಡುಬಂದಿತು. ದೇಗುಲದ ಸಮೀಪ ಇರುವ ಅನ್ನ ದಾಸೋಹದಲ್ಲಿ ಸಾವಿರಾರು ಭಕ್ತರಿಗೆ ಮಾಧ್ಯಾಹ್ನ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.