ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಅರಿವು ಮೂಡಿಸಿ
Team Udayavani, Mar 2, 2020, 3:00 AM IST
ಚಿಕ್ಕಬಳ್ಳಾಪುರ: ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿರುವ ವಿವಿಧ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ನೀಡುವ ವಿವಿಧ ಸಾಲ, ಸೌಲಭ್ಯಗಳ ಬಗ್ಗೆ ಕಾರ್ಮಿಕರಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಮೂಲಕ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕೆಂದು ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಭಾನುವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಮಿಕ ಶ್ರಮ ಸಮ್ಮಾನ ದಿನಾಚರಣೆ ಮತ್ತು ಅಸಂಘಟಿತ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯನಿರ್ವಹಿಸುತ್ತಿಲ್ಲ: ರಾಜ್ಯದ ಬೇರೆ ಬೇರೆ ಕಡೆಯಲ್ಲಿ ಯಾವುದೇ ನಿರ್ದಿಷ್ಟ ಸಂಘಟನೆಯಿಲ್ಲದೆ ನೆಲೆಸಿರುವ ಗೃಹ ಕಾರ್ಮಿಕರು, ಟೈಲರ್ಗಳು, ಚಿಂದಿ ಆಯುವವರು, ಮೆಕ್ಯಾನಿಕ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು ಸೇರಿದಂತೆ ಮತ್ತಿರರು ಕಾರ್ಮಿಕರು ವ್ಯವಸ್ಥಿತವಾಗಿ ತಮ್ಮ ಸಂಘಟನೆಗಳನ್ನು ಸ್ಥಾಪಿಸಿ ಕಾರ್ಯನಿರ್ವಹಿಸುತ್ತಿಲ್ಲ.
ಮುಖ್ಯವಾಹಿನಿಗೆ ಬರಬೇಕು: ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳುವುದರಿಂದ ಸರ್ಕಾರ ಜಾರಿ ಮಾಡುವ ವಿವಿಧ ಸಾಲ, ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇಂತಹ ಕಾರ್ಮಿಕರ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಕಾರ್ಮಿಕರು ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸವವಲತ್ತುಗಳ ಬಗ್ಗೆ ತಿಳಿಯಬೇಕು ಹಾಗೂ ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.
ದುಶ್ಚಟಗಳಿಂದ ದೂರವಿರಿ: ಚಿಕ್ಕಬಳ್ಳಾಪುರದ ಆರಕ್ಷಕ ವೃತ್ತ ನಿರೀಕ್ಷಕ ಹೆಚ್.ವಿ.ಸುದರ್ಶನ್ ಮಾತನಾಡಿ, ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸರ್ಕಾರ ಕಾಲ ಕಾಲಕ್ಕೆ ಬಿಡುಗಡೆ ಮಾಡುವ ಯೋಜನೆಗಳ ಬಗ್ಗೆ ಜಾಗೃತರಾಗಬಹುದು. ಕಾರ್ಮಿಕರು ದುಶ್ಚಟಗಳಿಗೆ ಒಳಗಾಗದೇ ತಾವು ದುಡಿದ ಹಣವನ್ನು ಮನೆಯ ನಿರ್ವಹಣೆಗೆ ಮೀಸಲಿಡಬೇಕು. ಇದರಿಂದ ಆರೋಗ್ಯ ವೃದ್ಧಿ ಸೇರಿದಂತೆ ಮನೆಯ ಆರ್ಥಿಕ ಪರಿಸ್ಥಿತಿ ಹಾಗೂ ಸಮಾಜದಲ್ಲಿ ಉತ್ತಮ ಗೌರವ ಗಳಿಸಬಹುದು ಎಂದು ಕಾರ್ಮಿಕರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷಿ, ಬೆಂಗಳೂರಿನ ಹಿರಿಯ ಕಾರ್ಮಿಕ ನೀರಿಕ್ಷಕ ಸೋಮಶೇಖರ್, ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜುಂಜಣ್ಣ ಎಂ., ಚಿಂತಾಮಣಿ ತಾಲೂಕಿನ ಕಾರ್ಮಿಕ ನೀರಿಕ್ಷಕರಾದ ಕಲಾವಾಣಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕಾರ್ಮಿಕರು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳಿಗೆ ಬೇಡವಾದ ಕಾರ್ಮಿಕ ಶ್ರಮ ದಿನಾಚರಣೆ: ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಮಿಕ ಶ್ರಮ ಸಮ್ಮಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ರಂಗಗಳ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಬೇಕಿದ್ದ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಸಭೆಯಿಂದ ದೂರ ಉಳಿದಿದ್ದರು. ಭಾನುವಾರ ರಜೆ ಇದ್ದ ಕಾರಣವೋ ಏವೋ ಉಸ್ತುವಾರಿ ಸಚಿವರಿಂದ ಹಿಡಿದು ಸ್ಥಳೀಯ ಶಾಸಕರು ಹಾಗೂ ಸಚಿವರಾದ ಡಾ.ಕೆ.ಸುಧಾಕರ್, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ತಾಪಂ ಅಧ್ಯಕ್ಷರು, ಸದಸ್ಯರು ಯಾರು ಕೂಡ ಸಭೆಯತ್ತ ಸುಳಿಯಲಿಲ್ಲ. ಇನ್ನೂ ಜಿಲ್ಲಾ ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಹೊರತುಪಡಿಸಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಮತ್ತಿತರ ಹಿರಿಯ ಅಧಿಕಾರಿಗಳು ಗೈರು ಹಾಜರಿ ಎದ್ದು ಕಾಣುತ್ತಿತ್ತು.
ವಿವಿಧ ಕಾರ್ಮಿಕರಿಗೆ ಸಮ್ಮಾನ್ ಪ್ರಶಸ್ತಿ: ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿವಿಧ ಅಸಂಘಟಿತ ವಲಯಗಳಲ್ಲಿ ಸಾಧನೆ ಮಾಡಿದ ಕಾರ್ಮಿಕರನ್ನು ಗುರುತಿಸಿ ಜಿಲ್ಲಾಡಳಿತದ ಪರವಾಗಿ ಕಾರ್ಮಿಕ ಇಲಾಖೆ ವಿತರಿಸಿದ ಸಮ್ಮಾನ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರದ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಮತ್ತಿತರ ಗಣ್ಯರು ಪ್ರದಾನ ಮಾಡಿ ಗೌರವಿಸಿದರು. ಇದೇ ವೇಳೆ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ವಿವಿಧ ಸಾದನ ಸಲಕರಣೆಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!