ಜನರ ಸಮಸ್ಯೆ ನಿವಾರಣೆಗೆ ಸ್ಪಂದಿಸಿ
Team Udayavani, Aug 27, 2019, 3:00 AM IST
ಚಿಕ್ಕಬಳ್ಳಾಪುರ: ತಾಲೂಕಿನಾದ್ಯಂತ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಪದೇ ಪದೆ ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸದ ಬೆಸ್ಕಾಂ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳನ್ನು ತಾಪಂ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆ ಬಗ್ಗೆಯೇ ಹೆಚ್ಚು ಚರ್ಚೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತಾಪಂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರು ಹಾಗೂ ವಿದ್ಯುತ್ ಸಮರ್ಪಪ ಪೂರೈಕೆಗೆ ಆಗ್ರಹಿಸಿದರು.
ಪರ್ಯಾಯವಾಗಿ ನೀರಿನ ವ್ಯವಸ್ಥೆ ಕಲ್ಪಿಸಿ: ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ಇದರಿಂದ ಕೆರೆ, ಕುಂಟೆಗಳಲ್ಲಿ ನೀರು ಬತ್ತಿ ಹೋಗಿದೆ. ನಗರಕ್ಕೆ ನೀರು ಕಲ್ಪಿಸುವ ಜಕ್ಕಲಮಡಗು ಜಲಾಶಯ ಕೂಡ ಸಂಪೂರ್ಣ ಬತ್ತಿ ಹೋಗಿದ್ದು, ಜಕ್ಕಲಮಡಗು ಜಲಾಶಯದಿಂದ ನೀರು ಪೂರೈಕೆ ಮಾಡಲಾಗುತ್ತಿದ್ದ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಕೂಡಲೇ ಈ ಗ್ರಾಮಗಳಲ್ಲಿ ಪರ್ಯಾವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಕೊಳವೆ ಬಾವಿಗಳನ್ನಾದರೂ ಕೊರೆಸಬೇಕೆಂದರು.
ಕೆಲವು ಕಡೆ ನೀರಿದ್ದರೂ ಅದನ್ನು ಪಡೆಯಲು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಬೆಸ್ಕಾಂ ಅಧಿಕಾರಿಗಳು ಯಾವಾಗ ವಿದ್ಯುತ್ ಕಡಿತ ಮಾಡುತ್ತಾರೆಂಬುದೇ ಗೊತ್ತಾಗುತ್ತಿಲ್ಲ. ನಗರ, ಗ್ರಾಮಾಂತರ ಪ್ರದೇಶದಲ್ಲಿ ಇತ್ತೀಚೆಗೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ. ಇದರ ಪರಿಣಾಮ ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ ಎಂದು ತಾಪಂ ಸದಸ್ಯರಾದ ಸತೀಶ್, ರತ್ನಮ್ಮ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬರಗಾಲದ ಸಂದರ್ಭದಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದರು.
13,767 ಹೆಕ್ಟೇರ್ನಲ್ಲಿ ಬಿತ್ತನೆ: ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಒಟ್ಟು 17,579 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೂ 13,767 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅರ್ಜಿ ವಿಲೇವಾರಿ ಆಗಿಲ್ಲ: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಬೇಕು, ಕೃಷಿ ಹೊಂಡಕ್ಕೆ ತಂತಿಬೇಲಿ ನಿರ್ಮಿಸುವ ಕಾರ್ಯಕ್ಕೆ ಒತ್ತು ಕೊಡಬೇಕೆಂದು ತಾಪಂ ಅಧ್ಯಕ್ಷ ರಾಮಸ್ವಾಮಿ ಸೂಚಿಸಿದರು. ವಾಲ್ಮೀಕಿ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕಳೆದ ವರ್ಷ ಸಾಲ, ಸೌಲಭ್ಯಗಳಿಗೆ ಆಹ್ವಾನಿಸಿದ ಅರ್ಜಿಗಳನ್ನು ಇದುವರೆಗೂ ವಿಲೇವಾರಿ ಮಾಡಿಲ್ಲ.
ಅಧಿಕಾರಿಗಳ ವಿರುದ್ಧ ಕಿಡಿ: ಸದ್ಯ ಕ್ಷೇತ್ರಕ್ಕೆ ಶಾಸಕರಿಲ್ಲ. ಚುನಾವಣೆ ಆಗುವವರೆಗೂ ಶಾಸಕರು ಲಭ್ಯವಿರುವುದಿಲ್ಲ. ಸೌಲಭ್ಯಕ್ಕೆ ಅರ್ಜಿ ಹಾಕಿದ ಫಲಾನುಭವಿಗಳು ಏನು ಮಾಡಬೇಕೆಂದು ಸೌಲಭ್ಯ ವಿತರಣೆಗೆ ವಿಳಂಬ ತೋರಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಸಭೆಗೆ ಗೈರಾಗಿದ್ದ ಲೋಕೋಪಯೋಗಿ ಇಲಾಖೆ ಎಇಇಗೆ ನೋಟಿಸ್ ನೀಡುವಂತೆ ಸೂಚಿಸಿದರು.
ಉಳಿದಂತೆ ಸಭೆಯಲ್ಲಿ ಶಿಕ್ಷಣ, ಆರೋಗ್ಯ, ರೇಷ್ಮೆ, ನರೇಗಾ, ತೋಟಗಾರಿಕೆ, ಅಕ್ಷರ ದಾಸೋಹ, ಸಮಾಜ ಕಲ್ಯಾಣ, ಬಿಸಿಎಂ ಹಾಗೂ ವಿವಿಧ ಇಲಾಖೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಇಂದ್ರಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ನೂತನ ಇಒ ಹರ್ಷವರ್ಧನ್, ತಾಪಂ ಸದಸ್ಯರಾದ ಮುತ್ತರಾಯಪ್ಪ, ಸತೀಶ್, ರತ್ನಮ್ಮ ಉಪಸ್ಥಿತರಿದ್ದರು.
ಎಪಿಎಂಸಿ ಅವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚೆ: ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಅವ್ಯವಸ್ಥೆ, ಅನೈರ್ಮಲ್ಯದ ಬಗ್ಗೆ ತಾಪಂ ಸದಸ್ಯರು ಚರ್ಚೆ ನಡೆಸಿ ಎಪಿಎಂಸಿ ಆವರಣದಲ್ಲಿ ಸ್ವಚ್ಛತೆ ಇರದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸ್ವಚ್ಛತೆಗಾಗಿಯೇ ಲಕ್ಷಾಂತರ ರೂ, ಖರ್ಚು ಮಾಡಲಾಗುತ್ತಿದೆ. ಆದರೆ ಎಪಿಎಂಸಿ ಆವರಣದಲ್ಲಿ ಕಾಲಿಡದಷ್ಟು ಗಲೀಜು ಇದೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ.
ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ಬುದ್ಧಿ ಹೇಳಿ. ಅವರ ಕೈಯಲ್ಲಿ ಆಗಲ್ಲ ಎಂದರೆ ಗುತ್ತಿಗೆ ರದ್ದುಪಡಿಸಿ ಬೇರೆಯವರಿಗೆ ಕೊಡಿ. ಎಪಿಎಂಸಿಗೆ ಬರಲು ಜನ ಹಿಂದೇಟು ಹಾಕುತ್ತಾರೆ. ಎಪಿಎಂಸಿ ಆವರಣದಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ವಾಹನಗಳ ಟ್ರಾಫಿಕ್ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ