ಸುಧಾಕರ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ
ಸಚಿವ ಸ್ಥಾನ ಸಿಗದೇ ಅತೃಪ್ತರಾಗಿದ್ದ ಶಾಸಕರು • ಹಿಂದೆ ನೇಮಕವಾದರೂ ತಡೆ ಹಿಡಿದಿದ್ದ ಸಿಎಂ • ಅಧಿಕಾರ ಸ್ವೀಕಾರ
Team Udayavani, Jun 21, 2019, 12:58 PM IST
ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಚಿಕ್ಕಬಳ್ಳಾಪುರ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಯ ಮೇಲೆ ಕಣ್ಣಿಟ್ಟು ತೀವ್ರ ಹೋರಾಡಿ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದರಿಂದ ಮೈತ್ರಿ ಸರ್ಕಾರದ ಅದರಲೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ಗೆ ಕೊನೆಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ಗಾಂಧಿ ಈ ಹಿಂದೆ ರಾಜ್ಯದ ಹಲವು ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಸಂದರ್ಭದಲ್ಲಿ ಶಾಸಕ ಸುಧಾಕರ್ರನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಿಫಾರಸ್ಸು ಮಾಡಿದ್ದರು. ಆದರೆ ಕುಮಾರಸ್ವಾಮಿ, ಸುಧಾಕರ್ ನೇಮಕದ ಕಡತಕ್ಕೆ ಸಹಿ ಮಾಡದೇ ನಿವೃತ್ತ ಐಎಎಸ್ ಅಧಿಕಾರಿ ಜಯರಾಮ್ ಎಂಬುವರನ್ನು ಮಂಡಳಿ ಅಧ್ಯಕ್ಷರನ್ನಾಗಿ 3 ತಿಂಗಳ ಹಿಂದೆ ನೇಮಕ ಮಾಡಿದ್ದರು.
ಈಗ ಜಯರಾಮ್ರಿಂದ ರಾಜೀನಾಮೆ ಪಡೆದು ಸುಧಾಕರ್ರನ್ನು ಸಿಎಂ ಕುಮಾರಸ್ವಾಮಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದ್ದಾರೆ.
ನೇಮಕ ತಿರಸ್ಕರಿಸಿದ್ದ ಸಿಎಂ: ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಶಾಸಕರಾಗಿರುವ ಸುಧಾಕರ್ಗೆ ಯುವಕರ ಕೋಟಾದಲ್ಲಿ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದರು. ಆದರೆ ಕಾಂಗ್ರೆಸ್ ಪಾಳೆಯದಲ್ಲಿ ರೋಷನ್ ಬೇಗ್, ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲ್ರಂತಹ ಘಟಾನುಘಟಿ ನಾಯಕರಿಗೆ ಮಂತ್ರಿಯೋಗ ಕೂಡಿ ಬಾರದ ಹಿನ್ನಲೆಯಲ್ಲಿ ಸುಧಾಕರ್ ಸಚಿವ ಸ್ಥಾನಕ್ಕಾಗಿ ನಡೆಸಿದ ಎಲ್ಲ ಯತ್ನಗಳು ವಿಫಲವಾದವು.
ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ರನ್ನು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಸಿಎಂ ಕುಮಾರಸ್ವಾಮಿಗೆ ನಾಲ್ಕು ತಿಂಗಳ ಹಿಂದೆಯೇ ಶಿಪಾರಸ್ಸು ಮಾಡಿದ್ದರೂ ಕೈಗೂಡಲಿಲ್ಲ.
ಅತೃಪ್ತರಲ್ಲಿ ಬಣದಲ್ಲಿದ್ದ ಸುಧಾಕರ್: ಮಂತ್ರಿ ಸ್ಥಾನವೂ ಸಿಗದೇ ಇತ್ತ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಕೈ ತಪ್ಪಿದ್ದರಿಂದ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದ ಶಾಸಕರು ಮಂತ್ರಿ ಸ್ಥಾನ ಸಿಗದಿದ್ದರಿಂದ ರಮೇಶ್ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಸುಧಾಕರ್ ಬಿಜೆಪಿಯ ಆಪರೇಷನ್ ಕಮಲದ ಪಟ್ಟಿಯಲ್ಲಿದ್ದರು. ಒಮ್ಮೆ ಮುಂಬೈಗೂ ಹೋಗಿ ಬಂದಿದ್ದರು.
ಆದರೆ ಇತ್ತೀಚೆಗೆ ವಿಸ್ತರಣೆಗೊಂಡ ಮೂರನೇ ಹಂತದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷೇತರ ಶಾಸಕರಿಗೆ ಮಾತ್ರ ಅವಕಾಶ ನೀಡಿದ್ದಕ್ಕೆ ಪಕ್ಷದ ರಾಜ್ಯ ನಾಯಕರ ವಿರುದ್ಧ ಗರಂ ಆಗಿ ತಮ್ಮ ತೀರ್ಮಾನವನ್ನು ಕ್ಷೇತ್ರದ ಬೆಂಬಲಿಗರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದರು.
ಕಳೆದ ನಾಲ್ಕೈದು ದಿನಗಳಿಂದ ಶಾಸಕರ ತಂದೆ ಪಿ.ಎನ್.ಕೇಶವರೆಡ್ಡಿ ಮಗನ ಪರ ಸರಣಿ ಸಭೆಗಳನ್ನು ನಡೆಸಿ ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯ ಪಡೆಯುತ್ತಿದ್ದರು. ಸುಧಾಕರ್ರ ಅತೃಪ್ತಿಯನ್ನು ತಣ್ಣಾಗಿಸಲು ಸಿಎಂ ಕುಮಾರಸ್ವಾಮಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ತಾವೇ ಮೂರು ತಿಂಗಳ ಹಿಂದೆ ನೇಮಕ ಮಾಡಿದ್ದ ಜಯರಾಮ್ರಿಂದ ರಾಜೀನಾಮೆ ಪಡೆದು ಈಗ ಸುಧಾಕರ್ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮೂರು ವರ್ಷ ಅಧಿಕಾರಾವಧಿ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸುಧಾಕರ್ಗೆ ಅಧಿಕಾರ ಅವಧಿ ಕೇವಲ ಮೂರು ವರ್ಷ. ಈ ಕುರಿತು ಅವರೇ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನನ್ನನ್ನು ಮೂರು ವರ್ಷದ ಅಧಿಕಾರಾವಧಿಗೆ ನೇಮಕ ಮಾಡಲಾ ಗಿದ್ದು, ಈ ಅವಧಿಯಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯವೈಖರಿ ರಾಜ್ಯದ ಇತಿಹಾಸ ಪುಟದಲ್ಲಿ ದಾಖಲಾಗಬೇಕೆಂದರು.
ಹುದ್ದೆಗೆ ಅಪೇಕ್ಷೆ ಪಟ್ಟವನಲ್ಲ
ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನಾಗಿ ಬರಬೇಕೆಂದು ಎಂದೂ ಕೂಡ ನಾನು ಅಪೇಕ್ಷೆ ಪಟ್ಟ ವನಲ್ಲ. ವೃತ್ತಿಯಲ್ಲಿ ವೈದ್ಯನಾಗಿರುವ ನನಗೆ ಈ ಹುದ್ದೆ ಸಿಕ್ಕಿರುವುದು ಸಂತಸ ತಂದಿದೆ. ಶಾಸಕನಿಗೆ ಸಿಕ್ಕಿರುವುದು ಇದೇ ಮೊದಲು. ಮಂಡಳಿಗೆ ಉತ್ತಮ ಹೆಸರು ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ಕಚೇರಿಯಲ್ಲಿ ಅಧಿಕಾರ ಸ್ವೀಕಾರ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ ಇದೇ ದಾರಿಯಲ್ಲಿ ಹೋಗಬೇಕೆಂದು ನಿರ್ಧರಿಸಿರುವುದಿಲ್ಲ. ಹಾಗಾಂತ ಯಾವುದೇ ದಾರಿ ಮನುಷ್ಯನಿಗೆ ಶಾಶ್ವತವಾಗುವುದಿಲ್ಲ ಎಂದರು.
ನಮಗೆ ಗೊತ್ತಿಲ್ಲದಂತೆ ಅನೇಕ ದಾರಿಗಳು ಬದಲಾಗುತ್ತವೆ. ನಮ್ಮ ಪ್ರಯಾಣದ ತಾಣಗಳು ಬದಲಾಗುತ್ತವೆ. ಒಬ್ಬ ವೈದ್ಯನಾಗಿ, ಕಾರ್ಪೋರೆಟ್ ಸಂಸ್ಥೆಯಲ್ಲಿ 15 ಸಾವಿರ ಉದ್ಯೋಗಿಗಳು ಕೆಲಸ ಮಾಡಿದ ಸಂಸ್ಥೆಯಲ್ಲಿ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅದೇ ರೀತಿ ವಿದೇಶದಲ್ಲಿ ಕೆಲಸ ಮಾಡಲಿಕ್ಕೆ ನನ್ನ ರಾಜಕೀಯ ಗುರುಗಳಾದ ಎಸ್.ಎಂ.ಕೃಷ್ಣ ರವರು ಶ್ರೀಲಂಕಾದ ವಾಣಿಜ್ಯ ಪ್ರತಿನಿಧಿಯಾಗಿ ನನ್ನನ್ನು ನೇಮಕ ಮಾಡಿದ್ದರು.
ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು. ಭವಿಷ್ಯದ ದಿನಗಳಲ್ಲಿ ದೆಹೆಲಿಗೆ ಬಂದಿರುವ ಪರಿಸ್ಥಿತಿ ಬೆಂಗಳೂರಿಗೆ ಬರಬಾರದು. ಈ ಬಗ್ಗೆ ನಾವು ಈಗಲೇ ಎಚ್ಚೆತ್ತಿಕೊಳ್ಳಬೇಕಿದೆ ಎಂದರು. ಬೆಂಗಳೂರು ಜನ ಬಳಸಿ ಬಿಡುವ ತ್ಯಾಜ್ಯ ನೀರನ್ನು ಕೋಲಾರ, ಚಿಕ್ಕಬಳ್ಳಾಫುರ ಜಿಲ್ಲೆಗಳಿಗೆ ಹರಿಸುವ ಕೆಲಸ ಆಗುತ್ತಿದೆ. ಆದ್ದರಿಂದ ಬೆಂಗಳೂರಿನಲ್ಲಿ ಮೊದಲು ಪರಿಸರ ಮಾಲಿನ್ಯ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಸದಸ್ಯರ, ಕಾರ್ಯದರ್ಶಿಗಳ ಸಂಪೂರ್ಣ ಸಹಕಾರ ಬೇಕಿದೆ ಎಂದರು.
ಜಯರಾಮ್ಗೆ ಒಳ್ಳೆಯದಾಗಲಿ: ಮೂರು ತಿಂಗಳಿಂದ ಜಯ ರಾಮ್ ಮಂಡಳಿ ಅಧ್ಯಕ್ಷರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆ ಸಿಗಲಿ ಎಂದು ಶಾಸಕರು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ