ನಾಳೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತ ಸಂಘ ಧರಣಿ
Team Udayavani, Aug 25, 2019, 6:02 PM IST
ಸಾಂದರ್ಭಿಕ ಚಿತ್ರ .
ಚಿಕ್ಕಬಳ್ಳಾಪುರ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಹಾಗೂ ತುಂಬಿರುವ ಅಣೆಕಟ್ಟುಗಳಿಂದ ಅವೈಜ್ಞಾನಿಕವಾಗಿ ನೀರು ಬಿಟ್ಟು ಅನಾಹುತಗಳಿಗೆ ಕಾರಣವಾಗಿರುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆ. 26 ರಂದು ಸೋಮವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ತಿಳಿಸಿದ್ದಾರೆ.
ರಾಜ್ಯದ 17 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಂತ್ರಸ್ತರು ಸಂಕಷ್ಟದಲ್ಲಿ ಇದ್ದರೂ ಸರ್ಕಾರ ಪರಿಹಾರ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳುತ್ತಿಲ್ಲ ಎಂದರು.
ಪ್ರವಾಹದಿಂದ ದನ, ಕರು, ಕೃಷಿ ಬೆಳೆಗಳನ್ನು ಕಳೆದುಕೊಂಡು ರೈತರು ಕಣ್ಣೀರು ಸುರಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ನೆರೆ ಸಂತ್ರಸ್ತರಿಗೆ ಸ್ಪಂದಿಸುತ್ತಿಲ್ಲ ಎಂದರು.
ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದರು.