ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ
Team Udayavani, Apr 15, 2019, 3:00 AM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಲೋಕಸಭಾ ಚುನಾವಣಾ ಅಖಾಡ ತಾರಕಕ್ಕೇರಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಮತದಾರರ ಬೇಟೆಗೆ ತೀವ್ರ ಪೈಪೋಟಿಗೆ ಇಳಿದಿದ್ದು, ರಾಜಕೀಯ ಪಕ್ಷಗಳ ಹಿಂಬಾಲಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ನಡೆಸುತ್ತಿರುವ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಜಿಲ್ಲಾದ್ಯಂತ ಎದ್ದು ಕಾಣುತ್ತಿದ್ದರೂ ಈ ಬಗ್ಗೆ ಹೇಳ್ಳೋರು ಕೇಳ್ಳೋರು ಇಲ್ಲವಾಗಿದೆ.
ಈಗಷ್ಟೇ ಮಕ್ಕಳಿಗೆ ವಾರ್ಷಿಕ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಘೋಷಣೆಯಾಗಿವೆ. ಆದರೆ ಬೇಸಿಗೆ ರಜೆ ವಿವಿಧ ಕೌಶಲ್ಯ ಬೆಳೆಸಿಕೊಳ್ಳಲು ಆಟೋಟ, ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸಬೇಕಿದ್ದ ಮಕ್ಕಳು ಇದೀಗ ರಾಜಕೀಯ ಪಕ್ಷಗಳ ಧ್ವಜಗಳನ್ನು ಹಿಡಿದು ರಾಜಕಾರಣಿಗಳ ಹಿಂದೆ ಸುತ್ತಾಡುತ್ತಿರುವುದು ಜಿಲ್ಲಾದ್ಯಂತ ಕಂಡು ಬರುತ್ತಿದೆ. ಒಂದು ರೀತಿ ಮಕ್ಕಳನ್ನು ಪಕ್ಷಗಳು ಬಾಲ ಕಾರ್ಮಿಕರ ರೀತಿಯಲ್ಲಿ ಪಕ್ಷಗಳ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಮಕ್ಕಳ ಹಕ್ಕು ಸಂಹಿತೆ ಉಲ್ಲಂಘನೆ: ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಣಾಮ ಬದುಕಿನ ಬಂಡಿ ನಡೆಸಲು ರೈತಾಪಿ ಕೂಲಿ ಕಾರ್ಮಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸದ್ಯಕ್ಕೆ ಕೂಲಿ ಕಾರ್ಮಿಕರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ನಿರೀಕ್ಷಿತ ಮಟ್ಟದಲ್ಲಿ ರಾಜಕೀಯ ಪಕ್ಷಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಅಪ್ರಾಪ್ತರನ್ನು ಗ್ರಾಮಾಂತರ ಪ್ರದೇಶದಲ್ಲಿ ಅಭ್ಯರ್ಥಿಗಳ ಪರ ಕರಪತ್ರ ಹಂಚಲು ಬಳಸಿಕೊಳ್ಳುತ್ತಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಜೊತೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೂಡ ಆಗುತ್ತದೆ.
ಆದರೆ ಇದರ ಯಾವುದರ ಬಗ್ಗೆಯು ತಲೆಕೆಡಿಸಿಕೊಳ್ಳದ ಜಿಲ್ಲಾ ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಕೇಳಿ ಬರುತ್ತಿದೆ. ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಪಾರದರ್ಶಕವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರತಿ ಗ್ರಾಪಂ ಮಟ್ಟದಲ್ಲಿ ಪ್ಲೆಯಿಂಗ್ ಸ್ಕ್ವಾಡ್ಗಳನ್ನು ರಚಿಸಿದೆ. ಆದರೆ ನೀತಿ ಸಂಹಿತೆ ಅನುಷ್ಠಾನ ಅಧಿಕಾರಿಗಳ ಮುಂದೆಯೇ ರಾಜಕೀಯ ಪಕ್ಷಗಳು ಮಕ್ಕಳನ್ನು ರಾಜಾರೋಷವಾಗಿ ಬಳಸಿಕೊಳ್ಳುತ್ತಿದ್ದರೂ ಹೇಳ್ಳೋರು ಕೇಳ್ಳೋವರು ಇಲ್ಲವಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ, ಮುಖಂಡರ ನಡುವೆ ರಾಜಕೀಯ ವೈಮನಸ್ಸು ಬೆಳೆಸಿಕೊಂಡು ತಮ್ಮ ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ಮುಂದಾಗಿರುವುದರಿಂದ ಗ್ರಾಮಗಳಲ್ಲಿ ಆಶಾಂತಿಯ ವಾತಾವರಣ ನೆಲೆಯೂರುತ್ತಿದೆ.
ಇಂತಹ ಸಂದರ್ಭದಲ್ಲಿ ಚಿಣ್ಣರನ್ನು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದರಿಂದ ಮಕ್ಕಳ ಮೇಲೆ ಕೂಡ ಇದರ ದುಷ್ಪರಿಣಾಮ ಬೀರುತ್ತದೆ. ಅದರಲ್ಲೂ ಅಪ್ರಾಪ್ತರನ್ನು ಪ್ರಚಾರ ಕಾರ್ಯಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಆಗುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗದೇ ಕೈ ಕಟ್ಟಿ ಕೂತಿರುವುದು ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ ಮತ್ತಿತರ ಕಡೆಗಳಲ್ಲಿ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದರೂ ಅಧಿಕಾರಶಾಹಿ ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿರುವುದು ಆಡಳಿತಶಾಹಿ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.
ಮಕ್ಕಳ ಬಳಕೆಯಲ್ಲಿ ಗೌರಿಬಿದನೂರು ಮೊದಲು: ಮಕ್ಕಳನ್ನು ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಿಗೆ ಬಳಸಿಕೊಳ್ಳುವ ವಿಚಾರದಲ್ಲಿ ಜಿಲ್ಲೆಯ ಗೌರಿಬಿದನೂರು ತಾಲೂಕು ಮೊದಲ ಸ್ಥಾನದಲ್ಲಿದೆ. ವಿಪರ್ಯಾಸ ಅಂದ್ರೆ ಬಾಲ್ಯ ವಿವಾಹದಲ್ಲಿ ಗೌರಿಬಿದನೂರು ಮೊದಲ ಸ್ಥಾನದಲ್ಲಿದೆ. ಇದೀಗ ಮಕ್ಕಳನ್ನು ಸಹ ಚುನಾವಣಾ ಪ್ರಚಾರ ಕಾರ್ಯಗಳಿಗೆ ಬಳಸಿಕೊಳ್ಳುವುದು ಇಲ್ಲಿ ಹೆಚ್ಚಾಗಿದ್ದು, ಇಷ್ಟಾದರೂ ಸ್ಥಳೀಯ ಮಕ್ಕಳ ಕಲ್ಯಾಣ ಇಲಾಖೆಯಾಗಲಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಾಗಲಿ ಇದುವರೆಗೂ ಧ್ವನಿ ಎತ್ತಿಲ್ಲ.
ಗೌರಿಬಿದನೂರು ತಾಲೂಕಿನ ತೊಂಡೇಬಾವಿ, ಮಂಚೇನಹಳ್ಳಿ ಹೋಬಳಿಗಳಲ್ಲಿ ಮಕ್ಕಳನ್ನು ಹೆಚ್ಚಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಒಂದು ರೀತಿ ಬೇಸಿಗೆಯ ಉರಿಬಿಸಿಲಿನಲ್ಲಿ ಮಕ್ಕಳನ್ನು ಸಾಕಷ್ಟು ಶೋಷಣೆ ಮಾಡುತ್ತಿರುವ ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿದೆ.
ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಕುರಿತು ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. 18 ವರ್ಷ ಮೇಲ್ಪಟ್ಟ ಯುವಕರು ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ ಅಪ್ರಾಪ್ತರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಈ ಬಗ್ಗೆ ಯಾರದಾರೂ ದೂರು ಕೊಟ್ಟರೆ ಸಂಬಂಧಪಟ್ಟ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಬಿ.ಶಿವಸ್ವಾಮಿ, ಸಹಾಯಕ ಚುನಾವಣಾ ಅಧಿಕಾರಿ, ಚಿಕ್ಕಬಳ್ಳಾಪುರ
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ