ಚಿಕ್ಕಮಗಳೂರಲ್ಲಿ ಕಮಲ ಕಮಾಲ್
Team Udayavani, May 16, 2018, 6:00 AM IST
ಚಿಕ್ಕಮಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಅಲೆಯ ಎದುರು ಜೆಡಿಎಸ್ ಜಿಲ್ಲೆಯಲ್ಲಿ ಕೊಚ್ಚಿ ಹೋಗಿದ್ದರೆ, ಕೇವಲ 1 ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿ 2, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆದ್ದಿತ್ತು. ಈ ಬಾರಿಯ ಚುನಾವಣೆಯಲ್ಲಿ 4 ಕ್ಷೇತ್ರ ಗಳಲ್ಲಿ ಬಿಜೆಪಿ ಗೆದ್ದಿದ್ದರೆ ಕಡಿಮೆ ಮತಗಳ ಅಂತರದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಜೆಡಿಎಸ್ ಈ ಬಾರಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.
ಬಿಜೆಪಿ ಕಳೆದ ಬಾರಿ ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರವನ್ನು ಈ ಬಾರಿಯೂ ಉಳಿಸಿಕೊಂಡಿದ್ದು, ಶೃಂಗೇರಿ ಕ್ಷೇತ್ರವನ್ನು ಕಳೆದುಕೊಂಡು ತರೀಕೆರೆ, ಮೂಡಿಗೆರೆ ಹಾಗೂ ಕಡೂರು ಕ್ಷೇತ್ರಗಳಲ್ಲಿ ಗೆದ್ದಿದೆ. ಕಳೆದ ಬಾರಿ ಗೆದ್ದಿದ್ದ ತರೀಕೆರೆ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಶೃಂಗೇರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಕಳೆದ ಬಾರಿ ಮೂಡಿಗೆರೆ ಹಾಗೂ ಕಡೂರು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದ ಜೆಡಿಎಸ್ ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿಯೂ ಸೋತಿದೆ.
ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ 26,314 ಮತಗಳ ಅಂತರದಿಂದ ಗೆದ್ದಿರುವುದು ಅತೀ ಹೆಚ್ಚಿನ ಅಂತರವಾದರೆ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಕೇವಲ 1,989 ಮತಗಳ ಅಂತರದಿಂದ ಗೆದ್ದಿದ್ದಾರೆ. ಉಳಿದ ಮೂರು ಕ್ಷೇತ್ರಗಳಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.