ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ನಿಷೇಧ
ಪರೀ ಕೊಠಡಿಗಳಲ್ಲಿ ಕಡ್ದಾಯವಾಗಿ ಗೋಡೆ ಗಡಿಯಾರ ಅಳವಡಿಸಿ: ಜಿಲ್ಲಾಧಿಕಾರಿ ಸೂಚನೆ
Team Udayavani, Feb 27, 2020, 12:52 PM IST
ಚಿತ್ರದುರ್ಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 4
ರಿಂದ 23 ರವರೆಗೆ ನಡೆಯಲಿದ್ದು, ಪರೀಕ್ಷಾಕೇಂದ್ರಗಳಲ್ಲಿ ಮೊಬೈಲ್, ವಾಚ್ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಹಾಗೂ ವಿದ್ಯುನ್ಮಾನ ಸಾಧನಗಳನ್ನು ನಿಷೇಧಿ ಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಪೋನ್ ತೆಗೆದುಕೊಂಡು ಹೋ ಗಬಹುದು. ಅವರನ್ನು ಬಿಟ್ಟು ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಕಡ್ಡಾಯವಾಗಿ ಮೊಬೈಲ್ ತರುವುದನ್ನು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಕೈಗಡಿಯಾರ ಧರಿಸುವುದನ್ನು ನಿಷೇಧಿ ಸಲಾಗಿದೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಎಲ್ಲಾ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರ ಅಳವಡಿಸಬೇಕು. ಪರೀಕ್ಷೆ ಅವಧಿ ಮುಗಿಯುವವರೆಗೆ ಯಾವ ವಿದ್ಯಾರ್ಥಿಯನ್ನೂ ಕೇಂದ್ರದಿಂದ ಹೊರಗೆ ಬಿಡುವಂತಿಲ್ಲ. ಒಂದು ವೇಳೆ ಬಿಟ್ಟರೂ ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ಮೇಲ್ವಿಚಾರಕರು ಪಡೆಯಬೇಕು. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ಫೋಟೋ ಮತ್ತು ವಿಡಿಯೋ ಮಾಡುವುದನ್ನೂ ನಿಷೇ ಧಿಸಲಾಗಿದೆ. ಮಾಧ್ಯಮ ಪ್ರತಿನಿಧಿ ಗಳು ಪರೀಕ್ಷಾ ಕೊಠಡಿಗಳನ್ನು ಪ್ರವೇಶಿಸಿ ಫೋಟೋ, ವಿಡಿಯೋ ತೆಗೆಯುವಂತಿಲ್ಲ. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿ ಕಾ ಮಾತನಾಡಿ, ವಿದ್ಯಾರ್ಥಿಗಳು ವಾಚ್ ಮತ್ತು ಮೊಬೈಲ್ ತರದಂತೆ ಸಂಬಂಧಪಟ್ಟವರು ಮಾಹಿತಿ ನೀಡಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗುವುದು. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ, ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನಚೀಟಿ ಧರಿಸಬೇಕು. ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುವುದು.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಪರೀಕ್ಷಾರ್ಥಿಗಳು ನಕಲು ಮಾಡುವುದು, ನಕಲು ಮಾಡಲು ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಭಾಗಿಯಾಗುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜಪ್ಪ ಮಾತನಾಡಿ, ಪರೀಕ್ಷೆಗಳು ಪ್ರಾರಂಭವಾಗುವ ಮೊದಲೇ ಪ್ರಶ್ನೆಪತ್ರಿಕೆ ಬಂಡಲ್ಗಳನ್ನು ಠೇವಣಿಸುವ ಹಾಗೂ ವಿತರಿಸುವ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಆಧಾರ್ ಗುರುತಿನ ಚೀಟಿಯೊಂದಿಗೆ ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಳ್ಳಬೇಕು. ಜಿಲ್ಲಾ ಮಟ್ಟದ ಪ್ರಶ್ನೆಪತ್ರಿಕೆ ಪಾಲಕರ ಸಮಿತಿಯ ಸದಸ್ಯರು ತಾಲೂಕು ಮಟ್ಟದ ಪ್ರಶ್ನೆ ಪತ್ರಿಕೆ ಪಾಲಕರ ಸಮಿತಿಗೆ ಆಯಾ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 9:30ರೊಳಗೆ ಪ್ರಶ್ನೆಪತ್ರಿಕೆ ತಲುಪುವಂತೆ ವ್ಯವಸ್ಥಿತವಾಗಿ ಪ್ರಶ್ನೆಪತ್ರಿಕೆ ಬಂಡಲ್ಗಳನ್ನು ವಿತರಿಸಬೇಕು. ಪ್ರಶ್ನೆಪತ್ರಿಕೆ ರವಾನೆಗಾಗಿ ನಿಗ ಪಡಿಸಿದ ವಾಹನಕ್ಕೆ ಜಿಪಿಎಸ್ ಅಳವಡಿಕೆ ಬಗ್ಗೆ ಸಂಬಂಧಪಟ್ಟ ಮಾರ್ಗಾಧಿಕಾರಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ. ಪ್ರಸನ್ನ, ಡಿಡಿಪಿಐ ರವಿಶಂಕರ್ ರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 16,674 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 8823 ಬಾಲಕಿಯರು ಹಾಗೂ 7851 ಬಾಲಕರು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಿಗೆ 137 ಕಾಲೇಜುಗಳನ್ನು ಜೋಡಿಸಲಾಗಿದೆ.
ಆರ್. ನಾಗರಾಜಪ್ಪ,
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ