ತುರ್ತಾಗಿ ಗೋಶಾಲೆ ಆರಂಭಿಸಿ
Team Udayavani, Jan 30, 2019, 9:35 AM IST
ಚಿತ್ರದುರ್ಗ: ಮೇವು ಬ್ಯಾಂಕ್ ತೆರೆಯುವ ಬದಲು ಜಾನುವಾರುಗಳ ರಕ್ಷಣೆಗೆ ಗೋಶಾಲೆ ತೆರೆಯುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆ. 15ರೊಳಗೆ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳು ಸೇರಿದಂತೆ ಇತರೆ ಕಡೆಗಳಲ್ಲೂ ಗೋಶಾಲೆ ಆರಂಭಿಸಬೇಕು ಎಂದರು.
ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಗೋಶಾಲೆಗಳ ಬದಲಿಗೆ ಮೇವು ಬ್ಯಾಂಕ್ ಆರಂಭಿಸುವುದಾಗಿ ಸೋಮವಾರ ಸಭೆ ನಡೆಸಿ ತೀರ್ಮಾನಿಸಿದ್ದಕ್ಕೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮೇವು ಬ್ಯಾಂಕ್ ತೆರೆಯುವ ಜಿಲ್ಲಾಧಿಕಾರಿಗಳ ನಿರ್ಧಾರ ಸರಿಯಲ್ಲ. ಸತತ ಹತ್ತು ವರ್ಷಗಳಿಂದ ಜಿಲ್ಲೆಯಲ್ಲಿ ಬರ ಕಾಡುತ್ತಿದೆ. ಅದರಲ್ಲೂ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಜಾನುವಾರುಗಳ ರಕ್ಷಣೆ ಮಾಡಿಕೊಳ್ಳಲು ಮೇವಿನ ಅಗತ್ಯವಿದೆ. ಆದರೆ ಜಿಲ್ಲಾಧಿಕಾರಿಗಳು ಇಂದಿಗೂ ಗೋಶಾಲೆ ಆರಂಭಿಸಿಲ್ಲ. ಕಳೆದ ವರ್ಷ ಈ ಎರಡು ತಾಲೂಕುಗಳಲ್ಲಿ 12 ಗೋಶಾಲೆಗಳನ್ನು ತೆರೆದು ಜಾನುವಾರುಗಳ ರಕ್ಷಣೆ ಮಾಡಲಾಗಿತ್ತು. ಮೇವು ಬ್ಯಾಂಕ್ ತೆರೆಯಲು ನಾನು ಅವಕಾಶ ನೀಡುವುದಿಲ್ಲ, ಗೋಶಾಲೆಗಳನ್ನೇ ಆರಂಭಿಸಬೇಕು ಎಂದು ಪಟ್ಟು ಹಿಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಹಾಕಾರವಿದೆ. ಅದಕ್ಕಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ಎಂ. ಚಂದ್ರಪ್ಪ ಒತ್ತಾಯಿಸಿದರು.
ಕುಡಿಯುವ ನೀರಿಗೆ ಎಷ್ಟು ಹಣ ಬಂದಿದೆ, ಎಷ್ಟು ಖರ್ಚಾಗಿದೆ ಎನ್ನುವ ಯಾವುದೇ ಮಾಹಿತಿ ಜಿಪಂನಿಂದ ಸಿಗುತ್ತಿಲ್ಲ. ಸರ್ಕಾರದಿಂದ ಬಂದ ಹಣ ಖರ್ಚಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಸೂಕ್ತ ಮಾಹಿತಿ ನೀಡುವಂತೆ ಸಂಸದ ಬಿ.ಎನ್. ಚಂದ್ರಪ್ಪ ಅವರು ಜಿಪಂ ಸಿಇಒಗೆ ತಾಕೀತು ಮಾಡಿದರು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಕುಡಿಯುವ ನೀರಿಗೆ ಬಂದಿದ್ದು, 3 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 1.33 ಕೋಟಿ ರೂ. ಖರ್ಚಾಗಿದೆ ಎಂದು ಸಿಇಒ ರವೀಂದ್ರ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಂಸದರು, ಸರ್ಕಾರ ಕೊಟ್ಟಿರುವ ಹಣವನ್ನು ಬೇಗ ಖರ್ಚು ಮಾಡಿ ಬಳಕೆ ಪ್ರಮಾಣಪತ್ರ ನೀಡಬೇಕು. ಆಗ ಮತ್ತಷ್ಟು ಅನುದಾನ ಬಿಡುಗಡೆ ಮಾಡಿಸಲು ಅನುಕೂಲವಾಗಲಿದೆ ಎಂದರು. ಸಚಿವ ವೆಂಕಟರಮಣಪ್ಪ, ಕುಡಿಯುವ ನೀರಿಗಾಗಿ ಎಷ್ಟೇ ಹಣ ಖರ್ಚಾದರೂ ತೊಂದರೆಯಿಲ್ಲ. ಬಿಡುಗಡೆ ಮಾಡಿಸೋಣ ಹೆದರಬೇಡಿ ಎಂದು ಭರವಸೆ ನೀಡಿದರು.
ಶುದ್ಧ ನೀರಿನ ಘಟಕ ಆರಂಭಿಸಲು ಟೆಂಡರ್ ಪಡೆದು ಆರು ತಿಂಗಳು ಕಳೆದರೂ ಹೈದರಾಬಾದ್ ಮೂಲದ ಸ್ಮಾರ್ಟ್ ಆಕ್ವಾ ಸಂಸ್ಥೆ ಇಂದಿಗೂ ಆರ್ಒ ಘಟಕ ಸ್ಥಾಪಿಸಿಲ್ಲ. ಆ ಸಂಸ್ಥೆ ಮೇಲೆ ಯಾಕೆ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ ಎಂದು ಶಾಸಕ ಚಂದ್ರಪ್ಪ ಸೇರಿದಂತೆ ಜಿಲ್ಲೆಯ ಬಹುತೇಕ ಶಾಸಕರು ಜಿಪಂ ಸಿಇಒಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಮಾರ್ಟ್ ಆಕ್ವಾ ಸಂಸ್ಥೆಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು ಉತ್ತರ ನೀಡುತ್ತಿಲ್ಲ. ಹಲವಾರು ಬಾರಿ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ವಿಳಾಸ ಸರಿಯಾಗಿಲ್ಲ ಎಂದು ಸಿಇಒ ಅಸಹಾಯಕತೆ ವ್ಯಕ್ತಪಡಿಸಿದರು.
ಇಡೀ ಜಿಪಂನಲ್ಲಿ ನಾವು ಏನೇ ಪ್ರಶ್ನೆ ಮಾಡಿದರೂ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ, ಶಿಸ್ತುಕ್ರಮ ಜರುಗಿಸಲಾಗುತ್ತದೆ ಎನ್ನುವ ಸಬೂಬು ಉತ್ತರಗಳಿಂದ ಏನೂ ಪ್ರಯೋಜನವಿಲ್ಲ. ಸಂಸ್ಥೆ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ ಪೊಲೀಸ್ ದೂರು ನೀಡುವಂತೆ ಜಿಪಂನ ಬಿಜೆಪಿ ಸದಸ್ಯರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎಷ್ಟು ಪಾಲಿಹೌಸ್, ಶೇಡ್ನಟ್ಗಳಿವೆ ಎಂಬ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ಕೊಡುವಂತೆ ಒತ್ತಾಯಿಸಿದ್ದರೂ ಏಕೆ ನೀಡಿಲ್ಲ ಎಂದು ಶಾಸಕ ಚಂದ್ರಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರನ್ನು ಪ್ರಶ್ನಿಸಿದರು. ಕೂಡಲೇ ತನಿಖೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೆರೆ, ಕಟ್ಟೆಗಳನ್ನು ಒತ್ತುವರಿ ಮಾಡಲಾಗಿದೆ. ಅದನ್ನು ತೆರವುಗೊಳಿಸಿ ಕೆರೆ ಅಂಗಳದಲ್ಲಿನ ಜಾಲಿ ಗಿಡ ತೆಗೆದು ಹೂಳೆತ್ತುವ ಕಾರ್ಯ ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒಗೆ ತಿಳಿಸಿದರು.
ನೂರು ಕೋಟಿ ರೂ.ಗಿಂತ ಅಧಿಕ ಹಣ ನರೇಗಾ ಅಡಿ ಬಾಕಿ ಇದೆ. ಕೂಲಿ ನೀಡದೆ ಕೆಲಸಕ್ಕೆ ಯಾರು ಬರುತ್ತಾರೆ, ಎಲ್ಲಿಯೂ ಕೆಲಸ ನಡೆಯುತ್ತಿಲ್ಲ ಎಂದು ಶಾಸಕರಾದ ರಘುಮೂರ್ತಿ, ತಿಪ್ಪಾರೆಡ್ಡಿ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಬಿ.ಎನ್. ಚಂದ್ರಪ್ಪ, ಕೇಂದ್ರ ಸರ್ಕಾರ 1200 ಕೋಟಿ ರೂ. ನರೇಗಾ ಬಾಕಿ ಹಣ ಬಿಡುಗಡೆ ಮಾಡಬೇಕಿದೆ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಶಾಸಕರಾದ ಬಿ. ಶ್ರೀರಾಮುಲು, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್, ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಜಯಮ್ಮ ಬಾಲರಾಜ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಎಸ್ಪಿ ಡಾ| ಕೆ. ಅರುಣ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?