ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಂದ ಧ್ವಜಾರೋಹಣ
Team Udayavani, Aug 15, 2019, 11:42 AM IST
ಚಿತ್ರದುರ್ಗ: ಎಸ್.ಜೆ.ಎಂ. ಸಮೂಹ ಸಂಸ್ಥೆಗಳು ಆಯೋಜಿಸಿದ್ದ 73 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುರುಘಾ ಮಠದ ಡಾ.ಶ್ರೀ. ಶಿವಮೂರ್ತಿ ಮುರುಘಾ ಶರಣರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ನಾವೆಲ್ಲಾ ನಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕು ಎಂದರು.
ಶಿಸ್ತು, ಸಂತೋಷದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸೋಣ. ಸ್ವಾಭಿಮಾನ ಇಂದಿನ ಅಗತ್ಯ. ಅದನ್ನು ಉಳಿಸಿಕೊಳ್ಳಬೇಕು. ಸಮಾಜದಲ್ಲಿ ಸ್ವಾರ್ಥ ತುಂಬಿ ತುಳುಕುತ್ತಿದೆ. ಇದು ನಿವಾರಣೆಯಾಗಿ, ಮಾನವೀಯತೆ ಮನೆ ಮಾಡಬೇಕು ಎಂದು ಹೇಳಿದರು. ದೇಶದ ಸಂವಿಧಾನ, ಕಾನೂನನ್ನು ನಿಷ್ಠೆಯಿಂದ ಪಾಲಿಸಬೇಕು. ಸಾಮಾಜಿಕವಾಗಿ, ಸಾಂಸ್ಥಿಕವಾಗಿ ಹಾಗೂ ಸಮಾಜದಲ್ಲಿ ನಮಗಿರುವ ಜವಾಬ್ದಾರಿ ಅರಿತು ನಡೆದುಕೊಳ್ಳೋಣ. ಮಹಾತ್ಮ ಗಾಂಧಿಜಿ ಹಾಗೂ ಇತರೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ಬಂದ ಸ್ವಾತಂತ್ರ್ಯವನ್ನು ನಾವು ಅನುಭವಿಸುತ್ತಿದ್ದೇವೆ ಎಂದರು.
ಜಿಲ್ಲಾಧಿಕಾರಿ ಧ್ವಜಾರೋಹಣ: ಮುರುಘರಾಜೇಂದ್ರ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಧ್ವಜಾರೋಹಣ ಮಾಡಿದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಸಂಸದ ನಾರಾಯಣಸ್ವಾಮಿ ಭಾಗವಹಿಸಿದ್ದರು.