ಸಿದ್ದು ವಿರುದ್ಧ ಕೋಲಾರದಲ್ಲಿ ಸ್ಪರ್ಧೆಗೆ ಸಿದ್ಧ: ನಾರಾಯಣಸ್ವಾಮಿ
Team Udayavani, Nov 25, 2022, 7:45 PM IST
ಕೊಂಡ್ಲಹಳ್ಳಿ: 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ ಅಲೆಮಾರಿ ರೀತಿ ವರುಣಾ, ಬಾದಾಮಿ, ಕೋಲಾರ, ಚಾಮರಾಜಪೇಟೆ, ಹೆಬ್ಬಾಳ ಹೀಗೆ ಕ್ಷೇತ್ರ ಹುಡುಕುತ್ತಾ ಅಲೆದಾಡುತ್ತಿದ್ದಾರೆ. ಅವರು ಕೋಲಾರದಲ್ಲಿ ಸ್ಪರ್ಧಿಸಿದರೆ ನಾನೇ ಅವರ ವಿರುದ್ಧ ಸ್ಪರ್ಧಿಸಿ ಸೋಲಿಸುತ್ತೇನೆಂದು ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ನೆಲೆಯಿಲ್ಲದ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಕನಸು ನನಸಾಗಲ್ಲ. ರಾಜ್ಯದಲ್ಲಿ ಎಲ್ಲೇ ಸ್ಪ ರ್ಧಿಸಿದರೂ ಈ ಬಾರಿ ಸೋಲು ಖಚಿತ.
ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪರಸ್ಪರ ಕಾಲೆಳೆಯುತ್ತಿದ್ದಾರೆ.
ಅಭಿವೃದ್ಧಿಯೇ ಮೂಲಮಂತ್ರ ಎಂಬ ಧ್ಯೇಯದಡಿ ಕೆಲಸ ಮಾಡುತ್ತಿರುವ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ರಮೇಶ್ ಜಾರಕಿಹೊಳಿ ಬಿಜೆಪಿ ಬಿಡಲ್ಲ. ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲಾಗುವುದು. ಬಿಜೆಪಿ ಜನಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ಜನ ಅಭಿವೃದ್ಧಿ ಪರವಾಗಿದ್ದಾರೆ ಎಂಬುದಕ್ಕೆ ಸಾಕ್ಷಿ.
ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಯಾರಿಂದಲೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದರು.