ಪ್ರೋತ್ಸಾಹಧನ ಪಾವತಿಗೆ ರಾಜ್ಯ ಸರ್ಕಾರದ ಮೀನಮೇಷ
ಒಂಭತ್ತು ತಿಂಗಳುಗಳಿಂದ ಪ್ರೋತ್ಸಾಹಧನ ನೀಡದೇ ಇರುವುದರಿಂದ ಸಂಕಷ್ಟ: ಆಶಾ ಕಾರ್ಯಕರ್ತೆಯರ ಆರೋಪ
Team Udayavani, Jul 9, 2019, 10:40 AM IST
ಚಿತ್ರದುರ್ಗ: ಆಶಾ ಕಾರ್ಯಕರ್ತೆಯರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗ: ಪ್ರೋತ್ಸಾಹಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಒನಕೆ ಓಬವ್ವ ವೃತ್ತದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಹನ್ನೆರಡು ಸಾವಿರ ರೂ. ವೇತನ ನಿಗದಿ ಮಾಡುವುದು ಸೇರಿದಂತೆ ಇತರೆ ಹದಿಮೂರು ಬೇಡಿಕೆಗಳನ್ನು ಈಡೇರಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಸರ್ಕಾರ ಎಂಸಿಟಿಎಸ್ ಪ್ರೋತ್ಸಾಹಧನ ನೀಡದೆ ಸತಾಯಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಮಾಸಿಕ ಕನಿಷ್ಠ ಗೌರವಧನವನ್ನು 12 ಸಾವಿರ ರೂ. ನಿಗದಿಪಡಿಸಬೇಕು. ಆಶಾ ಸಾಫ್ಟ್ ಅಥವಾ ಆರ್ಸಿಎಚ್ ಪೋರ್ಟಲ್ಗೆ ಆಶಾ ಪ್ರೋತ್ಸಾಹಧನ ಜೋಡಣೆಯನ್ನು ರದ್ದುಪಡಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಬಾಕಿ ಇರುವ ಎಂಸಿಟಿಎಸ್ ಸೇವೆಗಳ ಆಶಾ ಪ್ರೋತ್ಸಾಹಧನವನ್ನು ಒಂದು ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿ ಆಶಾ ಕಾರ್ಯಕರ್ತೆಗೆ ಮಾಸಿಕ ಮೂರು ಸಾವಿರ ರೂ. ನೀಡಬೇಕು. ಇದನ್ನು ಜನಸಂಖ್ಯೆಗನುಗುಣವಾಗಿ ಹೆಚ್ಚಿಸಬೇಕು. ಇಲ್ಲವೇ ಒಂಭತ್ತು ತಿಂಗಳುಗಳಲ್ಲಿ ಆಶಾ ಕಾರ್ಯಕರ್ತೆಯರು ಮಾಡಿರುವ ಸಾಧನೆಯ ಮ್ಯಾನುವಲ್ ವರದಿ ಸಂಗ್ರಹಿಸಿ ಪ್ರೋತ್ಸಾಹಧನವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಗಿರಿಜಮ್ಮ ಮಾತನಾಡಿ, ಆಶಾ ಕಾರ್ಯಕರ್ತೆಯರು ಜೀವನ ಭದ್ರತೆಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸಕ್ಕೆ ತಕ್ಕಂತೆ ಸರ್ಕಾರ ಗೌರವಧನ ನೀಡದೆ ಪುಕ್ಕಟೆಯಾಗಿ ದುಡಿಸಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಜು. 18 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ನಗರ ಮತ್ತು ಹಳ್ಳಿಗಳಲ್ಲಿ ಗರ್ಭಿಣಿಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆ ಅರಿವು ಮೂಡಿಸುತ್ತಿದ್ದೇವೆ. ಕ್ಷಯ, ಕುಷ್ಠರೋಗ, ಮಲೇರಿಯಾ, ಡೆಂಘೀ, ಚಿಕೂನ್ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಎಐಯುಟಿಯುಸಿ ಜಿಲ್ಲಾ ಸಂಚಾಲಕ ಎಚ್. ರವಿಕುಮಾರ್, ಜಿಲ್ಲಾ ಕಾರ್ಯದರ್ಶಿ ಮಮತಾ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ