ಮುಂಜಾಗ್ರತಾ ಕ್ರಮ ಅನುಸರಿಸಿ ಚಿಕಿತ್ಸೆ ಕೊಡಿ: ಡಾ| ಪಾಲಾಕ್ಷ
Team Udayavani, Jul 13, 2020, 3:49 PM IST
ಮೊಳಕಾಲ್ಮೂರು: ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಮುಂಜಾಗ್ರತಾ ಕ್ರಮ ಅನುಸರಿಸಿ ಕೋವಿಡ್-19ಗೆ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಹೇಳಿದರು.
ತಾಲೂಕಿನ ರಾಂಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ 7 ಕೋವಿಡ್ ಪ್ರಕರಣದಲ್ಲಿ 3 ಪ್ರಕರಣಗಳಲ್ಲಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದ ಇಬ್ಬರು ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 3 ಪ್ರಕರಣಗಳಲ್ಲಿ ಚಿತ್ರದುರ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳಾದ ವಿದ್ಯುತ್, ನೀರು, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಇತ್ಯಾದಿ ಸೌಲಭ್ಯಗಳನ್ನು ಇಟ್ಟುಕೊಂಡು ಕಾರ್ಯನಿರ್ವಹಿಸಬೇಕೆಂದರು.
ತಾಲೂಕು ಕೋವಿಡ್ ನೋಡಲ್ ಅಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ವೈದ್ಯರು, ಸಿಬ್ಬಂದಿ ಮತ್ತು ಜನರು ಕೋವಿಡ್ ಬಗ್ಗೆ ಆತಂಕ ಭಯ ಪಡದೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಬೇಕು. ಸೋಪಿನಿಂದ ಕೈತೊಳೆದುಕೊಳ್ಳಬೇಕು. ಕೈಗಳಿಂದ ಬಾಯಿ , ಮೂಗು ಮತ್ತು ಕಣ್ಣುಗಳನ್ನು ಪದೇ ಪದೇ ಮುಟ್ಟಿಕೊಳ್ಳಬಾರದು ಎಂದರು. ತಜ್ಞ ವೈದ್ಯ ಡಾ| ಬಸವರಾಜ್, ವೈದ್ಯರಾದ ಡಾ| ಮಧುಕುಮಾರ್, ಡಾ| ರಮೇಶ್ಕುಮಾರ್, ಡಾ| ಚನ್ನಬಸವರಾಜು, ಸಿಬ್ಬಂದಿ ಪ್ರವೀಣ್ ಹಾಗೂ ಆರೋಗ್ಯ ಸಹಾಯಕರು ಇದ್ದರು.