ನೀರಿನ ಸಮಸ್ಯೆ ಎದುರಾಗದಂತೆ ಕ್ರಮ : ಜಿಲ್ಲಾಧಿಕಾರಿ ಸೂಚನೆ
Team Udayavani, Apr 8, 2022, 6:35 AM IST
ಮಂಗಳೂರು: ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲೆಯ ತಾಲೂಕುಗಳಲ್ಲಿರುವ ಟಾಸ್ಕ್ ಪೋರ್ಸ್ ಸಮಿತಿ ಕಾಲ ಕಾಲಕ್ಕೆ ಸಭೆ ನಡೆಸಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ| ಕೆ.ವಿ.ರಾಜೇಂದ್ರ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಇದುವರೆಗೆ ಕಂಡುಬಂದಿಲ್ಲ. ಮುಂದೆಯೂ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರವಹಿಸಬೇಕು ಎಂದರು.
ಆಸ್ಪತ್ರೆಗಳಲ್ಲಿ ಅವಘಡಗಳು ಸಂಭವಿಸಿದಾಗ ತತ್ಕ್ಷಣ ಪ್ರತಿಕ್ರಿಯಿಸಬೇಕು, ಅದಕ್ಕೆ ಪೂರ್ವಭಾವಿಯಾಗಿ ಅಣುಕು ಪ್ರದರ್ಶನಗಳನ್ನು ಮಾಡಬೇಕು, ಕಟ್ಟಡಗಳಲ್ಲಿ ಕೆಲಸ ಮಾಡುವಾಗ ಯಾವುದೇ ಅವಘಡ ಸಂಭವಿಸಿದಂತೆ ಸಂಬಂಧಿಸಿದವರು ಎಚ್ಚರ ವಹಿಸಬೇಕು ಎಂದರು. ಎಂಆರ್ಪಿಎಲ್ ಹಾಗೂ ಎಂಸಿಎಫ್ನಂತಹ ಕಾರ್ಖಾನೆಗಳು ಅನಿಲ ಸೋರಿಕೆಯಾಗದಂತೆ ಜಾಗ್ರತೆ ವಹಿಸುವುದರೊಂದಿಗೆ ಅಣಕು ಪ್ರದರ್ಶನವನ್ನು ನಡೆಸಲು ಕ್ರಮ ಕೈಗೊಳ್ಳಬೇಕು ಎಂದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಎಡಿಸಿ ಡಾ| ಕೃಷ್ಣಮೂರ್ತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.