ದೈಹಿಕ ಹಿಂಸೆ, ಜೀವ ಬೆದರಿಕೆ; ಆರೋಪಿ ದೋಷಮುಕ್ತ
Team Udayavani, May 4, 2022, 7:16 PM IST
ಸುಳ್ಯ: ಪತ್ನಿಗೆ ಮಾನಸಿಕ, ದೈಹಿಕ ಹಿಂಸೆ ಜತೆಗೆ ಜೀವ ಬೆದರಿಕೆ ಒಡ್ಡಿದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶಿಸಿದೆ.
ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ 2016ರ ಡಿ. 16ರಂದು ಇಸ್ಮಾಯಿಲ್ ಜಬುಯಿಲ್ಲ ಎಂಬಾತನು ಪತ್ನಿಗೆ ಮಾನಸಿಕ, ದೈಹಿಕವಾಗಿ ಹಿಂಸೆ ನೀಡುವುದರ ಜತೆಗೆ ಪೊಲೀಸರಿಗೆ ದೂರು ನೀಡಿದರೆ ಪತ್ನಿ ಮತ್ತು ಮಕ್ಕಳನ್ನು ಕೊಲ್ಲುತ್ತೇನೆ ಎಂದು ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಬಳಿಕ ಸುಳ್ಯ ಪೊಲೀಸರು ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ನೀಡಿದ್ದರು. ತನಿಖೆ ನಡೆಸಿದ ಸುಳ್ಯದ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಎ. ಸೋಮಶೇಖರ್ ಅವರು ಆರೋಪಿಗಳ ವಿರುದ್ಧ ಅಭಿಯೋಜನೆಯು ಮಾಡಿರುವ ಆರೋಪವನ್ನು ಸಾಬೀತುಪಡಿಸಲು ಅಭಿಯೋಜನೆ ವಿಫಲವಾಗಿದೆ ಎಂಬ ಕಾರಣವನ್ನು ನೀಡಿ ಆರೋಪಿಯನ್ನು ಎ. 30 ರಂದು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.
ಆರೋಪಿ ಪರವಾಗಿ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಹಾಗೂ ಮನೋಜ್ ಅವರು ವಕಾಲತ್ತು ವಹಿಸಿದ್ದರು.