ಸಂಸ್ಕೃತಿ ಉಳಿಸುವ ರತ್ನೋತ್ಸವ ಶ್ಲಾಘನೀಯ: ಎ.ಸಿ. ಭಂಡಾರಿ
Team Udayavani, Dec 30, 2017, 11:22 AM IST
ದೇರಳಕಟ್ಟೆ: ನಮ್ಮ ಸಂಸ್ಕೃತಿ, ಕೃಷಿ ಪರಂಪರೆಯನ್ನು ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರತ್ನೋತ್ಸವದಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡು ನುಡಿ ವೈಭವದ ರತ್ನೋತ್ಸವ- 2017 ಕರಾವಳಿ ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಸಮ್ಮೇಳನದ ಅಧ್ಯಕ್ಷ ಪತ್ರಕರ್ತ ಮಲಾರ್ ಜಯರಾಮ್ ರೈ, ಕೋಟೆಕಾರು ಶ್ರೀ ಶಂಕರ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ. ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಮುಸ್ತಫಾ ಮಲಾರ್, ಸುರತ್ಕಲ್ ನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಕೊರಗಪ್ಪ ಶೆಟ್ಟಿ ಹರೇಕಳ, ರತ್ನಾವತಿ ಕೊರಗಪ್ಪ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹರೇಕಳ, ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಶಾಲಾ ಮುಖ್ಯ ಶಿಕ್ಷಕಿ ನಯೀಮ್ ಹಮೀದ್ ಹಾಗೂ ವಿದ್ಯಾರ್ಥಿ ನಾಯಕ ಶ್ರೇಯಸ್ ಉಪಸ್ಥಿತರಿದ್ದರು.
ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಮೆರವಣಿಗೆಗೆ ಚಾಲನೆ ನೀಡಿದರು.
ದೇರಳಕಟ್ಟೆ ರತ್ನ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ರತ್ನಾವತಿ ಕೆ. ಶೆಟ್ಟಿ ಧ್ವಜಾರೋಹಣ ಗೈದರು. ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಸ್ವಾಗತಿಸಿದರು. ವಿದ್ಯಾರತ್ನ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ ವಂದಿಸಿದರು. ರವೀಶ್, ನವೀನ್ ಕಾರ್ಯಕ್ರಮ ನಿರ್ವಹಿಸಿದರು.
ತುಳು ಭಾಷೆಯ ಸುವರ್ಣ ಯುಗ
ತುಳು ಭಾಷೆಯ ಸುವರ್ಣ ಯುಗ ಪ್ರಾರಂಭಗೊಂಡಿದ್ದು ಎಲ್ಲ ಕಡೆ ತುಳುವಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯುತ್ತಿದೆ. ಪಂಚದ್ರಾವಿಡ ಭಾಷೆಯಲ್ಲಿ ತುಳು ಭಾಷೆ ಒಂದಾಗಿದ್ದು ನಮ್ಮವರ ಅಸಡ್ಡೆಗಳಿಂದ ತುಳು ಭಾಷೆ ಹಿಂದೆ ಬಿದ್ದಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಂತಹ ಶಿಕ್ಷಣ ಸಂಸ್ಥೆಗಳು ಇಂತಹ ಮೌಲ್ಯಾಧಾರಿತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ.
– ಎ. ಸಿ. ಭಂಡಾರಿ, ಅಧ್ಯಕ್ಷ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ