ಕೃಷಿಕ್ಷೇತ್ರ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹೆಚ್ಚಿಸುತ್ತಿದೆ
Team Udayavani, Jul 26, 2018, 10:10 AM IST
ಹರೇಕಳ : ವಿದ್ಯಾರ್ಥಿಗಳಲ್ಲಿ ಭತ್ತದ ಕೃಷಿಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಹರೇಕಳ ಗ್ರಾಮದ ಉಳಿದೊಟ್ಟು ಬಳಿ ಕರ್ಮಿ ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಕಾರ್ಯವನ್ನು ಶಾಲಾ ಆಡಳಿತ ಮಂಡಳಿ ನಡೆಸಿಕೊಟ್ಟಿದ್ದು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಭತ್ತದ ನೇಜಿ ನಾಟಿ ಮಾಡಿದರು.
ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ವಿದ್ಯಾರ್ಥಿಗಳಿಗೆ ಕೃಷಿಕನ ಕಷ್ಟದ ಜೀವನ ಮನದಟ್ಟು ಆಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಕಳೆದೆರಡು ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದರು.
ಗದ್ದೆಯ ಮಾಲಕ ಕೊರಗಪ್ಪ ಉಳಿದೊಟ್ಟು ಮಾತನಾಡಿ, ವಿದ್ಯಾರ್ಥಿಗಳ ಕೆಲಸ ಶ್ಲಾಘನೀಯವಾಗಿದ್ದು ರೈತರ ಕೃಷಿ ಚಟುವಟಿಕೆಯನ್ನು ಪ್ರತ್ಯಕ್ಷವಾಗಿ ತಿಳಿಯಲು ಇಂತಹ ಕಾರ್ಯಕ್ರಮಗಳು ಪೂರಕ ಎಂದರು. ಸ್ಥಳೀಯ ರೈತ ಶೇಖರ ಗಟ್ಟಿ ಬೈತಾರ್ ಮಾತನಾಡಿ, ವಿದ್ಯಾರ್ಥಿಗಳನ್ನು ಶಾಲಾ ಪಠ್ಯಪುಸ್ತಕಕ್ಕೆ ಮಾತ್ರ ಅವಲಂಬಿಸುವಂತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೇರೇಪಿಸಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕಿ ನಯೀಮ್ ಹಮೀದ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕೃಷಿ ಕಾರ್ಯದಲ್ಲಿ ಭಾಗವಹಿಸಿದ್ದರು.